ADVERTISEMENT

ಚಿನ್ನಪ್ಪನಹಳ್ಳಿ ಗ್ರಾಮಸ್ಥರಿಂದ ಸ್ಮಶಾನಕ್ಕೆ ಬೇಡಿಕೆ

ಜಿಲ್ಲಾಧಿಕಾರಿ, ಬಿಬಿಎಂಪಿ ಆಯುಕ್ತರಿಗೆ ಮನವಿ

​ಪ್ರಜಾವಾಣಿ ವಾರ್ತೆ
Published 7 ಸೆಪ್ಟೆಂಬರ್ 2021, 5:32 IST
Last Updated 7 ಸೆಪ್ಟೆಂಬರ್ 2021, 5:32 IST

ಬೆಂಗಳೂರು: ಸಾರ್ವಜನಿಕ ಸ್ಮಶಾನಕ್ಕೆ ಅಗತ್ಯ ಜಮೀನು ಮಂಜೂರು ಮಾಡಿ ಆದೇಶ ಹೊರಡಿಸುವಂತೆ ಬೆಂಗಳೂರು ಪೂರ್ವ ತಾಲ್ಲೂಕಿನ ಕೆ.ಆರ್‌. ಪುರ ಹೋಬಳಿಯ ಚಿನ್ನಪ್ಪನಹಳ್ಳಿ ಗ್ರಾಮಸ್ಥರು ಜಿಲ್ಲಾಧಿಕಾರಿ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಮನವಿ ಸಲ್ಲಿಸಿದ್ದಾರೆ.

ಆಗಸ್ಟ್‌ 24ರಂದು ಮನವಿ ಸಲ್ಲಿಸಿರುವ ಚಿನ್ನಪ್ಪನಹಳ್ಳಿ ಗ್ರಾಮಸ್ಥರು, ಸಾರ್ವಜನಿಕ ಸ್ಮಶಾನಕ್ಕೆ ಜಮೀನು ಕಾಯ್ದಿರಿಸಿ ಆದೇಶ ಹೊರಡಿಸುವಂತೆ ಒತ್ತಾಯಿಸಿದ್ದಾರೆ. 30ಕ್ಕೂ ಹೆಚ್ಚು ಜನರು ಸಹಿ ಮಾಡಿದ್ದಾರೆ.

‘ನಗರ ಮಧ್ಯ ಭಾಗದಲ್ಲೇ ಇರುವ ಚಿನ್ನಪ್ಪನಹಳ್ಳಿ ಗ್ರಾಮದಲ್ಲಿ ನೂರಾರು ಕುಟುಂಬಗಳು ವಾಸಿಸುತ್ತಿವೆ. ಜನಸಂಖ್ಯೆಗೆ ಅನುಗುಣವಾಗಿ ಸಾರ್ವಜನಿಕ ಸ್ಮಶಾನ ಒದಗಿಸಿಲ್ಲ. ಯಾರಾದರೂ ಮೃತಪಟ್ಟರೆ ಗೌರವಯುತವಾಗಿ ಅಂತ್ಯಸಂಸ್ಕಾರ ನಡೆಸಲು ಸಾಧ್ಯವಾಗದ ಸ್ಥಿತಿ ಇದೆ. ಗ್ರಾಮದ ವ್ಯಾಪ್ತಿಯಲ್ಲಿ ಸಾಕಷ್ಟು ಪ್ರಮಾಣದ ಸರ್ಕಾರಿ ಜಮೀನು ಲಭ್ಯವಿದ್ದರೂ ಸ್ಮಶಾನಕ್ಕೆ ಜಮೀನು ಕಾಯ್ದಿರಿಸಿಲ್ಲ’ ಎಂದು ಸ್ಥಳೀಯ ನಿವಾಸಿಗಳು ಮನವಿಯಲ್ಲಿ ಉಲ್ಲೇಖಿಸಿದ್ದಾರೆ.

ADVERTISEMENT

ಎಲ್ಲ ಗ್ರಾಮಗಳಲ್ಲೂ ಸಾರ್ವಜನಿಕ ಸ್ಮಶಾನಕ್ಕೆ ಜಮೀನು ಕಾಯ್ದಿರಿಸುವುದನ್ನು ಕಡ್ಡಾಯಗೊಳಿಸಿ 2014 ಮತ್ತು 2019ರಲ್ಲಿ ಕಂದಾಯ ಇಲಾಖೆ ಆದೇಶ ಹೊರಡಿಸಿದೆ. ಆ ಬಳಿಕ ತಮ್ಮ ಗ್ರಾಮಕ್ಕೆ ಸಾರ್ವಜನಿಕ ಸ್ಮಶಾನ ಮಂಜೂರು ಮಾಡುವಂತೆ ಮನವಿ ಸಲ್ಲಿಸಲಾಗಿತ್ತು. ಈವರೆಗೆ ಯಾವುದೇ ಕ್ರಮ ಆಗಿಲ್ಲ ಎಂದು ಹೇಳಿದ್ದಾರೆ.

ಚಿನ್ನಪ್ಪನಹಳ್ಳಿ ಗ್ರಾಮದ ಸರ್ವೆ ನಂಬರ್‌ 20ರಲ್ಲಿ 19 ಎಕರೆ 19 ಗುಂಟೆ ಜಮೀನು ಲಭ್ಯವಿದೆ. ಅದರಲ್ಲಿ 10 ಎಕರೆ 20 ಗುಂಟೆ ಸರ್ಕಾರಿ ‘ಎ’ ಖರಾಬು ಮತ್ತು 3 ಎಕರೆ 27 ಗುಂಟೆ ಸರ್ಕಾರಿ ‘ಬಿ’ ಖರಾಬು ಜಮೀನು ಇದೆ. ಅಲ್ಲಿ, 3 ಎಕರೆ 27 ಗುಂಟೆ ಸರ್ಕಾರಿ ‘ಬಿ’ ಖರಾಬು ಜಮೀನು ಸಂಪೂರ್ಣ ಖಾಲಿ ಇದೆ. ಅದನ್ನು ಚಿನ್ನಪ್ಪನಹಳ್ಳಿ ಗ್ರಾಮದ ಜನರ ಬಳಕೆಗಾಗಿ ಸಾರ್ವಜನಿಕ ಸ್ಮಶಾನಕ್ಕಾಗಿ ಕಾಯ್ದಿರಿಸಿ ಆದೇಶ ಹೊರಡಿಸಬೇಕು ಎಂದು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.