ಬೆಂಗಳೂರು: ರಾಜ್ಯದಲ್ಲಿರುವ 10 ಸಾವಿರಕ್ಕೂ ಹೆಚ್ಚು ಕ್ರೀಡಾಪಟುಗಳಿಗೆ ಕೋವಿಡ್ ಲಸಿಕೆ ನೀಡಲಾಗುವುದು ಎಂದು ಯುವ ಸಬಲೀಕರಣ ಮತ್ತು ಕ್ರೀಡೆ, ಯೋಜನೆ, ಕಾರ್ಯಕ್ರಮ ಸಂಯೋಜನೆ ಹಾಗೂ ಸಾಂಖ್ಯಿಕ ಇಲಾಖೆ ಸಚಿವ ನಾರಾಯಣಗೌಡ ಹೇಳಿದರು.
ನಗರದ ಕಂಠೀರವ ಕ್ರೀಡಾಂಗಣದಲ್ಲಿ ಗುರುವಾರ ಬ್ಯಾಡ್ಮಿಂಟನ್ ಕ್ರೀಡಾಪಟು ಅನುಪ್ ಶ್ರೀಧರ್ ಅವರಿಗೆ ಲಸಿಕೆ ಹಾಕಿಸುವ ಮೂಲಕ ಕ್ರೀಡಾಪಟುಗಳಿಗೆ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿದರು.
ಪ್ರತಿಯೊಬ್ಬ ಕ್ರೀಡಾಪಟುವೂ ಹೆಸರು ನೋಂದಾಯಿಸಿಕೊಂಡು ಲಸಿಕೆ ಪಡೆದುಕೊಳ್ಳಬೇಕು. ಬೆಂಗಳೂರು ಸೇರಿದಂತೆ ಎಲ್ಲ ಜಿಲ್ಲಾ ಕೇಂದ್ರಗಳಲ್ಲೂ ಲಸಿಕೆ ನೀಡಲಾಗುತ್ತಿದೆ. ರಾಜ್ಯದಲ್ಲಿ ಕೊರೊನಾ ಕಡಿಮೆ ಆಗುತ್ತಿದ್ದರೂ, ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳುವುದು ಅತ್ಯಗತ್ಯ. ದೈಹಿಕ ಕ್ಷಮತೆ ಸದಾಕಾಲ ಕಾಪಾಡಿಕೊಳ್ಳುವುದು ಕ್ರೀಡಾಪಟುಗಳ ಆದ್ಯ ಕರ್ತವ್ಯ ಎಂದು ಅವರು ಹೇಳಿದರು.
ಪಿ.ಎನ್. ಪ್ರಕಾಶ್- ಶೂಟರ್, ನಿಖಿಲ್- ಶೂಟರ್, ನಿಶಿತಾ- ರೋಯಿಂಗ್, ಶ್ರೇಯಾ ಬಿ. - ರೋಯಿಂಗ್, ಭೂಮಿಕಾ ಆರ್. ಕೇಸರಕರ್- ಈಜು, ಪ್ರಿಯಾ ಮೋಹನ್- ಅಥ್ಲಿಟ್ , ರಾಷ್ಟ್ರೀಯ ಛಾಂಪಿಯನ್ ಗಳಾದ ಐಶ್ವರ್ಯ, ಯಶ್ವಂತ್, ಅಕ್ಷಯ್ ಸೇರಿದಂತೆ ನೂರಾರು ಕ್ರೀಡಾಪಟುಗಳು ಮೊದಲ ಡೋಸ್ ಲಸಿಕೆ ಪಡೆದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.