ಬೆಂಗಳೂರು: ಪರಸ್ಪರ ಪ್ರೀತಿಸಿ ಪೋಷಕರ ವಿರೋಧ ಕಟ್ಟಿಕೊಂಡು ಮದುವೆಯಾಗಿದ್ದ ದಂಪತಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬ್ಯಾಡರಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ನಗರದ ಖಾಸಗಿ ಕಂಪನಿ ಉದ್ಯೋಗಿ ಪುನೀತ್ (21) ಹಾಗೂ ಅವರ ಪತ್ನಿ ಹರ್ಷಿತಾ (19) ಆತ್ಮಹತ್ಯೆ ಮಾಡಿಕೊಂಡವರು.
‘ಮಾಗಡಿ ತಾಲ್ಲೂಕಿನ ಚನ್ನೇನಹಳ್ಳಿಯ ಪುನೀತ್ ಹಾಗೂ ಹರ್ಷಿತಾ, 6 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಅವರ ಮದುವೆಗೆ ಮನೆಯವರ ವಿರೋಧವಿತ್ತು. ಆರು ತಿಂಗಳ ಹಿಂದಷ್ಟೇ ಮನೆ ಬಿಟ್ಟು ಬಂದು ಅವರಿಬ್ಬರು ಮದುವೆಯಾಗಿದ್ದರು. ಹಾರೋಹಳ್ಳಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು’ ಎಂದು ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ ಹೇಳಿದರು.
‘ಶುಕ್ರವಾರ ಬೆಳಿಗ್ಗೆ ಮನೆಯಲ್ಲೇ ಹರ್ಷಿತಾ ನೇಣು ಹಾಕಿಕೊಂಡು ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದರು. ಅವರನ್ನು ಚಿಕಿತ್ಸೆಗಾಗಿ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆಗೆ ಸ್ಪಂದಿಸದೇ ಹರ್ಷಿತಾ ತೀರಿಕೊಂಡಿದ್ದರು. ಆ ಸುದ್ದಿ ತಿಳಿಯುತ್ತಿದ್ದಂತೆ ಮನೆಗೆ ಹೋಗಿದ್ದ ಪುನೀತ್ ಸಹ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದೂ ತಿಳಿಸಿದರು.
‘ಹರ್ಷಿತಾ ಬರೆದಿದ್ದಾರೆ ಎನ್ನಲಾದ ಮರಣ ಪತ್ರ ಮನೆಯಲ್ಲಿ ಸಿಕ್ಕಿದೆ. ‘ನಾವಿಬ್ಬರು (ಪುನೀತ್–ಹರ್ಷಿತಾ) ಹೆಚ್ಚು ಇಷ್ಟಪಟ್ಟು ಮದುವೆಯಾಗಿದ್ದೇವೆ. ನಮ್ಮಿಬ್ಬರ ಮದುವೆಗೆ ತಂದೆ–ತಾಯಿ ಒಪ್ಪಿರಲಿಲ್ಲ. ಈಗ ಅವರಿಂದ ನಮಗೆ ತೊಂದರೆ ಆಗುತ್ತಿದೆ’ ಎಂದು ಪತ್ರದಲ್ಲಿ ಬರೆಯಲಾಗಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ’ ಎಂದೂ ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.