ADVERTISEMENT

ವಿಲೇಯಾಗದ ತ್ಯಾಜ್ಯ: ಬಿಬಿಎಂಪಿ ವಿರುದ್ಧ ಆಕ್ರೋಶ

​ಪ್ರಜಾವಾಣಿ ವಾರ್ತೆ
Published 3 ಜನವರಿ 2022, 19:52 IST
Last Updated 3 ಜನವರಿ 2022, 19:52 IST
ಕಸ ಬಿದ್ದಿರುವ ಸ್ಥಳದಲ್ಲಿ ಸ್ಥಳೀಯರು ಪ್ರತಿಭಟನೆ ನಡೆಸಿದರು
ಕಸ ಬಿದ್ದಿರುವ ಸ್ಥಳದಲ್ಲಿ ಸ್ಥಳೀಯರು ಪ್ರತಿಭಟನೆ ನಡೆಸಿದರು   

ಬೆಂಗಳೂರು: ಯಲಚೇನಹಳ್ಳಿ ವಾರ್ಡ್‌ನ ಕನಕನಗರ ಬಡಾವಣೆಯ ರಸ್ತೆ ಬದಿಯಲ್ಲಿ ರಾಶಿ ರಾಶಿ ಕಸ ಬಿದ್ದಿದ್ದು, ಅದನ್ನು ವಿಲೇವಾರಿ ಮಾಡಲು ಕ್ರಮ ಕೈಗೊಳ್ಳದ ಬಿಬಿಎಂಪಿ ವಿರುದ್ಧ ಸ್ಥಳೀಯರು ಪ್ರತಿಭಟನೆ ನಡೆಸಿದರು.

‘ದುಷ್ಕರ್ಮಿಗಳು ಪ್ರತಿದಿನ ಕಸದ ರಾಶಿಗೆ ಬೆಂಕಿ ಹಾಕುತ್ತಾರೆ. ಅದರಿಂದ ವಿಷಯುಕ್ತ ಹೊಗೆ ಹೊರಸೂಸುತ್ತಿದ್ದು, ಕಲುಷಿತ ಗಾಳಿ ಸೇವನೆಯಿಂದ ಹಲವು ರೋಗಗಳಿಗೆ ತುತ್ತಾಗುತ್ತಿದ್ದೇವೆ. ಕಸವು ಕೊಳೆತು ದುರ್ನಾತ ಬೀರುತ್ತಿರುವುದರಿಂದ ಸಾಂಕ್ರಾಮಿಕ ರೋಗದ ಭೀತಿಯೂ ಶುರುವಾಗಿದೆ’ ಎಂದು ಪ್ರತಿಭಟನಕಾರರು ದೂರಿದರು.

‘ಬಿಬಿಎಂಪಿ ಸಿಬ್ಬಂದಿ ವಾಹನಗಳಲ್ಲಿ ಬಂದು ಕಸ ಸಂಗ್ರಹಿಸುತ್ತಿಲ್ಲ. ಹೀಗಾಗಿ ಮಾಂಸದ ಅಂಗಡಿಗಳ ತ್ಯಾಜ್ಯವನ್ನು ರಸ್ತೆ ಬದಿಯಲ್ಲಿನ ಖಾಲಿ ಜಾಗದಲ್ಲಿ ಸುರಿಯಲಾಗುತ್ತಿದೆ. ಅಲ್ಲಿ ಬೀದಿ ನಾಯಿಗಳ ಕಾಟ ಹೆಚ್ಚುತ್ತಿದೆ. ಮಕ್ಕಳು ಹಾಗೂ ವೃದ್ಧರು ಈ ರಸ್ತೆಯಲ್ಲಿ ಓಡಾಡುವಾಗ ಅವರ ಮೇಲೆ ನಾಯಿಗಳು ದಾಳಿ ನಡೆಸುತ್ತಿವೆ. ಸಮಸ್ಯೆಯ ಕುರಿತು ಸ್ಥಳೀಯ ಶಾಸಕ ಎಂ.ಕೃಷ್ಣಪ್ಪ ಅವರ ಗಮನಕ್ಕೂ ತಂದಿದ್ದೇವೆ. ಗುತ್ತಿಗೆದಾರರ ಜೊತೆ ಶಾಮೀಲಾಗಿರುವ ಅವರು ಯಾವ ಕ್ರಮವನ್ನೂ ಕೈಗೊಂಡಿಲ್ಲ’ ಎಂದು ಆರೋಪಿಸಿದರು.

ADVERTISEMENT

ಕಾಂಗ್ರೆಸ್‌ ಮುಖಂಡ ಆರ್‌.ಕೆ.ರಮೇಶ್‌, ಕಾಂಗ್ರೆಸ್‌ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಡಿ.ಅಬ್ದುಲ್ ಮುಜೀದ್, ಮುಖಂಡ ಓ.ಮಂಜುನಾಥ್, ಯಲಚೇನಹಳ್ಳಿ ವಾರ್ಡ್ ಕಾಂಗ್ರೆಸ್ ಅಧ್ಯಕ್ಷ ವಸಂತರೆಡ್ಡಿ, ಗೊಟ್ಟಿಗೆರೆ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಬಿ.ಟಿ.ನಾಗರಾಜ್, ಕಾಂಗ್ರೆಸ್ ಕಿಸಾನ್ ಘಟಕದ ಅಧ್ಯಕ್ಷ ಚುಂಚಘಟ್ಟ ಬಾಬು, ಮುಖಂಡ ಈಶ್ವರ್, ಸ್ಥಳೀಯರಾದ ಫಯಾಜ್ ಖಾನ್, ಸೈಯದ್ ಅಕ್ರಂ, ಮಂಜುನಾಥ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.