ಬೆಂಗಳೂರು: ‘ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ಕೈಗೊಂಡಿರುವ ತಂತ್ರಜ್ಞಾನ ಅಳವಡಿಕೆ ಹಾಗೂ ಕಟ್ಟಡ ನವೀಕರಣ ಕಾರ್ಯಕ್ಕೆ ಸರ್ಕಾರದ ಸಂಪೂರ್ಣ ಸಹಕಾರ ಇರಲಿದೆ’ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನೀಲ್ ಕುಮಾರ್ ಭರವಸೆ ನೀಡಿದರು.
ಪರಿಷತ್ತಿನ ಕೇಂದ್ರ ಕಚೇರಿಗೆ ಬುಧವಾರ ಭೇಟಿ ನೀಡಿದ ಅವರು, ಕಟ್ಟಡಗಳನ್ನು ಪರಿಶೀಲಿಸಿದರು.ಸರಸ್ವತಿ ಗ್ರಂಥಭಂಡಾರದಲ್ಲಿರುವ ಕುಮಾರವ್ಯಾಸನ ‘ಕರ್ಣಾಟ ಭಾರತ ಕಥಾಮಂಜರಿ’ಯ ತಾಳೆಗರಿಗಳ ಪ್ರತಿಯನ್ನು ಪರಿಶೀಲಿಸಿದರು.
ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿ,‘ನಾಲ್ವಡಿ ಕೃಷ್ಣರಾಜ ಒಡೆಯರ್, ಸರ್.ಎಂ. ವಿಶ್ವೇಶ್ವರಯ್ಯ ಹಾಗೂ ಸರ್. ಮಿರ್ಜಾ ಇಸ್ಮಾಯಿಲ್ ಅವರ ಅನನ್ಯ ಕೊಡುಗೆಯಿಂದ ಸ್ಥಾಪಿತವಾದ ಕನ್ನಡ ಸಾಹಿತ್ಯ ಪರಿಷತ್ತು, ಇಂದು ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾಗಿ ಬೆಳೆದಿದೆ. ಹಿಂದೆ ಪರಿಷತ್ತಿನ ಅಧ್ಯಕ್ಷರು ವಿಧಾನಸೌಧಕ್ಕೆ ಭೇಟಿ ನೀಡಿದರೆ ಮುಖ್ಯಮಂತ್ರಿಗಳೇ ಕೆಳಗೆ ಬಂದು ಅವರನ್ನು ಸ್ವಾಗತಿಸುತ್ತಿದ್ದರು. ಆಳುವ ಪ್ರಭುತ್ವವು ಹಿಂದಿನಿಂದಲೂ ಪರಿಷತ್ತಿನೊಂದಿಗೆ ಇಟ್ಟುಕೊಂಡಿದ್ದ ಗೌರವದ ಪ್ರತೀಕವಿದು’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.