ADVERTISEMENT

ಖಾರದ ಪುಡಿ ಎರಚಿ ಸರಗಳವು: ಬಂಧನ

​ಪ್ರಜಾವಾಣಿ ವಾರ್ತೆ
Published 20 ಮಾರ್ಚ್ 2021, 18:51 IST
Last Updated 20 ಮಾರ್ಚ್ 2021, 18:51 IST

ಬೆಂಗಳೂರು: ಮಹಿಳೆಯ ಕಣ್ಣಿಗೆ ಖಾರದ ಪುಡಿ ಎರಚಿ, ಚಿನ್ನದ ಸರ ಕಸಿದು ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಅಮೃತಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಸೈಯದ್ ಇರ್ಫಾನ್ (37) ಹಾಗೂ ನೂರುಲ್ಲಾ (30) ಬಂಧಿತರು.

ಮಾ.18ರ ರಾತ್ರಿ ಜಕ್ಕೂರು ಬಳಿ ಒಂಟಿಯಾಗಿ ನಡೆದುಕೊಂಡು ಹೋಗುತ್ತಿದ್ದ ರೇಖಾ ಅವರಿಗೆ ಆರೋಪಿಗಳು ಖಾರದ ಪುಡಿ ಎರಚಿ, ಚಿನ್ನದ ಸರ ಕದ್ದಿದ್ದರು. ಈ ಸಂಬಂಧ ಮಹಿಳೆ ಪೊಲೀಸರಿಗೆ ದೂರು ನೀಡಿದ್ದರು.

ADVERTISEMENT

‘ಒಂಟಿಯಾಗಿ ಸಂಚರಿಸುವ ಮಹಿಳೆಯರನ್ನು ಹಿಂಬಾಲಿಸಿ ಆರೋಪಿಗಳು ಕೃತ್ಯ ಎಸಗುತ್ತಿದ್ದರು. ಆರೋಪಿಗಳ ವಿರುದ್ಧ ಸರ ಅಪಹರಣ ಪ್ರಕರಣ ದಾಖಲಾಗಿದೆ.ಆರೋಪಿಗಳಿಂದ ₹4 ಲಕ್ಷ ಬೆಲೆಬಾಳುವ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ’ ಎಂದು ಪೊಲೀಸರು ತಿಳಿಸಿದರು.

ನೇಪಾಳದ ಮೂವರ ಬಂಧನ: ಮನೆಯ ಬೀಗ ಮುರಿದು ಚಿನ್ನಾಭರಣ ಕದ್ದಿದ್ದ ಮೂವರು ಆರೋಪಿಗಳನ್ನು ಅಮೃತಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ನೇಪಾಳದ ಪ್ರಕಾಶ ಶಾಹಿ (23), ಉದಯ್ ಕುಮಾರ್ (39) ಹಾಗೂ ರೋಷನ್ ಬಿಷ್ಠಾ (48) ಬಂಧಿತರು. ಆರೋಪಿಗಳಿಂದ ₹13 ಲಕ್ಷ ಮೌಲ್ಯದ ಚಿನ್ನಾಭರಣ ಜಪ್ತಿ ಮಾಡಲಾಗಿದೆ.

ಇವರು ಕಾವಲುಗಾರರಾಗಿ ನಗರದ ಹಲವೆಡೆ ಕೆಲಸ ಮಾಡಿಕೊಂಡಿದ್ದರು. ರಾತ್ರಿ ವೇಳೆ ಬೀಗ ಹಾಕಿರುವ ಮನೆಗಳಲ್ಲಿ ಬಾಗಿಲು ಮುರಿದು ಕಳ್ಳತನ ಮಾಡುತ್ತಿದ್ದರು. ಮಾ.13ರಂದು ಠಾಣಾ ವ್ಯಾಪ್ತಿಯ ಮನೆಯೊಂದರಲ್ಲಿ ಬೀಗ ಮುರಿದು 400 ಗ್ರಾಂಗಳಷ್ಟು ಚಿನ್ನಾಭರಣ ಕದ್ದಿದ್ದರು. ಈ ಸಂಬಂಧ ಮನೆಯ ಮಾಲೀಕರು ಪೊಲೀಸರಿಗೆ ದೂರು ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.