ಬೆಂಗಳೂರು: ಕೊರೊನಾ ಸೋಂಕಿತರಿಗೆ ಪೇಯಿಂಗ್ ಗೆಸ್ಟ್ ಕಟ್ಟಡ ಖಾಲಿ ಮಾಡುವಂತೆ ತಾಕೀತು ಮಾಡಿದ್ದ ಮಾಲೀಕನನ್ನು ಪ್ರಶ್ನಿಸಲು ಹೋದ ಸೋಂಕಿತರ ಸ್ನೇಹಿತನಿಗೆ ಚಾಕುವಿನಿಂದ ಇರಿಯಲಾಗಿದ್ದು, ಈ ಸಂಬಂಧ ಮೈಕೊ ಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
‘ಹಲ್ಲೆ ಬಗ್ಗೆ ಜೆ.ಪಿ. ನಗರದ ಅತುಲ್ ದೂರು ನೀಡಿದ್ದಾರೆ. ಆರೋಪಿ ಸಿಜೊ ಜಾರ್ಜ್ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.
‘ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಮೂವರು, ಪೇಯಿಂಗ್ ಗೆಸ್ಟ್ ಕಟ್ಟಡದಲ್ಲಿ ಉಳಿದುಕೊಂಡಿದ್ದರು. ಇತ್ತೀಚೆಗೆ ಅವರಿಗೆ ಕೊರೊನಾ ಸೋಂಕು ತಗುಲಿತ್ತು. ಅದು ಗೊತ್ತಾಗುತ್ತಿದ್ದಂತೆ ಕಟ್ಟಡದ ಮಾಲೀಕ, ಕೊಠಡಿ ಖಾಲಿ ಮಾಡುವಂತೆ ತಾಕೀತು ಮಾಡಿದ್ದ. ದಿಕ್ಕು ತೋಚದಂತಾದ ಮೂವರು, ಸ್ನೇಹಿತ ಅತುಲ್ಗೆ ಮಾಹಿತಿ ನೀಡಿದ್ದರು’
‘ಸ್ಥಳಕ್ಕೆ ಬಂದಿದ್ದ ಅತುಲ್, ಸ್ನೇಹಿತ ಪರವಾಗಿ ಮಾತನಾಡಿದ್ದರು. ಇಂಥ ಸಂದರ್ಭದಲ್ಲಿ ಕಟ್ಟಡ ಖಾಲಿ ಮಾಡುವುದು ಹೇಗೆ ಎಂದು ಪ್ರಶ್ನಿಸಿದ್ದರು. ಅಷ್ಟಕ್ಕೆ ಮಾತಿಗೆ ಮಾತು ಬೆಳೆದು ಜಗಳ ಶುರುವಾಗಿತ್ತು. ಕಟ್ಟಡದ ಮಾಲೀಕರ ಸಂಬಂಧಿ ಸಿಜೊ ಜಾರ್ಜ್, ಅತುಲ್ ಅವರ ಹೊಟ್ಟೆಗೆ ಚಾಕುವಿನಿಂದ ಇರಿದಿದ್ದಾರೆ ಎನ್ನಲಾಗಿದೆ. ಆರೋಪಿಯನ್ನು ವಿಚಾರಣೆ ನಡೆಸಬೇಕಿದೆ’ ಎಂದೂ ಪೊಲೀಸ್ ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.