ಬೆಂಗಳೂರು: ‘ಸಾಮಾಜಿಕವಾಗಿ, ರಾಜಕೀಯವಾಗಿ ಹಾಗೂ ಆರ್ಥಿಕವಾಗಿ ಹಿಂದುಳಿದಿರುವ ಮಾದಿಗ ಸಮುದಾಯವು ಒಗ್ಗಟ್ಟಾಗಿ ಹೋರಾಟ ಮಾಡಿದರೆ ಯಶಸ್ಸು ಸಿಗಲಿದೆ’ ಎಂದು ಪಾಲನಹಳ್ಳಿ ಮಠದ ಪೀಠಾಧ್ಯಕ್ಷ ಸಿದ್ಧರಾಜು ಸ್ವಾಮೀಜಿ ಹೇಳಿದರು.
ಕರ್ನಾಟಕ ಆದಿಜಾಂಬವ (ಮಾದಿಗ) ಸಂಘಟನೆಗಳ ಒಕ್ಕೂಟ ಶನಿವಾರ ಆಯೋಜಿಸಿದ್ದ ಸಂವಿಧಾನ ಜಾಗೃತಿ ಸಮಾವೇಶದಲ್ಲಿ ಅವರು ಮಾತನಾಡಿದರು.
‘ಮಾದಿಗ ಸಮುದಾಯ ರಾಜಕೀಯವಾಗಿ ಬಲಾಢ್ಯವಾದರೆ ಮಾತ್ರ, ಸಾಮಾಜಿಕ ನ್ಯಾಯ ದೊರೆಯಲಿದೆ. ನಮ್ಮ ಸಮುದಾಯದ ಅಭಿವೃದ್ಧಿಗೆ ಬೇಕಾದ ಎಲ್ಲ ಅವಕಾಶಗಳನ್ನು ಸಂವಿಧಾನ ನೀಡಿದೆ. ಆದರೆ, ಆ ಅವಕಾಶಗಳು ನಮಗೆ ನ್ಯಾಯಯುತವಾಗಿ ಸಿಗುತ್ತಿಲ್ಲ. ಆದ್ದರಿಂದ ನಾವು ಒಗ್ಗಟ್ಟಿನಿಂದ ಹೋರಾಟ ನಡೆಸಿ, ನಮ್ಮ ಹಕ್ಕುಗಳನ್ನು ಪಡೆದುಕೊಳ್ಳಬೇಕು’ ಎಂದರು.
ಒಕ್ಕೂಟದ ಕಾರ್ಯಾಧ್ಯಕ್ಷ ಜಂಬೂದೀಪ ಸಿದ್ಧರಾಜು ಮಾತನಾಡಿ, ‘ಪ್ರತಿ ವರ್ಷ ಬಜೆಟ್ನಲ್ಲಿ ಆದಿ ಜಾಂಬವ ಅಭಿವೃದ್ಧಿ ನಿಗಮಕ್ಕೆ ₹1 ಸಾವಿರ ಕೋಟಿ, ಲಿಡ್ಕರ್ಗೆ ₹500 ಕೋಟಿ ಅನುದಾನ ನೀಡಬೇಕು. ಪರಿಶಿಷ್ಟ ಜಾತಿ ಪಟ್ಟಿಯಲ್ಲಿ ಬರುವ ಆದಿ ಜಾಂಬವ ಸಮುದಾಯದ ಜನಸಂಖ್ಯೆಗೆ ಆಧಾರದ ಮೇಲೆ ಒಳ ಮೀಸಲಾತಿ ಸೌಲಭ್ಯ ಕಲ್ಪಿಸಬೇಕು. ಪಿಟಿಸಿಎಲ್ ಕಾಯ್ದೆಯನ್ನು ಸಮಗ್ರವಾಗಿ ತಿದ್ದುಪಡಿ ಮಾಡಬೇಕು’ ಎಂದು ಅವರು ಒತ್ತಾಯಿಸಿದರು.
ಆದಿಜಾಂಬವ ಬೃಹನ್ಮಠದ ಪೀಠಾಧ್ಯಕ್ಷ ಷಡಕ್ಷರಿಮುನಿ ದೇಶಿಕೇಂದ್ರ ಸ್ವಾಮೀಜಿ, ಶಿವಮುನಿ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ಹಾಗೂ ಮಾಜಿ ಸಚಿವ ಆಲ್ಕೋಡ್ ಹನುಮಂತಪ್ಪ, ದಲಿತ ಸಂಘರ್ಷ ಸಮಿತಿ ರಾಜ್ಯ ಘಟಕದ ಅಧ್ಯಕ್ಷ ಎನ್. ಮೂರ್ತಿ ಮಾಜಿ ಶಾಸಕರಾದ ವೀರಭದ್ರಪ್ಪ ಹಾಲಹರವಿ, ತಿಮ್ಮರಾಯಪ್ಪ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.