ಬೆಂಗಳೂರು: ‘ದಾಸರಹಳ್ಳಿ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಟೆಲಿಕಾಂ ಕಂಪನಿಗಳು ಅನಧಿಕೃತವಾಗಿ ಆಫ್ಟಿಕಲ್ ಫೈಬರ್ ಕೇಬಲ್ (ಒಎಫ್ಸಿ) ಅಳವಡಿಸಲು ರಸ್ತೆಗಳನ್ನು ಅಗೆದಿದ್ದಾರೆ’ ಎಂದು ಮಾಜಿ ಶಾಸಕ ಆರ್. ಮಂಜುನಾಥ್ ದೂರಿದ್ದಾರೆ.
ಈ ಬಗ್ಗೆ ಬಿಬಿಎಂಪಿ ದಾಸರಹಳ್ಳಿ ವಲಯ ಆಯುಕ್ತರಿಗೆ ಪತ್ರ ಬರೆದಿರುವ ಅವರು, ‘ಒಎಫ್ಸಿ ಅಳವಡಿಕೆಗೆ ಕೇಬಲ್ ಕಂಪನಿಗಳು ಅನುಮತಿ ಪಡೆದು ನಿಗದಿತ ಗಡುವು ಮುಕ್ತಾಯವಾದರೂ, ಕೇಬಲ್ ಹಾಕುವ ಕೆಲಸ ಮಾಡುತ್ತಿವೆ. ಬಡಾವಣೆಯ ಎಲ್ಲ ರಸ್ತೆಗಳಲ್ಲಿ ಜಿ.ಐ ಪೋಲ್ಸ್ಗಳನ್ನು ಅಳವಡಿಸಲಾಗುತ್ತಿದ್ದು, ಕೂಡಲೇ ಇವುಗಳನ್ನು ತೆರವುಗೊಳಿಸಬೇಕು’ ಎಂದು ಆಗ್ರಹಿಸಿದ್ದಾರೆ.
ಅನಧಿಕೃತ ಒಎಫ್ಸಿ ಕೇಬಲ್ ಅಳವಡಿಸುವುದರಿಂದ ಜಲಮಂಡಳಿಯ ಕುಡಿಯುವ ನೀರಿನ ಹಾಗೂ ಒಳಚರಂಡಿ ಪೈಪ್ಲೈನ್ಗೆ ಹಾನಿಯಾಗುತ್ತಿದೆ. ಇದರಿಂದ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ. ಬೆಸ್ಕಾಂ ಅಳವಡಿಸಿರುವ ಯು.ಜಿ. ಕೇಬಲ್ಗಳನ್ನು ಒಎಫ್ಸಿ ಕೇಬಲ್ ಅಳವಡಿಕೆಯಿಂದ ಹಾನಿಯಾಗುತ್ತಿದೆ. ಇದರಿಂದ ವಿದ್ಯುತ್ ವ್ಯತ್ಯಯವಾಗುತ್ತಿದ್ದು, ಸಾರ್ವಜನಿಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ’ ಎಂದು ದೂರಿದರು.
ಬಿಬಿಎಂಪಿ ತಕ್ಷಣ ಅನಧಿಕೃತವಾಗಿ ಕೇಬಲ್ ಅಳವಡಿಸಿರುವ ಟೆಲಿಕಾಂ ಕಂಪನಿಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.