ADVERTISEMENT

ಸುಳ್ಳು ಪ್ರಕರಣ: ಹೇಳಿಕೆ ದಾಖಲಿಸಿದ ಸ್ಯಾಂಟ್ರೊ ಪತ್ನಿ

​ಪ್ರಜಾವಾಣಿ ವಾರ್ತೆ
Published 23 ಜನವರಿ 2023, 19:10 IST
Last Updated 23 ಜನವರಿ 2023, 19:10 IST
   

ಬೆಂಗಳೂರು: ‘ಕಾಟನ್‌ಪೇಟೆ ಠಾಣೆಯಲ್ಲಿ ಸುಳ್ಳು ಪ್ರಕರಣ ದಾಖಲಿಸಿ ಸಹೋದರಿಯರನ್ನು ಬಂಧಿಸಿದ್ದ’ ಪ್ರಕರಣದ ತನಿಖೆಯನ್ನು ಸಿಸಿಬಿ ಪೊಲೀಸರು ಚುರುಕುಗೊಳಿಸಿದ್ದು, ಪ್ರಕರಣದ ಸಂತ್ರಸ್ತೆ ವಿಚಾರಣೆಗೆ ಹಾಜರಾಗಿ ಹೇಳಿಕೆ ದಾಖಲಿಸಿದ್ದಾರೆ.

ಪರಿಶಿಷ್ಟ ಸಮುದಾಯದ ಮಹಿಳೆ ಮೇಲೆ ಅತ್ಯಾಚಾರವೆಸಗಿ ಹಲ್ಲೆ ಮಾಡಿ ಕೊಲೆ ಬೆದರಿಕೆಯೊಡ್ಡಿದ್ದ ಪ್ರಕರಣದ ಆರೋಪಿ ಕೆ.ಎಸ್‌. ಮಂಜುನಾಥ್ ಅಲಿಯಾಸ್‌ ಸ್ಯಾಂಟ್ರೊ ರವಿ ಸಂಚಿನಲ್ಲಿ ಭಾಗಿಯಾಗಿದ್ದ ಪೊಲೀಸ್ ಇನ್‌ಸ್ಪೆಕ್ಟರ್ ಪ್ರವೀಣ್, ಸುಳ್ಳು ಪ್ರಕರಣ ದಾಖಲಿಸಿದ್ದರು. ಈ ಸಂಬಂಧ ಪ್ರವೀಣ್‌ ಅವರನ್ನು ಈಗಾಗಲೇ ಸೇವೆಯಿಂದ ಅಮಾನತು ಮಾಡಲಾಗಿದ್ದು, ಪ್ರಕರಣದ ತನಿಖೆಯನ್ನು ಸಿಸಿಬಿಗೆ ವಹಿಸಲಾಗಿದೆ.

ಸುಳ್ಳು ಪ್ರಕರಣದಲ್ಲಿ ಬಂಧಿತರಾಗಿದ್ದ ಸ್ಯಾಂಟ್ರೊ ಪತ್ನಿ ಹಾಗೂ ಅವರ ಸಹೋದರಿ, ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಚೇರಿಗೆ ಸೋಮವಾರ ಹಾಜರಾಗಿ ಹೇಳಿಕೆ ದಾಖಲಿಸಿದರು.

ADVERTISEMENT

‘ಕೆನರಾ ಬ್ಯಾಂಕ್‌ನಲ್ಲಿ ಖಾತೆ ಹೊಂದಿದ್ದೇನೆ. ನನ್ನ ಖಾಲಿ ಚೆಕ್ ಹಾಗೂ ಮೊಬೈಲ್ ಕದ್ದಿದ್ದ ಪತಿ (ಸ್ಯಾಂಟ್ರೊ ರವಿ), ಅವುಗಳನ್ನೇ ಪುರಾವೆಯನ್ನಾಗಿ ಮಾಡಿಸಿ ಇನ್‌ಸ್ಪೆಕ್ಟರ್ ಮೂಲಕ ಸುಳ್ಳು ಪ್ರಕರಣ ದಾಖಲಿಸಿದ್ದರು. ನಮಗೆ ಸಂಬಂಧವಿಲ್ಲದ ಪ್ರಕರಣದಲ್ಲಿ ಸಿಲುಕಿಸಿ, ಜೈಲಿಗೆ ಕಳುಹಿಸಿದ್ದರು’ ಎಂದು ಸಂತ್ರಸ್ತೆ ಹೇಳಿಕೆ ನೀಡಿರುವುದಾಗಿ ಗೊತ್ತಾಗಿದೆ.

‘ಸುಳ್ಳು ಪ್ರಕರಣ ಸಂಬಂಧ ಈಗಾಗಲೇ ಹಲವರನ್ನು ವಿಚಾರಣೆ ನಡೆಸಲಾಗಿದೆ. ಈಗ ಸಂತ್ರಸ್ತೆ ಹೇಳಿಕೆ ಪಡೆಯಲಾಗಿದೆ. ಇನ್‌ಸ್ಪೆಕ್ಟರ್ ಹಾಗೂ ಇತರರನ್ನು ಸದ್ಯದಲ್ಲೇ ವಿಚಾರಣೆ ಮಾಡಲಾಗುವುದು’ ಎಂದು ಸಿಸಿಬಿ ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.