ಬೆಂಗಳೂರು: ‘ಶಿವಾಜಿನಗರದ ಬ್ರಾಡ್ ವೇ ರಸ್ತೆಯಲ್ಲಿರುವ ಬಿಬಿಎಂಪಿಗೆ ಸೇರಿದ ಕಟ್ಟಡವನ್ನು ಸುಸಜ್ಜಿತ ಕೋವಿಡ್ ಆಸ್ಪತ್ರೆಯನ್ನಾಗಿ ಸಜ್ಜುಗೊಳಿಸಲಾಗುತ್ತಿದೆ. ಮುಂದಿನ 10 ದಿನಗಳ ಒಳಗೆ ಆಸ್ಪತ್ರೆ ಚಿಕಿತ್ಸೆಗೆ ಸಂಪೂರ್ಣ ಸಿದ್ಧವಾಗಲಿದೆ’ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದರು.
ಸ್ಥಳಕ್ಕೆ ಭೇಟಿ ನೀಡಿದ ಡಾ.ಕೆ. ಸುಧಾಕರ್, ಸಿದ್ಧತಾ ಕಾರ್ಯವನ್ನು ಪರಿಶೀಲಿಸಿದರು. ‘₹ 30 ಕೋಟಿ ವೆಚ್ಚದಲ್ಲಿಆಸ್ಪತ್ರೆಗೆ ಅಗತ್ಯ ಮೂಲಸೌಕರ್ಯವನ್ನು ಇನ್ಫೊಸಿಸ್ ಪ್ರತಿಷ್ಠಾನ ಒದಗಿಸುತ್ತಿದೆ. ಈ ಆಸ್ಪತ್ರೆಯನ್ನು ಕೊರೊನಾ ಸೋಂಕಿತರಿಗೆ ಚಿಕಿತ್ಸೆ ಒದಗಿಸಲು ಬಳಸಿಕೊಳ್ಳಲಾಗುವುದು.ಆರಂಭದಲ್ಲಿ ಹೈ ಫ್ಲೋ ಆಕ್ಸಿಜನ್ ಹೊಂದಿರುವ 180 ಹಾಸಿಗೆಗಳ ಸೌಕರ್ಯ ಒದಗಿಸಲಾಗುತ್ತಿದ್ದು, ಅಗತ್ಯವಿದ್ದಲ್ಲಿ ವೆಂಟಿಲೇಟರ್ ಅಳವಡಿಸುವ ವ್ಯವಸ್ಥೆಯನ್ನು ರೂಪಿಸಲಾಗುತ್ತದೆ. ಸದ್ಯ 30 ವೆಂಟಿಲೇಟರ್ ಒದಗಿಸಲಾಗುತ್ತಿದೆ’ ಎಂದು ತಿಳಿಸಿದರು.
ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಗೆ ಭೇಟಿ ನೀಡಿದ ಅವರು, ಚಿಕಿತ್ಸೆ ಹಾಗೂ ಅಲ್ಲಿನ ವ್ಯವಸ್ಥೆ ಬಗ್ಗೆ ಮಾಹಿತಿ ಪಡೆದರು. ರೋಗಿಗಳು ಹಾಗೂ ತೀವ್ರ ನಿಗಾ ಘಟಕದಲ್ಲಿ ಕಾರ್ಯನಿರ್ವಹಿಸುವ ಆರೋಗ್ಯ ಸಿಬ್ಬಂದಿ ಜತೆಗೆ ವಿಡಿಯೊ ಸಂವಾದ ನಡೆಸಿದರು. ಆಸ್ಪತ್ರೆಯಲ್ಲಿ ಕೋವಿಡ್ ಮರಣ ಪ್ರಮಾಣ ಹೆಚ್ಚು ಇರುವ ಹಿನ್ನೆಲೆಯಲ್ಲಿ ಮರಣ ಮೌಲ್ಯಮಾಪನ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.