ರಾಜರಾಜೇಶ್ವರಿನಗರ: ‘ರಾಜ್ಯದಲ್ಲಿಯೇ ಚಿಕ್ಕನಹಳ್ಳಿ ಗ್ರಾಮ ಪಂಚಾಯಿತಿಯು ಕೋವಿಡ್ ನಿರ್ವಹಣೆಯಲ್ಲಿ ಮಾದರಿ ಕಾರ್ಯ ಮಾಡುತ್ತಿದೆ’ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಶ್ಲಾಘಿಸಿದರು.
ಚಿಕ್ಕನಹಳ್ಳಿ ಗ್ರಾಮ ಪಂಚಾಯಿತಿ ವತಿಯಿಂದ ನಾಗರಿಕರಿಗೆ ದಿನಸಿ ಕಿಟ್ ಮತ್ತು ಕೋವಿಡ್ನಿಂದ ಮೃತಪಟ್ಟವರ ಕುಟುಂಬಗಳಿಗೆ ತಲಾ ₹10 ಸಾವಿರ ಪರಿಹಾರ ವಿತರಿಸಿ ಮಾತನಾಡಿದ ಅವರು, ‘ಪಂಚಾಯಿತಿಯು ಅಂಗವಿಕಲರಿಗೆ ₹10 ಸಾವಿರ, ಆಶಾ ಕಾರ್ಯಕರ್ತರಿಗೆ ₹5 ಸಾವಿರ, ಅಂಗನವಾಡಿ ಕಾರ್ಯಕರ್ತೆಯರು, ಆಸ್ಪತ್ರೆ ಸಿಬ್ಬಂದಿ, ಆಂಬುಲೆನ್ಸ್ ಚಾಲಕರು ಮತ್ತು ಸಹಾಯಕರಿಗೆ ತಲಾ ₹3 ಸಾವಿರ ಸಹಾಯಧನ ಮತ್ತು ಸಾನಿಟೈಸರ್, ಮಾಸ್ಕ್, ವೈದ್ಯಕೀಯ ಕಿಟ್ ವಿತರಿಸುತ್ತಿರುವುದು ಶ್ಲಾಘನೀಯ’ ಎಂದರು.
‘ಗ್ರಾಮ ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಸೇರಿದಂತೆ ಸರ್ಕಾರದ ವಿವಿಧ ಇಲಾಖೆಗಳ ವತಿಯಿಂದಲೂ ಗ್ರಾಮೀಣ ಪ್ರದೇಶದ ಜನರಿಗೆ ಸಹಾಯಹಸ್ತ ಚಾಚುವ ಮೂಲಕ ನೋವಿನಲ್ಲಿರುವವರಿಗೆ ಸಹಾಯ ಮಾಡಬೇಕಾಗಿದೆ’ ಎಂದು ಹೇಳಿದರು.
ಚಿಕ್ಕನಹಳ್ಳಿ ಗ್ರಾಮಪಂಚಾಯಿತಿ ಅಧ್ಯಕ್ಷ ಸೂಲಿವಾರ ಬಿ. ಬಸವರಾಜು, ‘ಸಚಿವ ಎಸ್.ಟಿ.ಸೋಮಶೇಖರ್ ಅವರು ವಿವಿಧ ರೀತಿಯಲ್ಲಿ ವೈಯಕ್ತಿಕವಾಗಿ ಎಲ್ಲ ರೀತಿಯ ಸಹಾಯ ಮಾಡುತ್ತಿದ್ದಾರೆ. ಗ್ರಾಮ ಪಂಚಾಯಿತಿಯಿಂದಲೂ ನಾಗರಿಕರಿಗೆ ಸಹಾಯ ಮಾಡಬೇಕೆಂಬ ಉದ್ದೇಶದಿಂದ ಸದಸ್ಯರುಗಳೆಲ್ಲ ತೀರ್ಮಾನಿಸಿ ಈ ಕಾರ್ಯ ಹಮ್ಮಿಕೊಂಡಿದ್ದೇವೆ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.