ಬೆಂಗಳೂರು: ‘ಕೋವಿಡ್ ಲಸಿಕೆಗೆ ಸಂಬಂಧಿಸಿದಂತೆ ಶನಿವಾರದಿಂದ (ಜ.2) ತಾಲೀಮು ನಡೆಸಲು ಬಿಬಿಎಂಪಿ ವ್ಯಾಪ್ತಿಯ ಎರಡು ಆರೋಗ್ಯ ಕೇಂದ್ರಗಳು ಹಾಗೂ ಬೆಂಗಳೂರು ನಗರ ಹೊರವಲಯದ ಒಂದು ಕೇಂದ್ರವನ್ನು ಗುರುತಿಸಲಾಗಿದೆ’ ಎಂದು ಬಿಬಿಎಂಪಿ ಆಡಳಿತಾಧಿಕಾರಿ ಗೌರವ್ ಗುಪ್ತಾ ತಿಳಿಸಿದರು.
ಸುದ್ದಿಗಾರರೊಂದಿಗೆ ಶುಕ್ರವಾರ ಮಾತನಾಡಿದ ಅವರು, ‘ದೇಶದಾದ್ಯಂತ ಲಸಿಕೆಯ ತಾಲೀಮು (ಡ್ರೈ ರನ್) ನಡೆಯಲಿದೆ. ಪಾಲಿಕೆ ವ್ಯಾಪ್ತಿಯಲ್ಲಿ ಎಲ್ಲ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ಲಸಿಕೆಯ ತಾಲೀಮು ನಡೆಸುವ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ತರಬೇತಿಯನ್ನೂ ನೀಡಲಾಗಿದೆ. ಪಾಲಿಕೆ ವ್ಯಾಪ್ತಿಯಲ್ಲಿ ದಕ್ಷಿಣ ವಲಯದ ವಿದ್ಯಾಪೀಠದಲ್ಲಿರುವ ಸಾರ್ವಜನಿಕ ಆರೋಗ್ಯ ಕೇಂದ್ರ ಹಾಗೂ ಪಶ್ಚಿಮ ವಲಯದ ಕಾಮಾಕ್ಷಿಪಾಳ್ಯದಲ್ಲಿರುವ ಸಾರ್ವಜನಿಕ ಆರೋಗ್ಯ ಕೇಂದ್ರದಲ್ಲಿ ಅಣಕು ಕಾರ್ಯಾಚರಣೆ ನಡೆಸಲಾಗುತ್ತದೆ’ ಎಂದು ವಿವರಿಸಿದರು.
‘ನಗರದ ಹೊರವಲಯದಲ್ಲಿರುವ ಆನೇಕಲ್ನ ಹರ್ಗಾದೆಯಲ್ಲಿರುವ ಸಾರ್ವಜನಿಕ ಆರೋಗ್ಯ ಕೇಂದ್ರದಲ್ಲಿ ಕೂಡ ಲಸಿಕೆಯ ತಾಲೀಮಿಗೆ ವ್ಯವಸ್ಥೆ ಮಾಡಲಾಗಿದೆ. 2 ಗಂಟೆಗಳ ಅವಧಿ ತಾಲೀಮು ನಡೆಯಲಿದ್ದು, ಪ್ರತಿ ಸಾರ್ವಜನಿಕ ಆರೋಗ್ಯ ಕೇಂದ್ರದಲ್ಲಿ 25 ಮಂದಿ ಆರೋಗ್ಯ ಕಾರ್ಯಕರ್ತರನ್ನು ಗುರುತಿಸಲಾಗಿದೆ. ಮೂರು ಕೇಂದ್ರಗಳಿಂದ ಒಟ್ಟು 75 ಕಾರ್ಯಕರ್ತರನ್ನು ಪೂರ್ವಾಭ್ಯಾಸಕ್ಕೆ ಒಳಪಡಿಸಲಾಗುತ್ತದೆ. ತಾಲೀಮು ನಡೆಸಿರುವ ಬಗ್ಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಲಾಗುತ್ತದೆ’ ಎಂದು ಹೇಳಿದರು.
‘ಕೋವಿಡ್ ಕಾಯಿಲೆಗೆ ಲಸಿಕೆ ನೀಡಲು ನಗರದಲ್ಲಿ ಒಟ್ಟು 1,517 ಆರೋಗ್ಯ ಕೇಂದ್ರಗಳನ್ನು ಗುರುತಿಸಲಾಗಿದೆ. ಜನವರಿ ಅಂತ್ಯ ಅಥವಾ ಫೆಬ್ರುವರಿ ಮೊದಲ ವಾರದಲ್ಲಿ ಲಸಿಕೆ ನೀಡುವ ಕಾರ್ಯಕ್ರಮ ಪ್ರಾರಂಭಿಸಲು ಯೋಜನೆ ರೂಪಿಸಲಾಗಿದೆ’ ಎಂದು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.