ADVERTISEMENT

ಮಕ್ಕಳ ಮೇಲಿನ ದೌರ್ಜನ್ಯ ಕಡಿವಾಣ ಹಾಕಿ

ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶಶಿಧರ ಶೆಟ್ಟಿ

​ಪ್ರಜಾವಾಣಿ ವಾರ್ತೆ
Published 9 ಜನವರಿ 2026, 20:00 IST
Last Updated 9 ಜನವರಿ 2026, 20:00 IST
<div class="paragraphs"><p>ದೌರ್ಜನ್ಯ </p></div>

ದೌರ್ಜನ್ಯ

   

ಬೆಂಗಳೂರು: ಬಾಲ್ಯವಿವಾಹ, ಪೋಕ್ಸೊ, ಬಾಲಗರ್ಭಿಣಿ ಪ್ರಕರಣ, ಮಹಿಳೆಯರು‌ ಮತ್ತು‌ ಮಕ್ಕಳ ಮೇಲಿನ ದೌರ್ಜನ್ಯಕ್ಕೆ ಕಡಿವಾಣ ಹಾಕಬೇಕು. ಈ ಕುರಿತು ಪೊಲೀಸ್ ಇಲಾಖೆ ಸಹಕಾರದೊಂದಿಗೆ ಜಾಗೃತಿ ಮೂಡಿಸಬೇಕು ಎಂದು ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶಶಿಧರ ಶೆಟ್ಟಿ ಹೇಳಿದರು.

ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಚೈಲ್ಡ್‌ ಫಂಡ್ ಇಂಡಿಯಾ ಆಶ್ರಯದಲ್ಲಿ ಶುಕ್ರವಾರ ಆಯೋಜಿಸಿದ್ದ ಮಕ್ಕಳ ಆನ್‌ಲೈನ್ ಸುರಕ್ಷತೆ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

‘ಕೊಪ್ಪಳ ಜಿಲ್ಲೆಯಲ್ಲಿ ಸರ್ಕಾರಿ ವಸತಿ ನಿಲಯದಲ್ಲಿ ವಿದ್ಯಾರ್ಥಿನಿಯೊಬ್ಬರು ಮಗುವಿಗೆ ಜನ್ಮ ನೀಡಿದ್ದು ಇದು ಸಮಾಜ ತಲೆ ತಗ್ಗಿಸುವಂತಹ ಪ್ರಕರಣ. ಇದನ್ನೂ ಎಲ್ಲರೂ ಗಂಭೀರವಾಗಿ ತೆಗೆದುಕೊಳ್ಳಬೇಕು. ಜಿಲ್ಲಾ ಮಕ್ಕಳ ಸಂರಕ್ಷಣಾ ಇಲಾಖೆಯು ಇನ್ನಷ್ಟು ಚುರುಕಾಗಿ ಕೆಲಸ ಮಾಡಬೇಕು’ ಎಂದು ತಿಳಿಸಿದರು.

ADVERTISEMENT

ಬಾಲ್ಯವಿವಾಹ, ಅತ್ಯಾಚಾರ, ವರದಕ್ಷಿಣೆ ಪಿಡುಗು ನಿಯಂತ್ರಿಸಬೇಕು ಎಂದರಲ್ಲದೇ, ಮಹಿಳೆ ಮತ್ತು ಮಕ್ಕಳ ರಕ್ಷಣೆಗೆ ಸಂಬಂಧಿಸಿದಂತೆ ಪ್ರತ್ಯೇಕ ವೆಬ್‌ಸೈಟ್‌ ಆರಂಭಿಸುವಂತೆ ಸುಪ್ರೀಂಕೋರ್ಟ್ ಆದೇಶಿಸಿದೆ ಎಂದರು.

‘ಪೋಕ್ಸೊ, ಬಾಲಾಪರಾಧ ಪ್ರಕರಣಗಳಲ್ಲಿ ಶಿಕ್ಷೆ ಪ್ರಮಾಣ ಕಡಿಮೆಯಾಗಿದೆ. ಇಂತಹ ಪ್ರಕರಣಗಳಲ್ಲಿ ಪಾಲಕರು ರಾಜಿ ಆಗುವುದು ಸಾಮಾನ್ಯ. ಆದರೆ, ಈ ಕುರಿತು ಪಾಲಕರಿಗೆ ತಿಳಿವಳಿಕೆ ನೀಡಬೇಕು. ಸಂತ್ರಸ್ತರಿಗೆ ₹7 ಲಕ್ಷದಿಂದ ₹10 ಲಕ್ಷ ಪರಿಹಾರವನ್ನು ನೀಡುವ ಅವಕಾಶ ಕಾನೂನಿನಲ್ಲಿದೆ. ಆದ್ದರಿಂದ ಇದರ ಬಗ್ಗೆ ಹೆಚ್ಚು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

ಅಪರಾಧ ವಿಭಾಗದ ಎಡಿಜಿಪಿ ಹರಿಶೇಖರನ್‌ ಮಾತನಾಡಿ, ‘ಜಿಲ್ಲಾ ಮಕ್ಕಳ ಸಂರಕ್ಷಣಾ ಅಧಿಕಾರಿಗಳು ಪೊಲೀಸ್‌ ಇಲಾಖೆಯ ಸಹಕಾರ ಪಡೆದು ಮಕ್ಕಳು ಮತ್ತು ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ನಿಯಂತ್ರಿಸಬೇಕು. ಪೊಲೀಸರ ಬಗ್ಗೆ ಭಯಪಡುವುದು ಬೇಡ. ನಿಮ್ಮೊಂದಿಗೆ ಇಲಾಖೆ ಕೈಜೋಡಿಸಲಿದೆ. ಸ್ವಸ್ಥ ಸಮಾಜ ನಿರ್ಮಾಣಕ್ಕೆ ಎಲ್ಲರ ಸಹಭಾಗಿತ್ವ ಮುಖ್ಯ’ ಎಂದರು.

ಮಕ್ಕಳ ರಕ್ಷಣಾ ನಿರ್ದೇಶನಾಲಯದ ಡಾ. ಸ್ನೇಹಾ ಮಾತನಾಡಿದರು. ಈ ಸಂದರ್ಭದಲ್ಲಿ ಆಯೋಗದ ಅಧ್ಯಕ್ಷ ಶಶಿಧರ ಕೋಸುಂಬೆ, ಅಪರ್ಣಾ ಕೊಳ್ಳ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.