ಬೆಂಗಳೂರು: ಸಾವಿರಾರು ಕಲಾವಿದರ ಪ್ರತಿಭೆ ಅನಾವರಣಕ್ಕೆ ವೇದಿಕೆ ಕಲ್ಪಿಸುವ ಹಾಗೂ ಅವರು ರಚಿಸಿದ ಕಲಾಕೃತಿಗಳ ಮಾರಾಟಕ್ಕೆ ಅವಕಾಶ ಒದಗಿಸುವ 22ನೇ ‘ಚಿತ್ರಸಂತೆ’ಯನ್ನು ಕರ್ನಾಟಕ ಚಿತ್ರಕಲಾ ಪರಿಷತ್ತು ಇದೇ ಭಾನುವಾರ ಕುಮಾರಕೃಪಾ ರಸ್ತೆಯಲ್ಲಿ ಹಮ್ಮಿಕೊಂಡಿದೆ.
ಈ ಬಾರಿಯ ಚಿತ್ರಸಂತೆಯನ್ನು ‘ಹೆಣ್ಣು ಮಗುವಿಗೆ’ ಸಮರ್ಪಣೆ ಮಾಡಲಾಗಿದೆ. ಬೆಳಿಗ್ಗೆ 6ರಿಂದ ರಾತ್ರಿ 9ರವರೆಗೆ ಕಲಾಕೃತಿಗಳ ಪ್ರದರ್ಶನ ಮತ್ತು ಮಾರಾಟ ನಡೆಯಲಿದೆ. ಈ ಸಂತೆಗೆ ಪರಿಷತ್ತು ಅಗತ್ಯ ಸಿದ್ಧತೆ ಮಾಡಿಕೊಂಡಿದ್ದು, ಪ್ರವೇಶ ದ್ವಾರದಲ್ಲಿಯೇ ಬಾಲಕಿಯ ಬೃಹದಾಕಾರದ ಕಲಾಕೃತಿ ನಿರ್ಮಿಸಲಾಗಿದೆ. ಉದ್ಘಾಟನಾ ಕಾರ್ಯಕ್ರಮದ ವೇದಿಕೆ ಹಾಗೂ ವಿವಿಧ ಕಲಾಕೃತಿಗಳಿಗೆ ಕಲಾವಿದರು ಶನಿವಾರ ಅಂತಿಮ ಸ್ಪರ್ಶ ನೀಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಬೆಳಿಗ್ಗೆ 10 ಗಂಟೆಗೆ ಪರಿಷತ್ತಿನ ಆವರಣದಲ್ಲಿ ಚಿತ್ರಸಂತೆ ಉದ್ಘಾಟಿಸುತ್ತಾರೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ‘ಕಲಾ ಪ್ರದರ್ಶನ’ಕ್ಕೆ ಚಾಲನೆ ನೀಡುತ್ತಾರೆ.
ದೇಶದ ವಿವಿಧ ಭಾಗಗಳಿಂದ 1,500 ಕಲಾವಿದರು ಚಿತ್ರಸಂತೆಯಲ್ಲಿ ಭಾಗವಹಿಸಿ, ಕಲಾಕೃತಿಗಳನ್ನು ಪ್ರದರ್ಶಿಸಲಿದ್ದಾರೆ. ಕರ್ನಾಟಕದ ಜತೆಗೆ ಕೇರಳ, ತಮಿಳುನಾಡು, ಆಂಧ್ರಪ್ರದೇಶ, ಗೋವಾ, ಮಹಾರಾಷ್ಟ್ರ, ಪಂಜಾಬ್, ಪಶ್ಚಿಮ ಬಂಗಾಳ, ಒಡಿಶಾ ಸೇರಿದಂತೆ ವಿವಿಧ ರಾಜ್ಯಗಳ ಕಲಾವಿದರು ಪಾಲ್ಗೊಳ್ಳುತ್ತಿದ್ದಾರೆ. ಪರಿಷತ್ತಿನ ಗ್ಯಾಲರಿಗಳಲ್ಲಿ ಹಿರಿಯ ಹಾಗೂ ಹೆಸರಾಂತ ಕಲಾವಿದರು ರಚಿಸಿದ ಕಲಾಕೃತಿಗಳ ಪ್ರದರ್ಶನ ನಡೆಯಲಿವೆ.
‘ಹಿರಿಯ ಕಲಾವಿದರು ಹಾಗೂ ಅಂಗವಿಕಲರಿಗೆ ಆಯ್ದ ಸ್ಥಳದಲ್ಲಿ ಅಗತ್ಯ ಸೌಲಭ್ಯ ಒದಗಿಸಿಕೊಡಲಾಗುವುದು. ಪರಿಷತ್ತಿನ ಆವರಣದ ಹೊರಗೆ ಕೆನರಾ ಬ್ಯಾಂಕ್ ಹಾಗೂ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಸಂಚಾರಿ ಎಟಿಎಂ ಇರಲಿವೆ. ಈ ಚಿತ್ರಸಂತೆಯಲ್ಲಿ ₹ 100 ರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಕಲಾಕೃತಿಗಳು ಇರಲಿವೆ. ಕಲಾವಿದರಿಂದ ನೇರವಾಗಿ ಕಲಾಕೃತಿಗಳನ್ನು ಖರೀದಿಸಬಹುದು’ ಎಂದು ಪರಿಷತ್ತಿನ ಅಧ್ಯಕ್ಷ ಬಿ.ಎಲ್. ಶಂಕರ್ ತಿಳಿಸಿದ್ದಾರೆ.
ಕ್ರೆಸೆಂಟ್ ಮತ್ತು ರೇಸ್ ಕೋರ್ಸ್ ರಸ್ತೆ, ಬಿಡಿಎ ಆವರಣ, ರೈಲ್ವೆ ಸಮಾನಾಂತರ ರಸ್ತೆಗಳಲ್ಲಿ ವಾಹನ ನಿಲುಗಡೆಗೆ ವ್ಯವಸ್ಥೆ ಮಾಡಲಾಗುತ್ತದೆ.
ಈ ಬಾರಿಯ ಚಿತ್ರಸಂತೆಗೆ ಐದು ಲಕ್ಷರಿಂದ ಆರು ಲಕ್ಷ ಮಂದಿ ಭೇಟಿ ನೀಡುವರು ಎಂದು ನಿರೀಕ್ಷಿಸಲಾಗಿದೆ. ಚಿತ್ರಸಂತೆಯಲ್ಲಿ ವ್ಯಂಗ್ಯಚಿತ್ರ ಪ್ರದರ್ಶನಕ್ಕೆ ಅವಕಾಶ ನೀಡಲಾಗಿದೆ. ಕುಂಚ ಅಥವಾ ಪೆನ್ಸಿಲ್ಗಳಿಂದ ಕಲಾರಸಿಕರ ಭಾವಚಿತ್ರಗಳನ್ನು ಸ್ಥಳದಲ್ಲಿಯೇ ರಚಿಸಿಕೊಡುವ ಕಲಾವಿದರು ಇರುತ್ತಾರೆ. ಮೈಸೂರು ಸಾಂಪ್ರದಾಯಿಕ ಶೈಲಿ ರಾಜಸ್ಥಾನಿ ಶೈಲಿ ಮಧುಬನಿಯ ಶೈಲಿ ತೈಲ ಮತ್ತು ಜಲವರ್ಣದ ಕಲಾಕೃತಿಗಳು ಚಿತ್ರಸಂತೆಯಲ್ಲಿ ಲಭ್ಯವಿರುತ್ತವೆ. ಇವಲ್ಲದೆ ಅಕ್ರಲಿಕ್ ಕೊಲಾಜ್ ಲಿಥೋಗ್ರಾಫ್ ಮೊದಲಾದ ಪ್ರಕಾರಗಳ ಕಲಾಕೃತಿಗಳು ದೊರೆಯುತ್ತವೆ ಎಂದು ಪರಿಷತ್ತು ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.