ಬೆಂಗಳೂರು: ‘ರಾಜ್ಯದಲ್ಲಿ 113 ಮಕ್ಕಳನ್ನು ಅಶ್ಲೀಲ ಚಿತ್ರಗಳಿಗೆ ಬಳಸಿಕೊಳ್ಳಲಾಗಿದೆ ಎಂಬ ಪ್ರಕರಣದ ತನಿಖೆಯನ್ನು ಅಪರಾಧ ತನಿಖಾ ಸಂಸ್ಥೆಗೆ (ಸಿಐಡಿ) ವಹಿಸಲಾಗಿದೆ’ ಎಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕಿ ನೀಲಮಣಿ ಎನ್.ರಾಜು ಹೈಕೋರ್ಟ್ಗೆ ಪ್ರಮಾಣಪತ್ರ ಸಲ್ಲಿಸಿದ್ದಾರೆ.
ಈ ಕುರಿತಂತೆ ಹೈಕೋರ್ಟ್ ದಾಖಲಿಸಿಕೊಂಡಿರುವ ಸ್ವಯಂ ಪ್ರೇರಿತ ಹಾಗೂ ‘ಬಚಪನ್ ಬಚಾವೊ’ ಸ್ವಯಂ ಸೇವಾ ಸಂಸ್ಥೆ ಸಲ್ಲಿಸಿರುವ ಎರಡು ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಅಭಯ್ ಎಸ್.ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು ನ್ಯಾಯಪೀಠಕ್ಕೆ ಪ್ರಮಾಣ ಪತ್ರ ಸಲ್ಲಿಸಿದರು. ಪ್ರಮಾಣಪತ್ರ ಪರಿಶೀಲಿಸಿದ ನ್ಯಾಯಪೀಠ, ‘ಒಂದೇ ದಿನದಲ್ಲಿ ತನಿಖೆ ಮುಗಿಸಿ ವರದಿ ನೀಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಡೆ ಬೇಜವಾಬ್ದಾರಿತನದಿಂದ ಕೂಡಿದೆ’ ಎಂದುಆಕ್ರೋಶ ವ್ಯಕ್ತಪಡಿಸಿತು.
‘ಸಿಆರ್ಪಿಸಿ ಕಲಂ 154 (1)ರ ಪ್ರಕಾರ ಯಾವುದೇ ಅಪರಾಧದ ಬಗ್ಗೆ ಮಾಹಿತಿ ಲಭ್ಯವಾದರೆ, ಆದನ್ನು ಆಧರಿಸಿ ಪೊಲೀಸರು ತನಿಖೆ ಆರಂಭಿ ಸಬಹುದು. ಪೊಲೀಸರಿಗೆ ಈ ಬಗ್ಗೆ ಪ್ರಾಥಮಿಕ ಜ್ಞಾನವೂ ಇಲ್ಲ. ಅಧಿಕಾರಿಗಳು ಈಗಾಗಲೇ ತಪ್ಪು ಮಾಡಿದ್ದಾರೆ. ಮುಂದಿನ ವಿಚಾರಣೆ ವೇಳೆ ತಪ್ಪಿತಸ್ಥ ಅಧಿಕಾರಿಗಳು ವಿರುದ್ಧ ಕೈಗೊಂಡ ಕ್ರಮಗಳ ಕುರಿತು ಮಾಹಿತಿ ನೀಡಿ’ ಎಂದು ಸರ್ಕಾರಕ್ಕೆ ಸೂಚಿಸಿ ವಿಚಾರಣೆಯನ್ನು ಫೆಬ್ರುವರಿ 7ಕ್ಕೆ ಮುಂದೂಡಿದೆ.
ಪ್ರಮಾಣ ಪತ್ರದಲ್ಲಿ ಏನಿದೆ?: ‘ಎಫ್ಐಆರ್ ದಾಖಲಿಸುವ ಹಾಗೂ ತನಿಖೆ ನಡೆಸುವ ಮುನ್ನ ಪ್ರಾಥಮಿಕ ವಿಚಾರಣೆ ನಡೆಸಬೇಕಿದೆ. ಅದರಂತೆ ಪ್ರಾಥಮಿಕ ವಿಚಾರಣೆ ನಡೆಸಿದ್ದು, ಎಲ್ಲಿಯೂ ಅಂತಹ ಘಟನೆ ನಡೆದ ಬಗ್ಗೆ ವರದಿಯಾಗಿಲ್ಲ. ಇದೀಗ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿದೆ. ಸಿಐಡಿ ವಿಭಾಗದ ಡಿಐಜಿ ಮೇಲ್ವಿಚಾರಣೆಯಲ್ಲಿ ಪೊಲೀಸ್ ವರದಿಷ್ಠಾಧಿಕಾರಿಗಳ ಹಾಗೂ ಜಿಲ್ಲಾಧಿಕಾರಿಗಳ ವರದಿಗಳ ಉಲ್ಲೇಖವಿಲ್ಲದೆ ಸ್ವತಂತ್ರವಾಗಿ ತನಿಖೆ ನಡೆಯಲಿದೆ. ಶೀಘ್ರವೇ ಈ ಕುರಿತ ವರದಿ ಸಲ್ಲಿಸಲಾಗುವುದು’ ಎಂದು ತಿಳಿಸಲಾಗಿದೆ.‘ರಾಜ್ಯ
ದಲ್ಲಿ 113 ಮಕ್ಕಳನ್ನು ಅಶ್ಲೀಲ ಚಿತ್ರಗಳಿಗೆ ಬಳಕೆ ಮಾಡಿಕೊಳ್ಳಲಾಗಿದೆ ಎಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವರದಿ ಹೇಳಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.