
ಸಿ.ಎಂ.ಇಬ್ರಾಹಿಂ
ಬೆಂಗಳೂರು: ‘ರಾಜ್ಯದಲ್ಲಿ ದಲಿತರೊಬ್ಬರು ಮುಖ್ಯಮಂತ್ರಿ ಆಗಬೇಕು. ಆಗ ಮಾತ್ರ ಕರ್ನಾಟಕಕ್ಕೆ ವಿಮೋಚನೆ ಸಿಗಲಿದೆ’ ಎಂದು ಕೇಂದ್ರದ ಮಾಜಿ ಸಚಿವ ಸಿ.ಎಂ. ಇಬ್ರಾಹಿಂ ಹೇಳಿದರು.
ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದ ರಾಜ್ಯ ಘಟಕ ಹಾಗೂ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಂಟಿಯಾಗಿ ಸೋಮವಾರ ಆಯೋಜಿಸಿದ್ದ ಸಂವಿಧಾನ ಜಾಗೃತಿ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.
‘ಹಳ್ಳಿಯ ರೈತನೊಬ್ಬನ ಮಗನನ್ನು ಪ್ರಧಾನಿ ಹಾಗೂ ಕುರಿ ಕಾಯುವವನ ಮಗನನ್ನು ಮುಖ್ಯಮಂತ್ರಿ ಮಾಡಿದ್ದಾಯಿತು. ದಲಿತರೊಬ್ಬರನ್ನು ಮುಖ್ಯಮಂತ್ರಿ ಮಾಡುವುದು ನಮ್ಮ ಗುರಿಯಾಗಿದೆ. ಈ ಹೋರಾಟಕ್ಕೆ ನೀವೆಲ್ಲರೂ ಬೆಂಬಲ ನೀಡಬೇಕು’ ಎಂದು ಕರೆ ನೀಡಿದರು.
ಮೀಸಲಾತಿಯ ಸೌಲಭ್ಯವನ್ನು ತೆಗೆದು ಹಾಕುವ ಉದ್ದೇಶದಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಾರ್ವಜನಿಕ ಸಂಸ್ಥೆಗಳನ್ನು ಖಾಸಗೀಕರಣ ಮಾಡಲಾಗುತ್ತಿದೆ. ಖಾಸಗಿ ಕಾರ್ಖಾನೆಗಳಲ್ಲಿ ಮೀಸಲಾತಿ ಸೌಲಭ್ಯವಿಲ್ಲ. ಅಂಚೆ ಹಾಗೂ ರೈಲ್ವೆ ಇಲಾಖೆಗಳನ್ನು ಖಾಸಗೀಕರಣ ಮಾಡಲಾಗುತ್ತಿದೆ’ ಎಂದು ಆರೋಪಿಸಿದರು.
‘ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಶೇಕಡ 60ಕ್ಕಿಂತ ಹೆಚ್ಚು ಹುದ್ದೆಗಳು ಖಾಲಿ ಇವೆ. ದಲಿತ ಸಚಿವರು ಈ ಬಗ್ಗೆ ಧ್ವನಿ ಎತ್ತುತ್ತಿಲ್ಲ. ಆದ್ದರಿಂದ ನಾವು ಬೀದಿಗಿಳಿದು ಹೋರಾಟ ಮಾಡಿ ನಮ್ಮ ಹಕ್ಕುಗಳನ್ನು ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.
ಆರ್ಪಿಐ ರಾಜ್ಯ ಘಟಕದ ಅಧ್ಯಕ್ಷ ಆರ್. ಮೋಹನ್ರಾಜ್, ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್, ಎಂ. ಗೋಪಿನಾಥ್, ಸ್ವಪ್ನಾ ಮೋಹನ್ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.