ADVERTISEMENT

ಒಂದು ದಿನದ ವೇತನ ನೀಡಲು ಶಿಕ್ಷಕರ ನಕಾರ

​ಪ್ರಜಾವಾಣಿ ವಾರ್ತೆ
Published 28 ಮೇ 2021, 21:55 IST
Last Updated 28 ಮೇ 2021, 21:55 IST

ಬೆಂಗಳೂರು: ಸಂಕಷ್ಟದಲ್ಲಿರುವ ಖಾಸಗಿ ಅನುದಾನ ರಹಿತ ಶಾಲೆಗಳ ಶಿಕ್ಷಕರಿಗೆ ಹಣಕಾಸಿನ ನೆರವು ನೀಡಲು ಐದು ದಿನಗಳ ವೇತನವನ್ನು ದೇಣಿಗೆ ನೀಡಿ ಎಂಬ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್‌ಕುಮಾರ್ ಮನವಿಯನ್ನು, ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಸ್ಪಷ್ಟವಾಗಿ ನಿರಾಕರಿಸಿದೆ.

ಅನುದಾನ ರಹಿತ ಶಾಲೆಗಳ ಶಿಕ್ಷಕರು ಮತ್ತು ಸಿಬ್ಬಂದಿಗೆ ಪ್ಯಾಕೇಜ್ ನೀಡಬೇಕು ಎಂದು ವಿಧಾನ ಪರಿಷತ್ತಿನ ಶಿಕ್ಷಕರು ಮತ್ತು ಪದವೀಧರ ಕ್ಷೇತ್ರಗಳ ಸದಸ್ಯರು ಶಿಕ್ಷಣ ಸಚಿವರು ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದರು. ಇದರ ಬೆನ್ನಲ್ಲೇ, ಶಿಕ್ಷಕರ ಸಂಘಗಳ ಪದಾಧಿಕಾರಿಗಳ ಜತೆ ಸಭೆ ನಡೆಸಿದ್ದ ಸಚಿವ ಸುರೇಶ್‌ಕುಮಾರ್‌, ಐದು ದಿನಗಳ ವೇತನ ದೇಣಿಗೆಯಾಗಿ ನೀಡಿ ಎಂದು ಮನವಿ ಮಾಡಿದ್ದರು. ಅದಕ್ಕೆ ಸಂಘದ ಪದಾಧಿಕಾರಿಗಳು ಒಪ್ಪದೇ ಇದ್ದಾಗ, ಕನಿಷ್ಠ ಒಂದು ದಿನದ ವೇತನ ನೀಡುವಂತೆ ಮನವೊಲಿಸುವ ಯತ್ನ ಮಾಡಿದ್ದರು.

ಒಂದು ದಿನ ವೇತನ ಕೊಡಲು ಸಾಧ್ಯವಿಲ್ಲ ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ನಿರ್ಣಯ ತೆಗೆದುಕೊಂಡಿದೆ. ‘ಹಾಗೊಂದು ವೇಳೆ ಒಂದು ದಿನದ ವೇತನ ನೀಡಬೇಕಾದರೆ ಸರ್ಕಾರ ನಮ್ಮ ಬೇಡಿಕೆಗಳನ್ನು ಒಪ್ಪಬೇಕು ಮತ್ತು ತುಟ್ಟಿಭತ್ಯೆ ಬಿಡುಗಡೆ ಮಾಡಬೇಕು’ ಎಂದು ಸರ್ಕಾರಕ್ಕೆ ತಿಳಿಸಿರುವುದಾಗಿ ಪದಾಧಿಕಾರಿಯೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.