ADVERTISEMENT

ಮಕ್ಕಳ ನಾಪತ್ತೆ: ವಿವರ ಸಲ್ಲಿಸಲು ಹೈಕೋರ್ಟ್‌ ನಿರ್ದೇಶನ

​ಪ್ರಜಾವಾಣಿ ವಾರ್ತೆ
Published 22 ಫೆಬ್ರುವರಿ 2022, 19:59 IST
Last Updated 22 ಫೆಬ್ರುವರಿ 2022, 19:59 IST
ಹೈಕೋರ್ಟ್‌
ಹೈಕೋರ್ಟ್‌   

ಬೆಂಗಳೂರು: ‘ಸರ್ಕಾರದ ಅಧೀನದಲ್ಲಿರುವ ಬಾಲಮಂದಿರಗಳಿಂದ ಕಣ್ಮರೆಯಾಗಿರುವ 141 ಮಕ್ಕಳನ್ನು ಪತ್ತೆ ಹಚ್ಚಲು ಕೈಗೊಂಡಿರುವ ತನಿಖೆಯ ಸಮಗ್ರ ವಿವರಗಳನ್ನು ಸಲ್ಲಿಸಿ’ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.

ಈ ಕುರಿತಂತೆ ಕೋಲಾರದ ಸಾಮಾಜಿಕ ಕಾರ್ಯಕರ್ತ ಕೆ.ಸಿ.ರಾಜಣ್ಣ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಗೃಹ ಇಲಾಖೆ ಸೇರಿದಂತೆ ಪ್ರಕರಣದ ಎಲ್ಲ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೆ ಆದೇಶಿಸಿದ ನ್ಯಾಯಪೀಠ, ವಿಚಾರಣೆಯನ್ನು ಮಾರ್ಚ್‌ 9ಕ್ಕೆ ಮುಂದೂಡಿದೆ.

ADVERTISEMENT

ಅರ್ಜಿದಾರರ ಪರ ವಕೀಲ ಎಸ್‌.ಉಮಾಪತಿ,‘ರಾಜ್ಯದಲ್ಲಿ ಸರ್ಕಾರದ ಅಧೀನದಲ್ಲಿರುವ ಬಾಲ ಮಂದಿರಗಳಿಂದ 2015–16ರಿಂದ 2021ರ ಅಕ್ಟೋಬರ್‌ವರೆಗಿನ ಅವಧಿಯಲ್ಲಿ ಒಟ್ಟು 420 ಮಕ್ಕಳು ನಾಪತ್ತೆಯಾಗಿದ್ದಾರೆ. ಈ ಕುರಿತು ಎಫ್‌ಐಆರ್‌ ಕೂಡಾ ದಾಖಲಾಗಿವೆ. ಇವರಲ್ಲಿ 141 ಮಕ್ಕಳು ಇನ್ನೂ ಪತ್ತೆಯಾಗಿಲ್ಲ. ಈ ಕುರಿತಂತೆಅರ್ಜಿದಾರರು ಮಾಹಿತಿ ಹಕ್ಕು ಕಾಯ್ದೆಯಡಿ ಮಹಿಳಾ ಮತ್ತು ಮಕ್ಕಳ ಇಲಾಖೆಯಿಂದ ಮಾಹಿತಿ ಪಡೆದಿದ್ದಾರೆ. ಈ ಪ್ರಕರಣದಲ್ಲಿ ಪೊಲೀಸರು ತನಿಖೆ ನಡೆಸಿಲ್ಲ ಎಂಬುದು ಗೊತ್ತಾಗಿದೆ’ ಎಂದು ಆಕ್ಷೇಪಿಸಿದರು.

‘ಬಾಲ ನ್ಯಾಯ ಕಾಯ್ದೆ ಪ್ರಕಾರ ಪ್ರತಿಯೊಂದು ಪೊಲೀಸ್ ಠಾಣೆಯಲ್ಲೂ ಮಕ್ಕಳ ನಾಪತ್ತೆ ಪ್ರಕರಣಗಳಿಗಾಗಿ ಪ್ರತ್ಯೇಕ ಪೊಲೀಸ್ ಘಟಕ ಇರಬೇಕು. ಆದರೆ, ರಾಜ್ಯದಲ್ಲಿ ಅಂತಹ ವ್ಯವಸ್ಥೆ ಇಲ್ಲ’ ಎಂಬುದು ಅರ್ಜಿದಾರರ ಆರೋಪ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.