ADVERTISEMENT

ಸಂಪತ್‌ರಾಜ್‌ ವಿರುದ್ಧ ಸುರ್ಜೇವಾಲಗೆ ಅಖಂಡ ದೂರು

​ಪ್ರಜಾವಾಣಿ ವಾರ್ತೆ
Published 17 ಫೆಬ್ರುವರಿ 2021, 21:08 IST
Last Updated 17 ಫೆಬ್ರುವರಿ 2021, 21:08 IST

ಬೆಂಗಳೂರು: ‘ಡಿ.ಜೆ ಹಳ್ಳಿ ಹಾಗೂ ಕೆ.ಜಿ ಹಳ್ಳಿ ಘಟನೆಯಲ್ಲಿ ನನ್ನ ಮನೆಗೆ ಬೆಂಕಿ ಇಟ್ಟ ಪ್ರಕರಣದ ಸಂಪೂರ್ಣ ಮಾಹಿತಿಯನ್ನು ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರಿಗೆ ನೀಡಿದ್ದೇನೆ. ಮಾಜಿ ಮೇಯರ್‌ ಸಂಪತ್ ರಾಜ್ ಅವರನ್ನು ಪಕ್ಷದಿಂದ ಉಚ್ಛಾಟಿಸುವಂತೆ ಮನವಿ ಮಾಡಿಕೊಂಡಿದ್ದೇನೆ. ಹೈಕಮಾಂಡ್ ಜತೆ ಚರ್ಚಿಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ’ ಎಂದು ಪುಲಿಕೇಶಿನಗರ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಹೇಳಿದರು.

ಕುಮಾರಕೃಪಾ ಅತಿಥಿಗೃಹದಲ್ಲಿ ಸುರ್ಜೇವಾಲ ಅವರನ್ನು ಬುಧವಾರ ಭೇಟಿ ಮಾಡಿ ಮನವಿ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ‘ನನ್ನ ಅಹವಾಲು ಸಲ್ಲಿಸಿದ್ದೇನೆ. ಬಿಬಿಎಂಪಿ ಚುನಾವಣೆಯಲ್ಲಿ ಸಂಪತ್‌ರಾಜ್‌ ಅವರಿಗೆ ಟಿಕೆಟ್ ನೀಡದಂತೆ ಮನವಿ ಮಾಡಿದ್ದೇನೆ’ ಎಂದರು.

‘ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿರುವ ಶಾಸಕ ರಾಮಲಿಂಗಾರೆಡ್ಡಿ ಪಕ್ಷದ ಹಿರಿಯ ಮುಖಂಡ. ಅವರೂ ಸೇರಿದಂತೆ ಪಕ್ಷದ ಎಲ್ಲ ನಾಯಕರಿಂದ ಸಹಕಾರ ಸಿಕ್ಕಿದೆ. ಎಲ್ಲರೂ ನನ್ನ ಪರವಾಗಿದ್ದಾರೆ ಎಂಬ ವಿಶ್ವಾಸ ಇದೆ’ ಎಂದೂ ಹೇಳಿದರು.

ADVERTISEMENT

ರಾಮಲಿಂಗಾರೆಡ್ಡಿ ಮಾತನಾಡಿ, ‘ಅಖಂಡ ಶ್ರೀನಿವಾಸ ಮೂರ್ತಿ ವಿಚಾರವಾಗಿ ಸುರ್ಜೇವಾಲ ಜೊತೆ ಗುರುವಾರ ಮಾತನಾಡುತ್ತೇನೆ. ವಿಷಯವನ್ನು ಗಮನಕ್ಕೆ ತರುವುದು ನನ್ನ ಜವಾಬ್ದಾರಿ. ಸಂಪತ್ ರಾಜ್ ವಿರುದ್ಧ ಕ್ರಮಕೈಗೊಳ್ಳುವುದು ಅವರಿಗೆ ಬಿಟ್ಟಿದ್ದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.