ಬೆಂಗಳೂರು: ಕೋವಿಡ್ 1ನೇ ಅಲೆಯ ವೇಳೆ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಶಿಕ್ಷಣ ಸಂಸ್ಥೆಗಳ ಸಿಬ್ಬಂದಿಗೆ ಕೋವಿಡ್ ಲಸಿಕೆಯ 1ನೇ ಡೋಸ್ ಕಡ್ಡಾಯಗೊಳಿಸಿದ್ದನ್ನು ಪ್ರಶ್ನಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಮಂಗಳೂರಿನ ವೈದ್ಯ ಡಾ. ಶ್ರೀನಿವಾಸ ಬಿ.ಕಕ್ಕಿಲಾಯ ಮತ್ತಿತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಶನಿವಾರ ಪರಿಶೀಲಿಸಿದ ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ, ‘ಈ ವಿಚಾರದಲ್ಲಿ ಸರ್ಕಾರಕ್ಕೆ ಯಾವುದೇ ನಿರ್ದೇಶನ ನೀಡಲು ಸಾಧ್ಯವಿಲ್ಲ’ ಎಂಬ ಅಭಿಪ್ರಾಯದೊಂದಿಗೆ ಅರ್ಜಿ ವಿಲೇವಾರಿ ಮಾಡಿದೆ.
‘ಲಸಿಕೆ ಕಡ್ಡಾಯ ಮಾಡಿ ಸರ್ಕಾರ 2020ರ ಜುಲೈ 16ರಂದು ಹೊರಡಿಸಿರುವ ಸುತ್ತೋಲೆ ನಾಗರಿಕರ ಮೂಲಭೂತ ಹಕ್ಕಿನ ಉಲ್ಲಂಘನೆ’ ಎಂದು ಅರ್ಜಿದಾರರು ಆಕ್ಷೇಪಿಸಿದ್ದರು.
17 ಅರ್ಜಿಗಳ ವಿಲೇವಾರಿ:
ಕೊರೊನಾ ನಿಯಂತ್ರಣ, ನಿರ್ವಹಣೆ ಮತ್ತು ಚಿಕಿತ್ಸೆಗೆ ಸಂಬಂಧಿಸಿದಂತೆ 2020ರ ಮಾರ್ಚ್ನಿಂದ ಸಲ್ಲಿಕೆಯಾಗಿದ್ದ ಸುಮಾರು 20 ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಈ ಪೈಕಿ 17 ಅರ್ಜಿಗಳನ್ನು ವಿಲೇವಾರಿ ಮಾಡಿದೆ.
"ಹೊಸ ವೈರಸ್ ಪತ್ತೆಯಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹೊಸ ಮಾರ್ಗ ಸೂಚಿಗಳನ್ನು ಹೊರಡಿಸಿದೆ. ಹೀಗಿರುವಾಗ ಸರ್ಕಾರ ಏನೂ ಮಾಡಿಲ್ಲ ಎಂಬ ಆಕ್ಷೇಪವನ್ನು ಒಪ್ಪಲು ಸಾಧ್ಯವಿಲ್ಲ" ಎಂದು ಹೈಕೋರ್ಟ್ ಹೇಳಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.