ಬೆಂಗಳೂರು: ‘ಕಾಂಗ್ರೆಸ್ ನಾಯಕರನ್ನು ಗುರಿಯಾಗಿಸಿಕೊಂಡು ಐ.ಟಿ ಅಧಿಕಾರಿಗಳು ದಾಳಿ ಮಾಡುತ್ತಿದ್ದಾರೆ. ಅವರ ಕಿರುಕುಳವೇ ಶಾಸಕ ಜಿ.ಪರಮೇಶ್ವರ ಅವರ ಆಪ್ತ ಸಹಾಯಕ ರಮೇಶ್ ಸಾವಿಗೆ ಕಾರಣ’ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಭಾನುವಾರ ಪ್ರತಿಭಟನೆ ನಡೆಸಿದರು.
ನಗರದ ಆನಂದರಾವ್ ವೃತ್ತದ ಗಾಂಧಿ ಪ್ರತಿಮೆ ಎದುರು ಸೇರಿದ್ದ ಕಾರ್ಯಕರ್ತರು, ‘ಐ.ಟಿ ಸಂಸ್ಥೆಯನ್ನು ದುರ್ಬಳಕೆ ಮಾಡಿಕೊಂಡು ಮುಗ್ಧರನ್ನು ಹಿಂಸಿಸುತ್ತಿರುವ ಕೇಂದ್ರ ಸರ್ಕಾರಕ್ಕೆ ಧಿಕ್ಕಾರ’ ಎಂಬ ಘೋಷಣಾ ಫಲಕ ಪ್ರದರ್ಶಿಸಿದರು.
‘ಜನರು ವಿಶ್ವಾಸವಿಟ್ಟು ಆರಿಸಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ, ಸೇಡಿನ ರಾಜಕೀಯ ಮಾಡುತ್ತಿದೆ. ಕಾಂಗ್ರೆಸ್ ನಾಯಕರು, ಅವರ ಕುಟುಂಬದವರು ಹಾಗೂ ಆಪ್ತರಿಗೆ ಕಿರುಕುಳ ನೀಡುತ್ತಿದೆ. ಬಿಜೆಪಿಯಲ್ಲೂ ಸಾಕಷ್ಟು ಮಂದಿ ಹಣವಂತರಿದ್ದಾರೆ. ಅವರಿಗೆ ಐ.ಟಿ ಅಧಿಕಾರಿಗಳು ಇದುವರೆಗೂ ಯಾವುದೇ ನೋಟಿಸ್ ನೀಡಿಲ್ಲ. ತನಿಖೆಗೂ ಒಳಪಡಿಸಿಲ್ಲ’ ಎಂದು ಪ್ರತಿಭಟನಾಕಾರರು ಕಿಡಿಕಾರಿದರು.
‘ರಮೇಶ್ ಅವರ ಸಾವಿನ ಬಗ್ಗೆ ಕೇಂದ್ರ ಸರ್ಕಾರ ಕೂಡಲೇ ಸ್ಪಷ್ಟನೆ ನೀಡಬೇಕು. ಅವರ ಕುಟುಂಬಕ್ಕೆ ನ್ಯಾಯ ಒದಗಿಸಿಕೊಡಬೇಕು’ ಎಂದು ಆಗ್ರಹಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.