ADVERTISEMENT

ಸಿಜೆಐ ಮೇಲಿನ ಕೃತ್ಯ ಖಂಡಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 9 ಅಕ್ಟೋಬರ್ 2025, 15:48 IST
Last Updated 9 ಅಕ್ಟೋಬರ್ 2025, 15:48 IST
ಬೆಂಗಳೂರು ವಿಶ್ವವಿದ್ಯಾಲಯ ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟದ ವತಿಯಿಂದ ಜ್ಞಾನಭಾರತಿ ಆವರಣದಲ್ಲಿ ಪ್ರತಿಭಟನೆ ನಡೆಸಲಾಯಿತು. 
ಬೆಂಗಳೂರು ವಿಶ್ವವಿದ್ಯಾಲಯ ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟದ ವತಿಯಿಂದ ಜ್ಞಾನಭಾರತಿ ಆವರಣದಲ್ಲಿ ಪ್ರತಿಭಟನೆ ನಡೆಸಲಾಯಿತು.    

ಬೆಂಗಳೂರು: ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿ.ಆರ್.ಗವಾಯಿ ಮೇಲೆ ವಕೀಲರೊಬ್ಬರು ಶೂ ಎಸೆಯಲು ಯತ್ನಿಸಿದ ಘಟನೆ ಖಂಡಿಸಿ ಬೆಂಗಳೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟದ ವತಿಯಿಂದ ಜ್ಞಾನಭಾರತಿ ಆವರಣದಲ್ಲಿ ಗುರುವಾರ ಪ್ರತಿಭಟನೆ ನಡೆಸಲಾಯಿತು.

ಡಾ.ಬಿ.ಆರ್.ಅಂಬೇಡ್ಕರ್ ಗ್ರಂಥಾಲಯದಿಂದ ನೂರಾರು ವಿದ್ಯಾರ್ಥಿಗಳು ಮತ್ತು ಪ್ರಾಧ್ಯಾಪಕರು ಕೈಗೆ ಕಪ್ಪುಪಟ್ಟಿ ಕಟ್ಟಿಕೊಂಡು, ಜಾಥಾ ಮೂಲಕ ಆಡಳಿತ ಕಚೇರಿ ಮುಂಭಾಗದಲ್ಲಿ ಒಗ್ಗೂಡಿ ಘೋಷಣೆ ಕೂಗಿದರು.

ಪ್ರೊ. ಬಿ.ಎನ್. ಮುರುಳಿಧರ ಮಾತನಾಡಿ, ‘ಮುಖ್ಯ ನ್ಯಾಯಮೂರ್ತಿ ಮೇಲೆ ಚಪ್ಪಲಿ ಎಸೆಯಲು ಯತ್ನಿಸಿರುವುದು ಕೇವಲ ವ್ಯಕ್ತಿಯಲ್ಲ, ಅದೊಂದು ಮನಃಸ್ಥಿತಿ. ಆ ಮನಃಸ್ಥಿತಿಯನ್ನು ವಿರೋಧಿಸುವ ಕೆಲಸ ಆಗಬೇಕು. ಕುವೆಂಪು ಹೇಳಿದಂತೆ ವಿಶ್ವಮಾನವತೆ ಕಡೆ ಸಾಗಬೇಕಾಗಿದೆ. ಈ ಘಟನೆಯನ್ನು ಪ್ರತಿಯೊಬ್ಬರೂ ಖಂಡಿಸಿ ಸಮ ಸಮಾಜ ನಿರ್ಮಿಸಬೇಕು’ ಎಂದು ಕರೆ ನೀಡಿದರು.

ADVERTISEMENT

ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟದ ಅಧ್ಯಕ್ಷ ಸತೀಶ್ ಮಾತನಾಡಿ, ‘ಈ ಘಟನೆ ದೇಶದ್ರೋಹದ ಕೃತ್ಯವಾಗಿದ್ದು, ವಕೀಲನ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಿ, ಗಡಿಪಾರು ಅಥವಾ ಗಲ್ಲುಶಿಕ್ಷೆ ವಿಧಿಸಬೇಕು. ಈ ಘಟನೆ ಮನುವಾದಿಗಳ ಷಡ್ಯಂತ್ರದಿಂದ ಕೂಡಿದೆ’ ಎಂದು ಆರೋಪಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ಕುಲಪತಿ ಎಸ್.ಎಂ.ಜಯಕರ, ‘ಬಿ.ಆರ್.ಗವಾಯಿ ಅವರ ಮೇಲೆ ಎಸಗಿರುವ ಈ ಕೃತ್ಯಕ್ಕೆ ದೇಶ ತಲೆ ತಗ್ಗಿಸಬೇಕು. ಈ ಘಟನೆ ಕುರಿತು ಬೆಂಗಳೂರು ವಿಶ್ವವಿದ್ಯಾಲಯದ ವಿದ್ಯಾವಿಷಯಕ ಪರಿಷತ್ತು ಮತ್ತು ಸಿಂಡಿಕೇಟ್ ಸಭೆಯಲ್ಲಿ ಖಂಡನಾ ನಿರ್ಣಯ ಕೈಗೊಳ್ಳಲಾಗುವುದು’ ಎಂದು ತಿಳಿಸಿದರು.

ಪ್ರತಿಭಟನೆಯಲ್ಲಿ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದ ರಾಜ್ಯ ಕಾರ್ಯಾಧ್ಯಕ್ಷ ಜಿ.ಗೋವಿಂದಯ್ಯ, ಭೀಮಾಪುತ್ರಿ ಬ್ರಿಗೇಡ್ ಅಧ್ಯಕ್ಷೆ ರೇವತಿ ರಾಜ್, ನಿವೃತ್ತ ಡಿಸಿಪಿ ಸಿದ್ದರಾಜು, ವಿ.ವಿಯ ಪರಿಶಿಷ್ಟ ಜಾತಿ ಮತ್ತು ಪಂಗಡ ಶಿಕ್ಷಕರ ಸಂಘದ ಅಧ್ಯಕ್ಷ ಪ್ರೊ.ಜಿ.ಕೃಷ್ಣಮೂರ್ತಿ, ಡೀನ್ ಪ್ರೊ.ವಿ. ಸುದೇಶ್, ಪ್ರಾಧ್ಯಾಪಕರಾದ ನಾಗಯ್ಯ, ಹರಿಣಿ, ಶೋಭಾ, ಚಂದ್ರು ಪೆರಿಯಾರ್, ಅರ್ಜುನ್, ಶಿಕ್ಷಕರು ಮತ್ತು ಶಿಕ್ಷಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.