ADVERTISEMENT

ಕಿಟಕಿಯಲ್ಲಿ ಕೈಹಾಕಿ ಕಳವು; ಆರೋಪಿ ಬಂಧನ

​ಪ್ರಜಾವಾಣಿ ವಾರ್ತೆ
Published 18 ಮಾರ್ಚ್ 2021, 16:59 IST
Last Updated 18 ಮಾರ್ಚ್ 2021, 16:59 IST

ಬೆಂಗಳೂರು: ಮನೆಯ ಕಿಟಕಿಯಲ್ಲಿ ಕೈ ಹಾಕಿ ಮಹಿಳೆಯರ ಸರ ಹಾಗೂ ಮನೆಯಲ್ಲಿರುವ ಬೆಲೆಬಾಳುವ ವಸ್ತುಗಳನ್ನು ಕಳವು ಮಾಡುತ್ತಿದ್ದ ಆರೋಪಿ ನಾರಾಯಣಸ್ವಾಮಿ ಅಲಿಯಾಸ್ ಗೂದೇರಾಮ್ (34) ಎಂಬಾತನನ್ನು ಎಲೆಕ್ಟ್ರಾನಿಕ್ ಸಿಟಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

‘ಆನೇಕಲ್ ನಿವಾಸಿ ನಾರಾಯಣಸ್ವಾಮಿ, ಹಲವು ದಿನಗಳಿಂದ ಕೃತ್ಯ ಎಸಗುತ್ತಿದ್ದ. ಆತನಿಂದ ₹ 3 ಲಕ್ಷ ಮೌಲ್ಯದ ಚಿನ್ನಾಭರಣ, ಬೆಳ್ಳಿ ವಸ್ತು ಹಾಗೂ ಲ್ಯಾಪ್‌ಟಾಪ್ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.

‘2011ರಲ್ಲಿ ಕಳ್ಳತನ ಪ್ರಕರಣದಲ್ಲಿ ಬಂಧಿತನಾಗಿ ಜೈಲು ಸೇರಿದ್ದ ಆರೋಪಿ, ಇತ್ತೀಚೆಗಷ್ಟೇ ಜಾಮೀನು ಮೇಲೆ ಹೊರಬಂದಿದ್ದ. ಪುನಃ ಅಪರಾಧ ಕೃತ್ಯದಲ್ಲಿ ತೊಡಗಿಸಿಕೊಂಡಿದ್ದ. ರಾತ್ರಿ ವೇಳೆ ಮನೆಗಳ ಬಳಿ ಹೋಗುತ್ತಿದ್ದ ಆರೋಪಿಗಳು, ಕಿಟಕಿ ಬಳಿ ಮಲಗುತ್ತಿದ್ದ ಮಹಿಳೆಯರ ಸರ ಕಳವು ಮಾಡುತ್ತಿದ್ದ. ಈತನ ಕೃತ್ಯದ ಬಗ್ಗೆ ಸ್ಥಳೀಯ ನಿವಾಸಿಯೊಬ್ಬರು ದೂರು ನೀಡಿದ್ದರು’ ಎಂದೂ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.