ADVERTISEMENT

ವಸತಿ ಶಿಕ್ಷಣ ಸಂಸ್ಥೆಗಳ ಸಂಘದಲ್ಲಿ ಭ್ರಷ್ಟಾಚಾರ: ಆರೋಪ

ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಕೆಆರ್‌ಎಸ್‌ ಪಕ್ಷದಿಂದ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 20 ಫೆಬ್ರುವರಿ 2026, 16:26 IST
Last Updated 20 ಫೆಬ್ರುವರಿ 2026, 16:26 IST
ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಶುಕ್ರವಾರ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಪ್ರತಿಭಟನೆ ನಡೆಯಿತು 
ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಶುಕ್ರವಾರ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಪ್ರತಿಭಟನೆ ನಡೆಯಿತು    

ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆ ಅಧೀನದಲ್ಲಿ ಬರುವ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಲ್ಲಿ(ಕೆಆರ್‌ಇಐಎಸ್‌) ಭ್ರಷ್ಟಾಚಾರ ನಡೆಯುತ್ತಿದೆ ಎಂದು ಆರೋಪಿಸಿ, ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್‌) ಪಕ್ಷದ ಸದಸ್ಯರು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು. 

‘ಅತಿಹೆಚ್ಚು ಅನುದಾನ ಬಿಡುಗಡೆ ಆಗುತ್ತಿರುವ ಇಲಾಖೆಗಳ ಪೈಕಿ ಸಮಾಜ ಕಲ್ಯಾಣ ಇಲಾಖೆಯೂ ಒಂದು. ಭ್ರಷ್ಟರ ಪಾಲಿನ ಕಲ್ಪವೃಕ್ಷವಾಗಿ ಮಾರ್ಪಟ್ಟಿದೆ. ಹಿಂದುಳಿದ ವರ್ಗಗಳ ಉದ್ಧಾರಕ್ಕಾಗಿ ಇರುವ ಇಲಾಖೆಯೇ ಸಂಪೂರ್ಣವಾಗಿ ಭ್ರಷ್ಟಾಚಾರದಲ್ಲಿ ಮುಳುಗಿರುವ ಪರಿಣಾಮ ಪ್ರತಿ ವರ್ಷ ಸಾವಿರಾರು ಕೋಟಿ ರೂಪಾಯಿ ಭ್ರಷ್ಟರ ಪಾಲಾಗುತ್ತಿದೆ’ ಎಂದು ಪಕ್ಷದ ರಾಜ್ಯ ಜಂಟಿ ಕಾರ್ಯದರ್ಶಿ ಎಲ್. ಜೀವನ್ ಆರೋಪಿಸಿದರು.

ಪಕ್ಷದ ಕಾರ್ಯಾಧ್ಯಕ್ಷ ರಘು ಜಾಣಗೆರೆ ಮಾತನಾಡಿ, ಸಮಾಜ ಕಲ್ಯಾಣ ಇಲಾಖೆಯಡಿ ಕಾರ್ಯ ನಿರ್ವಹಿಸುತ್ತಿರುವ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಲ್ಲಿ ಭ್ರಷ್ಟಾಚಾರ ನಡೆಯುತ್ತಿದ್ದು, ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

ADVERTISEMENT

‘ಹಿಂದುಳಿದ ವರ್ಗಗಳ ಬಡ ಮಕ್ಕಳಿಗೆ ಅನ್ನ, ಶಿಕ್ಷಣ ನೀಡುವ ಉದ್ದೇಶದಿಂದ ಸ್ಥಾಪಿತವಾದ ಕೆಆರ್‌ಇಐಎಸ್‌ ಸಂಸ್ಥೆಯಲ್ಲಿನ ಕೆಲವು ಅಧಿಕಾರಿಗಳು ಲೂಟಿಗೆ ಇಳಿದಿದ್ದಾರೆ. ಶಾಲೆಗಳಿಗೆ ಸರಬರಾಜು ಮಾಡುತ್ತಿರುವ ಸಾಮಗ್ರಿಗಳ ಖರೀದಿಯಲ್ಲಿ ಅವ್ಯವಹಾರ ನಡೆಯುತ್ತಿದ್ದು, ₹20 ಸಾವಿ‌ರ ಬೆಲೆಯ ಅಡುಗೆ ಪಾತ್ರೆಗೆ ₹2 ಲಕ್ಷ, ₹1.5 ಲಕ್ಷ ಮೌಲ್ಯದ ಸ್ಮಾರ್ಟ್‌ ಬೋರ್ಡ್‌ಗೆ ₹5 ಲಕ್ಷ, ವಿಳಾಸವಿಲ್ಲದ ಪತ್ರಿಕೆಗೆ ಲಕ್ಷಾಂತರ ರೂಪಾಯಿ ವ್ಯಯಿಸಲಾಗಿದೆ. ₹1 ಸಾವಿರ ಮೌಲ್ಯದ ಪ್ರಥಮ ಚಿಕಿತ್ಸಾ ಪೆಟ್ಟಿಗೆಗೆ ₹10 ಸಾವಿರ ಬಿಡುಗಡೆ ಮಾಡಲಾಗಿದೆ. ದಿನಸಿ ವಸ್ತುಗಳನ್ನು ಮಾರುಕಟ್ಟೆ ಬೆಲೆಗೆ ಮೀರಿ ಖರೀದಿಸಲಾಗುತ್ತಿದೆ. ಬಡ ಮಕ್ಕಳ ಊಟದ ತಟ್ಟೆಯಲ್ಲಿ ಭ್ರಷ್ಟರು ಕೈ ಹಾಕಿರುವುದು ಅಮಾನುಷವಾದ ಕೃತ್ಯ’ ಎಂದರು.

ಪ್ರತಿಭಟನೆಯಲ್ಲಿ ರಾಜ್ಯ ಉಪಾಧ್ಯಕ್ಷ ಮಂಜುನಾಥ ಎಸ್., ರಾಜ್ಯ ಪ್ರಧಾನ ಕಾರ್ಯದರ್ಶಿ ರಘುಪತಿ ಭಟ್, ರಾಜ್ಯ ಸಂಘಟನಾ ಕಾರ್ಯದರ್ಶಿಗಳಾದ ರಘುನಂದನ, ರಮೇಶ್ ಗೌಡ, ಸೋಣಪ್ಪ ಗೌಡ, ಆನಂದ್, ಹಬೀಬ್, ಎಸ್‌ಸಿ–ಎಸ್‌ಟಿ ಘಟಕದ ಅಧ್ಯಕ್ಷ ಪಿ.ವೈ. ಗಣೇಶ್, ಯುವ ಘಟಕದ ಅಧ್ಯಕ್ಷ ನಿಖಿಲ್, ಪದಾಧಿಕಾರಿಗಳಾದ ಅಮಿತ್, ಅವಿನಾಶ್, ಧನಂಜಯ, ದೇವರಾಜ್, ಶ್ರೀನಿವಾಸನ್, ರೇಖಾ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.