ADVERTISEMENT

ಎರಡು ತಿಂಗಳಲ್ಲಿ ಕ್ರಮಕ್ಕೆ ಆದೇಶ

ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಹಣಕಾಸು ಅವ್ಯವಹಾರ ಆರೋಪ

​ಪ್ರಜಾವಾಣಿ ವಾರ್ತೆ
Published 14 ಆಗಸ್ಟ್ 2019, 20:30 IST
Last Updated 14 ಆಗಸ್ಟ್ 2019, 20:30 IST

ಬೆಂಗಳೂರು: ’ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ (ಕೆಎಫ್‌ಸಿಸಿ) ನಡೆದಿದೆ ಎನ್ನಲಾದ ಹಣಕಾಸು ಅವ್ಯವಹಾರ ಮತ್ತು ಚುನಾವಣಾ ಅಕ್ರಮಗಳ ಬಗ್ಗೆ ಸಲ್ಲಿಸಲಾಗಿರುವ ದೂರನ್ನು ಪರಿಗಣಿಸಿ ಎರಡು ತಿಂಗಳಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸಿ’ ಎಂದು ರಾಜ್ಯ ಸಹಕಾರ ಸಂಘಗಳ ರಿಜಿಸ್ಟ್ರಾರ್‌ಗೆ ಹೈಕೋರ್ಟ್ ನಿರ್ದೇಶಿಸಿದೆ.

ಈ ಕುರಿತಂತೆ ಕೆಎಫ್‌ಸಿಸಿ ಸದಸ್ಯರೂ ಆದ ಚಿತ್ರ ನಿರ್ಮಾಪಕ ಟೇಶಿ ವೆಂಕಟೇಶ್, ನರಸಿಂಹ ರಾಜು ಮತ್ತು ಎಂ.ನಾರಾಯಣ ಮೂರ್ತಿ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಅಲೋಕ್‌ ಅರಾಧೆ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಲೇವಾರಿ ಮಾಡಿದೆ.

ಕೋರಿಕೆ ಏನು?: ‘2016–17ನೇ ಸಾಲಿನಲ್ಲಿ ಅಂದಿನ ಕೆಎಫ್‌ಸಿಸಿ ಕಾರ್ಯಕಾರಿ ಮಂಡಳಿ ಸದಸ್ಯರು ಅಧಿಕಾರ ದುರ್ಬಳಕೆ ಮಾಡಿದ್ದಾರೆ. ಹಣಕಾಸು ವಿಷಯಗಳಲ್ಲಿ ಅಪರಾ ತಪರಾ ನಡೆದಿದೆ. ಈ ಕುರಿತಂತೆ ಸಹಕಾರ ಸಂಘಗಳ ರಿಜಿಸ್ಟ್ರಾರ್‌ಗೆ ದೂರು ನೀಡಲಾಗಿದೆ. ಆದರೂ, ಪ್ರಯೋಜನವಾಗಿಲ್ಲ. ಆದ್ದರಿಂದ ಅಕ್ರಮಗಳ ಕರಿತು ತನಿಖೆ ನಡೆಸಲು ನಿರ್ದೇಶಿಸಬೇಕು ಹಾಗೂ ಕೆಎಫ್‌ಸಿಸಿಗೆ ಆಡಳಿತಾಧಿಕಾರಿ ನೇಮಿಸಬೇಕು’ ಎಂದು ಅರ್ಜಿದಾರರು ಕೋರಿದ್ದರು.

ADVERTISEMENT

‘2019ರ ಜೂನ್ 29ರಂದು ಕೆಎಫ್‌ಸಿಸಿಯ ಅಧ್ಯಕ್ಷ, ಉಪಾಧ್ಯಕ್ಷ, ಖಜಾಂಚಿ ಮತ್ತು ಕಾರ್ಯಕಾರಿ ಸಮಿತಿ ಸದಸ್ಯರ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಸಾಕಷ್ಟು ಅಕ್ರಮ ನಡೆದಿದೆ. ಚಿತ್ರ ನಿರ್ಮಾಪಕ ಸಾ.ರಾ.ಗೋವಿಂದು ಅವರ ಪುತ್ರ ಅನೂಪ್ ಗೌಡ ಕೆಎಫ್‌ಸಿಸಿ ಸದಸ್ಯರಲ್ಲ. ಆದರೂ, ಅವರು ಚುನಾವಣೆಯಲ್ಲಿ ಸ್ಪರ್ಧಿಸಿ ನಕಲಿ ಮತಗಳಿಂದ ಗೆಲುವು ಸಾಧಿಸಿದ್ದಾರೆ’ ಎಂದೂ ಅರ್ಜಿಯಲ್ಲಿ ದೂರಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.