ಬೆಂಗಳೂರು: ಕನ್ನಡ ಅಭಿವೃದ್ಧಿ ಪ್ರಾಧಿಕಾರ ಹೊರತಂದ ‘ಕನ್ನಡ ಕಾಯಕ ಸಂಕಲ್ಪ ಸಿದ್ಧಿ’ ಕೃತಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ನಗರದಲ್ಲಿ ಬುಧವಾರ ಬಿಡುಗಡೆ ಮಾಡಿದರು.
ಈ ಕೃತಿಯು ಟಿ.ಎಸ್. ನಾಗಾಭರಣ ಅವರು ಪ್ರಾಧಿಕಾರದ ಅಧ್ಯಕ್ಷರಾಗಿದ್ದ 3 ವರ್ಷಗಳ ಅವಧಿಯಲ್ಲಿ ನಡೆಸಿದ ಕಾರ್ಯಚಟುವಟಿಕೆಗಳ ಮಾಹಿತಿಯನ್ನು ಒಳಗೊಂಡಿದೆ.
‘ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸಹಭಾಗಿತ್ವದಲ್ಲಿ ಕರ್ನಾಟಕ ಕಾನೂನು ಆಯೋಗ ರಚಿಸಿರುವ ‘ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಮಸೂದೆ’ಗೆ ಕಾನೂನು ರೂಪ ನೀಡಲಾಗಿದೆ. ಇದು ಭಾಷೆಯ ರಕ್ಷಣೆ ಹಾಗೂ ಪೋಷಣೆಗೆ ಸಹಕಾರಿಯಾಗಲಿದೆ’ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.
‘ಕನ್ನಡಕ್ಕೆ ಶಾಸ್ತ್ರೀಯ ಭಾಷೆಯ ಸವಲತ್ತುಗಳು ಇನ್ನೂ ದೊರೆತ್ತಿಲ್ಲ. ಕೇಂದ್ರ ಸರ್ಕಾರದ ಮನವೊಲಿಸಿ, ಪೂರ್ಣ ಸವಲತ್ತುಗಳನ್ನು ದೊರಕಿಸಿ ಕೊಡಬೇಕು. ಭುವನೇಶ್ವರಿ ಪ್ರತಿಮೆಯ ಸ್ಥಾಪನೆ ಮತ್ತು ಥೀಮ್ ಪಾರ್ಕ್ ನಿರ್ಮಿಸುತ್ತಿರುವುದು ಅಭಿನಂದನೀಯ. ಅಕ್ಷರಧಾಮ ಮಾದರಿಯಲ್ಲಿ ಥೀಮ್ ಪಾರ್ಕ್ ಅಭಿವೃದ್ಧಿಪಡಿಸಬೇಕು. ಕರ್ನಾಟಕದ ಪರಂಪರೆ ಮತ್ತು ಇತಿಹಾಸವನ್ನು ಪ್ರತಿಬಿಂಬಿಸುವ ಉದ್ಯಾನವಾಗಿಸಬೇಕು’ ಎಂದು ಟಿ.ಎಸ್. ನಾಗಾಭರಣ ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.