ಬೆಂಗಳೂರು: ಆರೋಗ್ಯ ಇಲಾಖೆಯಡಿ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳಾ ವೈದ್ಯಾಧಿಕಾರಿಗಳು ಮತ್ತು ಮಹಿಳಾ ವೈದ್ಯಕೀಯ ಸಿಬ್ಬಂದಿ ಮೇಲೆ ಹಲ್ಲೆ ತಡೆಗೆ ಕೈಗೊಳ್ಳಬೇಕಿರುವ ಮುಂಜಾಗ್ರತಾ ಕ್ರಮಗಳ ಕುರಿತು ಶಿಫಾರಸುಗಳನ್ನು ನೀಡಲು ಆರೋಗ್ಯ ಇಲಾಖೆ ನಿರ್ದೇಶಕರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ.
ಈ ಬಗ್ಗೆ ಇಲಾಖೆ ಆಯುಕ್ತ ಡಿ. ರಂದೀಪ್ ಆದೇಶ ಹೊರಡಿಸಿದ್ದಾರೆ. ಇಲಾಖೆಯ ವೈದ್ಯಕೀಯ ಜಂಟಿ ನಿರ್ದೇಶಕರು, ಆರೋಗ್ಯ ಮತ್ತು ಯೋಜನೆ-1ರ ಉಪ ನಿರ್ದೇಶಕರು, ಮಾನಸಿಕ ಆರೋಗ್ಯ ವಿಭಾಗದ ಉಪ ನಿರ್ದೇಶಕರು, ವೈದ್ಯಕೀಯ ವಿಭಾಗದ ಉಪ ನಿರ್ದೇಶಕರು, ಬಳ್ಳಾರಿ ಜಿಲ್ಲಾ ಶಸ್ತ್ರಚಿಕಿತ್ಸಕರು, ಆನೇಕಲ್ ವೈದ್ಯಾಧಿಕಾರಿಯವರನ್ನು (ಆಡಳಿತ) ಸದಸ್ಯರನ್ನಾಗಿ ನಿಯೋಜಿಸಲಾಗಿದೆ.
ಇಲ್ಲಿನ ಕೆ.ಸಿ. ಜನರಲ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರನ್ನು ಸದಸ್ಯ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ. ಓರ್ವ ವಕೀಲ ಹಾಗೂ ಮಹಿಳಾ ಪೊಲೀಸ್ ಅಧಿಕಾರಿ ಸಮಿತಿ ಸಭೆಯಲ್ಲಿ ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳಲಿದ್ದಾರೆ.
ಹತ್ತು ಮಂದಿಯನ್ನು ಒಳಗೊಂಡ ಸಮಿತಿಯು ಹಲ್ಲೆ ತಡೆಗೆ ಸಂಬಂಧಿಸಿದಂತೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಶಿಫಾರಸುಗಳನ್ನು ನೀಡಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.