ಬೆಂಗಳೂರು: ನಗರದ ಸ್ವಚ್ಛತೆ ಕಾಪಾಡಲು ಶ್ರಮಿಸುವ ಪಾಲಿಕೆಯ ಪೌರ ಕಾರ್ಮಿಕರ ಆರೋಗ್ಯ ತಪಾಸಣೆ ಕಾರ್ಯಕ್ರಮಕ್ಕೆ ಶನಿವಾರ ನಡೆಯಿತು. ಸಂಪಂಗಿರಾಮನಗರ ಹಾಗೂ ಶಿವಾಜಿನಗರ ವಾರ್ಡ್ಗಳಲ್ಲಿ ಕಾರ್ಯನಿರ್ವಹಿಸುವ 250 ಪೌರಕಾರ್ಮಿಕರ ಆರೋಗ್ಯ ತಪಾಸಣೆ ನಡೆಸಲಾಯಿತು.
ಚರ್ಮರೋಗ ತಜ್ಞರು, ಕಿವಿ, ಮೂಗು ಹಾಗೂ ಗಂಟಲು (ಇಎನ್ಟಿ) ತಜ್ಞರು, ಮೂಳೆ ತಜ್ಞರು, ಕಣ್ಣಿನ ತಜ್ಞರು ಸ್ತ್ರೀರೋಗ ಮತ್ತು ಪ್ರಸೂತಿ ತಜ್ಞರನ್ನು ಒಳಗೊಂಡ ವೈದ್ಯರ ತಂಡ ಆರೋಗ್ಯ ತಪಾಸಣೆ ನಡೆಸಿತು.
ಕಾರ್ಮಿಕ ಇಲಾಖೆ, ಕಾರ್ಮಿಕರ ರಾಜ್ಯ ವಿಮಾ ಯೋಜನೆ ವೈದ್ಯಕೀಯ ಸೇವೆಗಳ ನಿರ್ದೇಶನಾಲಯ (ಇಎಸ್ಐಎಸ್), ಪ್ರಾದೇಶಿಕ ಔದ್ಯೋಗಿಕ ಆರೋಗ್ಯ ಕೇಂದ್ರ, ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ ಹಾಗೂ ಬಿಬಿಎಂಪಿ ಸಹಯೋಗದಲ್ಲಿ ಪಾಲಿಕೆ ಕೇಂದ್ರ ಕಚೇರಿ ಆವರಣದಲ್ಲಿ ಏರ್ಪಡಿಸಿದ್ದ ಆರೋಗ್ಯ ತಪಾಸಣಾ ಶಿಬಿರಕ್ಕೆ ಕಾರ್ಮಿಕ ಸಚಿವ ಎಸ್.ಸುರೇಶ್ ಕುಮಾರ್ ಹಾಗೂ ಮೇಯರ್ ಎಂ.ಗೌತಮ್ ಕುಮಾರ್ ಚಾಲನೆ ನೀಡಿದರು.
‘ಪೌರಕಾರ್ಮಿಕರಿಗೆ ಮಧುಮೇಹ, ರಕ್ತದೊತ್ತಡ, ಆಸ್ತಮಾ, ಚರ್ಮರೋಗ, ಶ್ವಾಸಕೋಶದ ಕ್ಯಾನ್ಸರ್ ಮುಂತಾದ ಕಾಯಿಲೆಗಳ ಪತ್ತೆ ತಪಾಸಣೆ ನಡೆಸಿದ್ದೇವೆ. ಮಹಿಳಾ ಪೌರಕಾರ್ಮಿಕರಿಗೆ ಗರ್ಭಕೋಶ ಕ್ಯಾನ್ಸರ್ ಪತ್ತೆಗೆ ಪ್ಯಾಪ್ಸ್ಮಿಯರ್ ಪರೀಕ್ಷೆಗೆ ಒಳಪಡಿಸಲಾಗಿದೆ. ತಪಾಸಣಾ ವರದಿ ಬರಲು ಇನ್ನೂ ಒಂದು ವಾರ ಬೇಕಾಗಬಹುದು’ ಎಂದು ವೈದ್ಯೆ ಡಾ.ತಾರಾ ‘ಪ್ರಜಾವಾಣಿ’ಗೆ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.