ಬೆಂಗಳೂರು: ‘ಬಿಎಂಟಿಸಿ ಸಿಬ್ಬಂದಿಯಲ್ಲಿ ಹೆಚ್ಚುತ್ತಿರುವ ಕೋವಿಡ್ ಸೋಂಕು ಅಪಾಯಕಾರಿ ಬೆಳವಣಿಗೆಯಾಗಿದ್ದು, ಎಚ್ಚರಿಕೆ ಕ್ರಮಗಳನ್ನು ಆಡಳಿತ ಮಂಡಳಿ ವಹಿಸಬೇಕು’ ಎಂದು ಸಿಪಿಐ(ಎಂ) ಬೆಂಗಳೂರು ಉತ್ತರ ಮತ್ತು ದಕ್ಷಿಣ ಜಿಲ್ಲಾ ಸಮಿತಿ ಆಗ್ರಹಿಸಿದೆ.
‘ಬಲವಂತದ ರಜೆ ನೀಡಿ ಕೆಲವರನ್ನು ಕೆಲಸದಿಂದ ಹೊರಗಿಟ್ಟಿರುವುದು ಮತ್ತು ಕಡಿಮೆ ಬಸ್ಸುಗಳನ್ನು ಕಾರ್ಯಾಚರಣೆ ಮಾಡುತ್ತಿರುವ ಕಾರಣ ಬಸ್ಗಳಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚಾಗುತ್ತಿದೆ. ಇದರಿಂದಾಗಿ ಸಿಬ್ಬಂದಿ ಹಾಗೂ ಪ್ರಯಾಣಿಕರಿಬ್ಬರಿಗೂ ಸೋಂಕು ಹೆಚ್ಚಾಗುತ್ತಿದೆ’ ಎಂದು ಸಮಿತಿ ಅಭಿಪ್ರಾಯಪಟ್ಟಿದೆ.
‘6 ಅಡಿ ಅಂತರ ಎಂಬ ಕೋವಿಡ್ ನಿಯಮಕ್ಕೆ ಬಸ್ಗಳಲ್ಲಿ ಬೆಲೆ ಇಲ್ಲವಾಗಿದೆ. ದಟ್ಟಣೆ ನಡುವೆ ನಿಂತು ಪ್ರಯಾಣಿಸಬೇಕಾದ ಅನಿವಾರ್ಯತೆಯನ್ನು ಬಿಎಂಟಿಸಿ ಸೃಷ್ಟಿಸಿದೆ. ಅದಕ್ಕೆ ಸಿಬ್ಬಂದಿಯನ್ನು ಹೊಣೆಗಾರರನ್ನಾಗಿ ಮಾಡಿ ದಂಡ ಮತ್ತು ಅಮಾನತ್ತಿನಂತಹ ಶಿಕ್ಷೆಗಳನ್ನು ವಿಧಿಸಲಾಗುತ್ತಿದೆ. ಕೋವಿಡ್ಗೆ ಸಿಬ್ಬಂದಿ ಮತ್ತು ಪ್ರಯಾಣಿಕರು ತುತ್ತಾಗುವುದನ್ನು ತಪ್ಪಿಸಲು ಅಗತ್ಯ ಎಚ್ಚರಿಕಾ ಕ್ರಮಗಳನ್ನು ವಹಿಸಬೇಕು. ಸೋಂಕಿಗೆ ಬಲಿಯಾಗಿರುವ ಸಿಬ್ಬಂದಿ ಕುಟುಂಬಕ್ಕೆ ₹30 ಲಕ್ಷ ಪರಿಹಾರ ನೀಡಬೇಕು’ ಎಂದು ಆಗ್ರಹಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.