ರಾಜರಾಜೇಶ್ವರಿನಗರ: ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರುವ ರೀತಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ನಡೆದುಕೊಳ್ಳುತ್ತಿದೆ. ರಾಜ್ಯದಿಂದ ಕೇಂದ್ರಕ್ಕೆ ಅತಿ ಹೆಚ್ಚಿನ ತೆರಿಗೆ ಕಟ್ಟಲಾಗುತ್ತಿದ್ದರೂ, ರಾಜ್ಯಕ್ಕೆ ಸಿಗಬೇಕಾದ ಪಾಲು ನೀಡದೇ ದ್ರೋಹ ಮಾಡುತ್ತಿದೆ’ ಎಂದು ಸಾಹಿತಿ ಎಸ್.ಜಿ. ಸಿದ್ಧರಾಮಯ್ಯ ಆರೋಪಿಸಿದರು.
ರಾಜರಾಜೇಶ್ವರಿನಗರದ ಮಾಳಗಾಳದಲ್ಲಿ ಕನ್ನಡ ಜಾಣಜಾಣೆಯರ ವೇದಿಕೆ ಬುಧವಾರ ಆಯೋಜಿಸಿದ್ದ ‘ನಮ್ಮ ತೆರಿಗೆ ನಮ್ಮ ಹಕ್ಕು’ ಜಾಗೃತಿ ಜಾಥಾದಲ್ಲಿ ಅವರು ಮಾತನಾಡಿದರು.
‘ಕರ್ನಾಟಕ, ಕೇರಳ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳ ತೆರಿಗೆ ಪಾಲನ್ನು ಉತ್ತರ ಭಾರತದ ರಾಜ್ಯಗಳ ಅಭಿವೃದ್ಧಿಗೆ ಹಂಚಿಕೆ ಮಾಡಲಾಗುತ್ತಿದೆ. ರಾಜ್ಯದಿಂದ ಆಯ್ಕೆಯಾಗಿರುವ ಸಂಸದರಿಗೆ ಇದನ್ನು ಪ್ರಶ್ನಿಸುವ ಧೈರ್ಯವಿಲ್ಲದೇ ಮೌನಕ್ಕೆ ಶರಣಾಗಿದ್ದಾರೆ. ಕನ್ನಡ ಅಸ್ಮಿತೆ, ಅಸ್ತಿತ್ವ ಉಳಿಯಬೇಕಾದರೆ, ಕನ್ನಡಿಗರ ಪರ ಧ್ವನಿ ಎತ್ತುವ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ನೀಡಬೇಕು’ ಎಂದು ಕರೆ ನೀಡಿದರು.
ಕಾಂಗ್ರೆಸ್ ನಾಯಕಿ ಎಚ್. ಕುಸುಮಾ, ‘ದಕ್ಷಿಣ ಭಾರತದವರಿಗೆ ಆಗುತ್ತಿರುವ ಅನ್ಯಾಯವನ್ನು ಪ್ರಶ್ನಿಸಿದ್ದ ಸಂಸದ ಡಿ.ಕೆ. ಸುರೇಶ್ ಅವರಿಗೆ ಬಿಜೆಪಿಯವರು ದೇಶ ದ್ರೋಹದ ಪಟ್ಟ ಕಟ್ಟಿದರು. ಬಿಜೆಪಿಗರಿಗೆ ಸಿದ್ಧಾಂತ, ದೇಶ ಪ್ರೇಮವಿಲ್ಲ. ಅಧಿಕಾರಕ್ಕಾಗಿ ಅವರು ಧರ್ಮದ ಹೆಸರಿನಲ್ಲಿ ಜನರನ್ನು ವಿಭಜಿಸುವ ಕೆಲಸ ಮಾಡುತ್ತಿದ್ದಾರೆ’ ಎಂದು ದೂರಿದರು.
ಕವಿ ಎಲ್.ಎನ್. ಮುಕುಂದರಾಜ್, ‘ಪ್ರಧಾನಿ ನರೇಂದ್ರ ಮೋದಿ ಅವರ 10 ವರ್ಷಗಳ ಅಧಿಕಾರದ ಅವಧಿಯಲ್ಲಿ ಏನೂ ಅಭಿವೃದ್ಧಿ ಕೆಲಸಗಳನ್ನು ಮಾಡಿಲ್ಲ. ರಾಮಮಂದಿರ, ಧರ್ಮ–ಜಾತಿ ಹೆಸರಿನಲ್ಲಿ ಮತಯಾಚನೆ ಮಾಡುತ್ತಿದ್ದಾರೆ’ ಎಂದು ಆರೋಪಿಸಿದರು.
ಮಾಳಗಾಳದಿಂದ ಆರಂಭವಾದ ಜಾಥಾ ಕಂಠೀರವ ಸ್ಟುಡಿಯೊಗೆ ತಲುಪಿ ಅಲ್ಲಿ ನಟ ಡಾ.ರಾಜ್ಕುಮಾರ್ ಅವರ ಸಮಾಧಿಗೆ ಪುಷ್ಪನಮನ ಸಲ್ಲಿಸಲಾಯಿತು. ಜಾಥಾದಲ್ಲಿ ಸಾಹಿತಿಗಳು ಮತ್ತು ನೂರಾರು ಕನ್ನಡಪರ ಹೋರಾಟಗಾರರು ಪಾಲ್ಗೊಂಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.