ADVERTISEMENT

ಕೋವಿಡ್: ಶಾಲೆ, ಕಚೇರಿ ಮುಚ್ಚಬೇಕಿಲ್ಲ: ಆರೋಗ್ಯ ಇಲಾಖೆ

ಪರಿಷ್ಕೃತ ಸುತ್ತೋಲೆ ಹೊರಡಿಸಿದ ಆರೋಗ್ಯ ಇಲಾಖೆ

​ಪ್ರಜಾವಾಣಿ ವಾರ್ತೆ
Published 28 ಜೂನ್ 2022, 16:16 IST
Last Updated 28 ಜೂನ್ 2022, 16:16 IST

ಬೆಂಗಳೂರು: ಶಾಲೆ ಮತ್ತು ಕಚೇರಿಗಳಲ್ಲಿ ಕೋವಿಡ್ ಪ್ರಕರಣಗಳು ದೃಢಪಟ್ಟರೂ ಮುಚ್ಚಬೇಕಾಗಿಲ್ಲ. ಆದರೆ, ಸೋಂಕಿನ ಲಕ್ಷಣ ಹೊಂದಿರುವವರನ್ನು ಬರದಂತೆ ನಿರ್ಬಂಧಿಸಿ, ಸ್ವಯಂ ನಿಗಾ ವ್ಯವಸ್ಥೆಗೆ ಒಳಪಡಿಸಬೇಕು ಎಂದು ಆರೋಗ್ಯ ಇಲಾಖೆ ಸೂಚಿಸಿದೆ.

ನಗರದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಳವಾಗುತ್ತಿರುವುದರಿಂದ ಬಿಬಿಎಂಪಿ ಹಾಗೂ ಬೆಂಗಳೂರು ನಗರ ಜಿಲ್ಲೆಗೆ ಸಂಬಂಧಿಸಿದಂತೆ ಇಲಾಖೆಯ ಆಯುಕ್ತ ಡಿ. ರಂದೀಪ್ ಪರಿಷ್ಕೃತ ಸುತ್ತೋಲೆ ಹೊರಡಿಸಿದ್ದಾರೆ.

‘ವಿದ್ಯಾರ್ಥಿಗಳು ಹಾಗೂ ಉದ್ಯೋಗಿಗಳು ಕೋವಿಡ್ ಲಕ್ಷಣ ಕಾಣಿಸಿಕೊಂಡಾಗ ರ್‍ಯಾಪಿಡ್ ಆ್ಯಂಟಿಜೆನ್ ಪರೀಕ್ಷೆಗೆ ಒಳಪಡಬೇಕು. ಸೋಂಕಿತರಾಗಿಲ್ಲ ಎಂಬ ವರದಿ ಬಂದಲ್ಲಿ ಆರ್‌ಟಿ–ಪಿಸಿಆರ್ ಪರೀಕ್ಷೆ ಮಾಡಿಸಿಕೊಳ್ಳಬೇಕು. ಕ್ಲಸ್ಟರ್‌ಗಳಲ್ಲಿ ರೋಗ ಲಕ್ಷಣಗಳು ಇರುವವರಿಗೆ ರ್‍ಯಾಪಿಡ್ ಆ್ಯಂಟಿಜೆನ್ ಪರೀಕ್ಷೆ ಮಾಡಿಸಬೇಕು. ಕ್ಲಸ್ಟರ್ ಪ್ರಕರಣಗಳು ವರದಿಯಾದ ಶಿಕ್ಷಣ ಸಂಸ್ಥೆಗಳಲ್ಲಿ ಕೊಠಡಿಗಳನ್ನು ಸೋಂಕು ನಿವಾರಕ ದ್ರಾವಣದಿಂದ ಸ್ವಚ್ಛಗೊಳಿಸಬೇಕು’ ಎಂದು ಹೇಳಿದ್ದಾರೆ.

ADVERTISEMENT

‘ಅಪಾರ್ಟ್‌ಮೆಂಟ್ ವಸತಿ ಸಮುಚ್ಚಯದಲ್ಲಿ3–5 ಕೋವಿಡ್ ಪ್ರಕರಣಗಳು ವರದಿಯಾದಲ್ಲಿ ಸಣ್ಣ ಕ್ಲಸ್ಟರ್ ಎಂದು ಪರಿಗಣಿಸಿ, ನಿಗದಿತ ಬ್ಲಾಕ್‌ನಲ್ಲಿ ಲಕ್ಷಣ ಹೊಂದಿರುವವರನ್ನು ಪರೀಕ್ಷೆಗೆ ಒಳಪಡಿಸಬೇಕು.5ಕ್ಕಿಂತ ಹೆಚ್ಚು ಪ್ರಕರಣಗಳು ದೃಢಪಟ್ಟರೆ ದೊಡ್ಡ ಕ್ಲಸ್ಟರ್ ಎಂದು ಪರಿಗಣಿಸಬೇಕು. 15 ಅಥವಾ ಅದಕ್ಕಿಂತ ಹೆಚ್ಚಿನ ಪ್ರಕರಣಗಳು ವರದಿಯಾದಲ್ಲಿ ಅಪಾರ್ಟ್‌ಮೆಂಟ್ ವಸತಿ ಸಮುಚ್ಚಯದಲ್ಲಿ ಲಕ್ಷಣ ಹೊಂದಿರುವ ಎಲ್ಲರನ್ನೂ ರ್‍ಯಾಪಿಡ್ ಆ್ಯಂಟಿಜೆನ್ ಪರೀಕ್ಷೆಗೆ ಒಳಪಡಿಸಬೇಕು. ಸೋಂಕಿತರಾದಲ್ಲಿ ಆರೋಗ್ಯ ಸ್ಥಿತಿಗೆ ಅನುಗುಣವಾಗಿ ಆಸ್ಪತ್ರೆ, ಆರೈಕೆ ಕೇಂದ್ರ ಅಥವಾ ಮನೆ ಚಿಕಿತ್ಸೆ ನಿರ್ಧರಿಸಬೇಕು’ ಎಂದು ತಿಳಿಸಿದ್ದಾರೆ.

‘60 ವರ್ಷ ಮೇಲ್ಪಟ್ಟವರು ಹಾಗೂ ಗಂಭೀರ ಅನಾರೋಗ್ಯ ಸಮಸ್ಯೆ ಇರುವವರಿಗೆ ಕೋವಿಡ್ ಲಕ್ಷಣಗಳು ಗೋಚರಿಸಿದರೆ ಆರ್‌ಟಿ–ಪಿಸಿಆರ್ ಪರೀಕ್ಷೆ ಮಾಡಿಸಬೇಕು. ಕೋವಿಡ್ ಪೀಡಿತರ ಮನೆಯಲ್ಲಿ ಕೆಲಸ ಮಾಡುವವರು 60 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಬೇಕು. ರೋಗ ಲಕ್ಷಣಗಳಿಂದ ಮುಕ್ತವಾಗಿರಬೇಕು’ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.