
ಹೈಕೋರ್ಟ್
ಬೆಂಗಳೂರು: ‘ಮಕ್ಕಳ ಭಿಕ್ಷಾಟನೆ ತಡೆದು ಅವರ ಪುನರ್ವಸತಿಗೆ ಸಮಗ್ರ ಕ್ರಿಯಾ ಯೋಜನೆ ರೂಪಿಸಲು ಸಂಬಂಧಿಸಿದ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸುವ ನಿಟ್ಟಿನಲ್ಲಿ ನೋಡಲ್ ಅಧಿಕಾರಿಯೊಬ್ಬರನ್ನು ನೇಮಕ ಮಾಡಿ’ ಎಂದು ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.
‘ಭಿಕ್ಷಾಟನೆಯಲ್ಲಿ ತೊಡಗಿರುವ ಮಕ್ಕಳನ್ನು ಗುರುತಿಸಿ, ಅವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಸರ್ಕಾರಕ್ಕೆ ನಿರ್ದೇಶಿಸಬೇಕು’ ಎಂದು ಕೋರಿ, ‘ಲೆಟ್ಸ್ ಕಿಟ್ ಫೌಂಡೇಷನ್’ ವ್ಯವಸ್ಥಾಪಕ ಟ್ರಸ್ಟಿ ಲಕ್ಷ್ಮಿ ಹೊಳ್ಳ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಹೆಚ್ಚುವರಿ ಅಡ್ವೊಕೇಟ್ ಜನರಲ್ ಪ್ರತಿಮಾ ಹೊನ್ನಾಪುರ ಅವರು, ಭಿಕ್ಷುಕರ ಸೆಸ್ ಸಂಗ್ರಹಣೆಗೆ ಸಂಬಂಧಿಸಿದಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಮುಖ್ಯ ಲೆಕ್ಕಾಧಿಕಾರಿಯವರ ಪ್ರಮಾಣ ಪತ್ರವನ್ನು ನ್ಯಾಯಪೀಠಕ್ಕೆ ಸಲ್ಲಿಸಿದರು.
‘ಜಿಬಿಎ ವ್ಯಾಪ್ತಿಯಲ್ಲಿ 2024-25ರಲ್ಲಿ ₹86.26 ಕೋಟಿ ಭಿಕ್ಷುಕರ ಸೆಸ್ ಸಂಗ್ರಹ ಮಾಡಲಾಗಿದೆ. ಅದರಲ್ಲಿ ₹10.32 ಕೋಟಿ ಮೊತ್ತವನ್ನು ಕೇಂದ್ರ ಪರಿಹಾರ ಸಮಿತಿಗೆ ಪಾವತಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ ಈತನಕ ₹73.12 ಕೋಟಿ ಸಂಗ್ರಹಿಸಲಾಗಿದೆ’ ಎಂದರು.
‘ಜಿಬಿಎ ವ್ಯಾಪ್ತಿಯಲ್ಲಿ 5 ಹೊಸ ಪಾಲಿಕೆಗಳಾಗಿದ್ದು, ಕಳೆದ ವರ್ಷದ ಬಾಕಿ ₹75 ಕೋಟಿ ಹಾಗೂ ಈ ವರ್ಷದ ಪಾಲನ್ನು 2026ರ ಮಾರ್ಚ್ 31ರೊಳಗೆ ಕೇಂದ್ರ ಪರಿಹಾರ ಸಮಿತಿಗೆ ಪಾವತಿಸುವಂತೆ ಆಯಾ ಪಾಲಿಕೆಗೆಳ ಆಯುಕ್ತರಿಗೆ ನಿರ್ದೇಶಿಸಲಾಗಿದೆ’ ಎಂದು ವಿವರಿಸಿದರು.
ಕಾನೂನು ಸೇವೆಗಳ ಪ್ರಾಧಿಕಾರದ ಪರ ಹೈಕೋರ್ಟ್ ವಕೀಲೆ ಮೈತ್ರೇಯಿ ಕೃಷ್ಣನ್, ‘ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಿಂದ ಸಂಗ್ರಹಿಸಲಾದ ₹40.88 ಕೋಟಿ ಸೆಸ್ ಅನ್ನು ಪೌರಾಡಳಿತ, ಪಂಚಾಯಿತಿಗಳಲ್ಲಿ ಸಂಗ್ರಹಿಸಲಾದ ಸೆಸ್ ಬಗ್ಗೆ ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಮಾಹಿತಿ ಬರಬೇಕಿದೆ. ಪ್ರಾಧಿಕಾರ ನಡೆಸಿದ ಸಮೀಕ್ಷೆ ಅನುಸಾರ ಭಿಕ್ಷಾಟನೆಯಲ್ಲಿ ತೊಡಗಿದ್ದ 720 ಮಕ್ಕಳನ್ನು ಗುರುತಿಸಲಾಗಿದೆ. ಪುನರ್ವಸತಿಗೆ ಕೆಲವು ಶಿಫಾರಸುಗಳನ್ನು ಮಾಡಲಾಗಿದೆ’ ಎಂದು ನ್ಯಾಯಪೀಠದ ಗಮನಕ್ಕೆ ತಂದರು.
ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ‘ಜಿಬಿಎ ಸೇರಿದಂತೆ ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳು ಮತ್ತು ಪಂಚಾಯಿತಿಗಳಲ್ಲಿ ಸಂಗ್ರಹಿಸಲಾಗಿರುವ ಒಟ್ಟು ಭಿಕ್ಷುಕರ ಸೆಸ್, ಅದರಲ್ಲಿ ಕೇಂದ್ರ ಪರಿಹಾರ ಸಮಿತಿಗೆ ಪಾವತಿಸಲಾದ ಮತ್ತು ಬಾಕಿ ಉಳಿದ ಮೊತ್ತದ ಬಗ್ಗೆ ವಸ್ತುಸ್ಥಿತಿ ವರದಿ ಸಲ್ಲಿಸಿ’ ಎಂದು ರಾಜ್ಯ ಸರ್ಕಾರ ಹಾಗೂ ಜಿಬಿಎಗೆ ನಿರ್ದೇಶನ ನೀಡಿತು.
‘ಮಕ್ಕಳ ಭಿಕ್ಷಾಟನೆ ನಿರ್ಮೂಲನೆ ಮತ್ತು ಅವರ ಪುನರ್ವಸತಿಗೆ 6 ವಾರಗಳಲ್ಲಿ ಸಮಗ್ರ ಕ್ರಿಯಾ ಯೋಜನೆ ರೂಪಿಸಬೇಕು. ಈ ನಿಟ್ಟಿನಲ್ಲಿ ಸಂಬಂಧಿಸಿದ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಲು ನೋಡಲ್ ಅಧಿಕಾರಿಯೊಬ್ಬರನ್ನು ನೇಮಕ ಮಾಡಬೇಕು’ ಎಂದು ಸರ್ಕಾರಕ್ಕೆ ತಾಕೀತು ಮಾಡಿ ವಿಚಾರಣೆಯನ್ನು ಏಪ್ರಿಲ್ 1ಕ್ಕೆ ಮುಂದೂಡಿತು. ಅರ್ಜಿದಾರರ ಪರ ಪದಾಂಕಿತ ಹಿರಿಯ ವಕೀಲ ಪುತ್ತಿಗೆ ರಮೇಶ್ ವಾದ ಮಂಡಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.