ಬೆಂಗಳೂರು:ಕೊರೊನಾ ಸೋಂಕಿತರು ಹಾಗೂ ಸೋಂಕು ಶಂಕಿತರಿಗೆ ಚಿಕಿತ್ಸೆ ನೀಡಲು ಎಂ.ಎಸ್. ರಾಮಯ್ಯ ಆಸ್ಪತ್ರೆಯು ಪ್ರತ್ಯೇಕ ವಾರ್ಡ್ ನಿರ್ಮಿಸಿ, 200 ಹಾಸಿಗೆಗಳನ್ನು ಕಾಯ್ದಿರಿಸಿದೆ.
ಈ ಸಂಬಂಧ ಗೋಕುಲ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಆರ್. ಜಯರಾಮ್ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ, ಸರ್ಕಾರದೊಂದಿಗೆ ಕೈಜೋಡಿಸುವುದಾಗಿ ಭರವಸೆಯ ಪತ್ರ ನೀಡಿದ್ದಾರೆ..
‘ಯಾವುದೇ ತುರ್ತು ಸಮಯದಲ್ಲಿ ನಮ್ಮ ಆಸ್ಪತ್ರೆಯಲ್ಲಿ ಕೋವಿಡ್–19 ರೋಗಿಗಳನ್ನು ದಾಖಲಿಸಿಕೊಳ್ಳುತ್ತೇವೆ.ವೈದ್ಯರು ಹಾಗೂ ಇತರೆ ಸಿಬ್ಬಂದಿ ಸೋಂಕಿತರಿಗೆ ಚಿಕಿತ್ಸೆ ನೀಡಲು ಸಿದ್ಧರಾಗಿದ್ದಾರೆ. ಸೋಂಕು ನಿಯಂತ್ರಣಕ್ಕೆ ಸರ್ಕಾರ ಉತ್ತಮ ಕ್ರಮಗಳನ್ನು ಕೈಗೊಂಡಿದೆ. ವಿಕ್ಟೋರಿಯಾ ಹಾಗೂ ಬೌರಿಂಗ್ ಆಸ್ಪತ್ರೆಯಲ್ಲಿ ಕೂಡ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ನಾವು ಈ ಕಾರ್ಯದಲ್ಲಿ ಸರ್ಕಾರದೊಂದಿಗೆ ಕೈ ಜೋಡಿಸಿದ್ದೇವೆ’ ಎಂದು ಡಾ.ಎಂ.ಆರ್. ಜಯರಾಮ್ ತಿಳಿಸಿದರು.
‘ನಮ್ಮ ಆಸ್ಪತ್ರೆಯ ಪ್ರಮುಖರು ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ.ಸೂಚನೆ ಬಂದ ಬಳಿಕ ರೋಗಿಗಳನ್ನು ದಾಖಲಿಸಿಕೊಳ್ಳುತ್ತೇವೆ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.