
ಬೆಂಗಳೂರು: ರಿಯಲ್ ಎಸ್ಟೇಟ್ ಕಂಪನಿ ‘ಕಾನ್ಫಿಡೆಂಟ್ ಗ್ರೂಪ್’ನ ಮುಖ್ಯಸ್ಥ ಸಿ.ಜೆ.ರಾಯ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ರಿಯಲ್ ಎಸ್ಟೇಟ್ ವ್ಯವಹಾರ, ವೈಯಕ್ತಿಕ ಜೀವನ ಹಾಗೂ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿಯನ್ನು ಆಧರಿಸಿ ಮೂರು ಆಯಾಮದಲ್ಲೂ ವಿಶೇಷ ತನಿಖಾ ತಂಡದ (ಎಸ್ಐಟಿ) ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಯಾವ ವಿಚಾರಕ್ಕೆ ಸಂಬಂಧಿಸಿದಂತೆ ‘ಕಾನ್ಫಿಡೆಂಟ್ ಗ್ರೂಪ್’ ಕಚೇರಿಯ ಮೇಲೆ ದಾಳಿ ನಡೆಸಿ ರಾಯ್ ಅವರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು ಎಂದು ಐ.ಟಿ ಇಲಾಖೆಯ ಕೇರಳದ ಅಧಿಕಾರಿಗಳಾದ ಕೃಷ್ಣ ಪ್ರಸಾದ್ ಹಾಗೂ ನಿತಿನ್ ಅವರಿಂದ ಮಾಹಿತಿ ಪಡೆದುಕೊಂಡಿರುವ ಎಸ್ಐಟಿ ಪೊಲೀಸರು, ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ.
ದಾಳಿಗೆ ಸಂಬಂಧಿಸಿದಂತೆ ಕೆಲವು ದಾಖಲೆಗಳನ್ನೂ ಎಸ್ಐಟಿ ಎದುರು ತೋರಿಸಿರುವ ಐ.ಟಿ ಅಧಿಕಾರಿಗಳು, ‘ಆ ದಾಖಲೆಯ ಆಧಾರದಲ್ಲಿ ಹೇಳಿಕೆ ಪಡೆಯಲು ಬೆಂಗಳೂರಿಗೆ ಬಂದಿದ್ದೆವು’ ಎಂಬುದಾಗಿ ಹೇಳಿಕೆ ನೀಡಿದ್ದಾರೆ ಎಂದು ಮೂಲಗಳು ಹೇಳಿವೆ.
ಪ್ರಕರಣದ ತನಿಖೆಗೆ ಪಶ್ಚಿಮ ವಲಯದ ಜಂಟಿ ಪೊಲೀಸ್ ಕಮಿಷನರ್ ಸಿ.ವಂಶಿಕೃಷ್ಣ ನೇತೃತ್ವದಲ್ಲಿ ಎಸ್ಐಟಿ ರಚಿಸಲಾಗಿದೆ. ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಜಗಲಾಸರ್ ಅವರು ತನಿಖಾಧಿಕಾರಿಯಾಗಿ ನೇಮಕಗೊಂಡಿದ್ದಾರೆ. ರಾಯ್ ಅವರ ಆತ್ಮಹತ್ಯೆಗೆ ಕಾರಣ ನಿಗೂಢವಾಗಿದ್ದು, ಬೇರೆ ಬೇರೆ ಆಯಾಮದಲ್ಲಿ ಎಸ್ಐಟಿ ತನಿಖೆ ನಡೆಸುತ್ತಿದೆ ಎಂದು ಮೂಲಗಳು ಹೇಳಿವೆ.
‘2026ರ ಡೈರಿಯೊಂದು ಕಚೇರಿಯಲ್ಲಿತ್ತು. ಅದನ್ನು ಜಪ್ತಿ ಮಾಡಿಕೊಳ್ಳಲಾಗಿದೆ. ಆ ಡೈರಿಯಲ್ಲಿ ಉದ್ಯಮಕ್ಕೆ ಸಂಬಂಧಿಸಿದಂತೆ ಕೆಲವರ ಹೆಸರುಗಳನ್ನು ರಾಯ್ ಅವರು ಬರೆದಿದ್ದರು. ಕಳೆದ ವರ್ಷದ ಡೈರಿ ಸಿಕ್ಕಿಲ್ಲ’ ಎಂದು ಮೂಲಗಳು ಹೇಳಿವೆ.
‘ರಾಯ್ ಅವರ ಸಹೋದರ ಸಿ.ಜೆ.ಬಾಬು ಹಾಗೂ ರಾಯ್ ಪುತ್ರನಿಂದ ಪ್ರಾಥಮಿಕ ಹೇಳಿಕೆ ದಾಖಲಿಸಿಕೊಳ್ಳಲಾಗಿತ್ತು. ಪತ್ನಿ ಹಾಗೂ ಪುತ್ರನ ಹೇಳಿಕೆಯನ್ನು ಮತ್ತೊಮ್ಮೆ ಪಡೆದುಕೊಳ್ಳಲಾಗುವುದು’ ಎಂದು ಪೊಲೀಸರು ಹೇಳಿದರು.
‘ಡಿ.3ರಂದು ಐ.ಟಿ ದಾಳಿಯಾದ ಮೇಲೆ ರಾಯ್ ಅವರು ಮಾನಸಿಕ ಒತ್ತಡಕ್ಕೆ ಒಳಗಾಗಿದ್ದರು. ಒತ್ತಡ ನಿವಾರಣೆಗಾಗಿ ಮನೋವೈದ್ಯರನ್ನು ಆಗಾಗ್ಗೆ ಭೇಟಿ ಮಾಡುತ್ತಿದ್ದರು. ಜಯನಗರದ 8ನೇ ಬ್ಲಾಕ್ನಲ್ಲಿ ಇರುವ ಮನೋವೈದ್ಯಕೀಯ ಆಸ್ಪತ್ರೆಯ ಮನೋವೈದ್ಯರನ್ನು ಆತ್ಮಹತ್ಯೆ ಮಾಡಿಕೊಳ್ಳುವ ಎರಡು ದಿನ ಮೊದಲು ರಾಯ್ ಭೇಟಿ ಮಾಡಿ ಚಿಕಿತ್ಸೆ, ಕೌನ್ಸೆಲಿಂಗ್ ಪಡೆದುಕೊಂಡಿದ್ದರು’ ಎಂದು ಮೂಲಗಳು ಹೇಳಿವೆ.
ಸೌಂಡ್ಪ್ರೂಫ್ ರೂಂ
ಸಿ.ಜೆ.ರಾಯ್ ಅವರು ಲ್ಯಾಂಗ್ಫೋರ್ಡ್ ರಸ್ತೆಯ ತಮ್ಮ ಕಚೇರಿಯಲ್ಲಿ ಶುಕ್ರವಾರ ಮಧ್ಯಾಹ್ನ 3.15ರ ಸುಮಾರಿಗೆ ಪಿಸ್ತೂಲ್ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಕೃತ್ಯ ನಡೆದು 20 ನಿಮಿಷ ಕಳೆದಿದ್ದರೂ ಕಚೇರಿಯ ಸಿಬ್ಬಂದಿ ಹಾಗೂ ಕಚೇರಿಯಲ್ಲೇ ಇದ್ದ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳಿಗೆ ವಿಷಯ ಗೊತ್ತಾಗಿರಲಿಲ್ಲ. ರಾಯ್ ಅವರು ತಮ್ಮ ಕ್ಯಾಬಿನ್ಗೆ ‘ಸೌಂಡ್ಪ್ರೂಫ್ ರೂಂ’ (ಶಬ್ದ ನಿರೋಧಕ ಕೊಠಡಿ) ವ್ಯವಸ್ಥೆ ಇತ್ತು. ಗುಂಡು ಹಾರಿಸಿಕೊಂಡಿದ್ದರೂ ಅದರ ಶಬ್ದ ಹೊರಕ್ಕೆ ಕೇಳಿಸಿರಲಿಲ್ಲ. ಸ್ವಲ್ಪ ಸಮಯದ ನಂತರ ವ್ಯವಸ್ಥಾಪಕ ನಿರ್ದೇಶಕ ಟಿ.ಎ.ಜೋಸೆಫ್ ಅವರು ಕ್ಯಾಬಿನ್ ಬಳಿಗೆ ತೆರಳಿ ಬಾಗಿಲು ತಟ್ಟಿದ್ದರು. ಯಾವುದೇ ಪ್ರತಿಕ್ರಿಯೆ ಬಂದಿರಲಿಲ್ಲ. ಬಾಗಿಲು ಒಡೆದು ಪರಿಶೀಲಿಸಿದಾಗ ರಾಯ್ ಅವರು ಕುರ್ಚಿಯಲ್ಲಿ ಕುಳಿತ ಸ್ಥಿತಿಯಲ್ಲಿದ್ದರು ಎಂದು ಮೂಲಗಳು ಹೇಳಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.