ಬೆಂಗಳೂರು: ಬಿಬಿಎಂಪಿ ಶಾಲೆ ಶಿಕ್ಷಕಿ ಪೂಜಾ (34) ಎಂಬುವರು ನೇಣು ಹಾಕಿಕೊಂಡು ಶನಿವಾರ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಬಗ್ಗೆ ಗಿರಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
‘ಗಿರಿನಗರ ನಿವಾಸಿ ಪೂಜಾ, ಬಿಬಿಎಂಪಿ ಶಾಲೆಯೊಂದರಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಶಿಕ್ಷಕಿ ಆಗಿ ಕೆಲಸ ಮಾಡುತ್ತಿದ್ದರು’ ಎಂದು ಪೊಲೀಸ್ ಮೂಲಗಳು ಹೇಳಿವೆ.
‘ಮನೆಯಲ್ಲಿ ಯಾರೂ ಇಲ್ಲದ ವೇಳೆ ಕೊಠಡಿಯಲ್ಲಿ ನೇಣು ಹಾಕಿಕೊಂಡು ಪೂಜಾ ಆತ್ಮಹತ್ಯೆಗೆ ಶರಣಾಗಿದ್ದಾರೆ. ಪತಿಯಿಂದ ವಿಚ್ಛೇದನ
ಪಡೆದಿದ್ದ ಪೂಜಾ, ಮಾನಸಿಕವಾಗಿ ನೊಂದಿ ದ್ದರು. ಇದೇ ವಿಚಾರವಾಗಿ ಜೀವನದಲ್ಲಿ ಜುಗುಪ್ಸೆ ಗೊಂಡು ಅವರು ಆತ್ಮಹತ್ಯೆ ಮಾಡಿಕೊಂಡಿರುವ ಮಾಹಿತಿ ಇದೆ’ ಎಂದು ತಿಳಿಸಿವೆ.
ಶುಶ್ರೂಷಕಿ ಆತ್ಮಹತ್ಯೆ: ಗಿರಿನಗರ ಠಾಣೆ ವ್ಯಾಪ್ತಿಯಲ್ಲಿ ವಾಸವಿದ್ದ ಶುಶ್ರೂಷಕಿ ಸುಮಿತ್ರಾ (33) ಎಂಬುವವರು ನೇಣು ಹಾಕಿಕೊಂಡು ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
‘ಆಸ್ಪತ್ರೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಸುಮಿತ್ರಾ, ಅವಿವಾಹಿತೆ. ಒಂಟಿಯಾಗಿ ಮನೆಯಲ್ಲಿ ವಾಸವಿದ್ದರು. ಅವರ ಅಕ್ಕ ಹಾಗೂ ಸಂಬಂಧಿಕರು, ಆಗಾಗ ಮನೆಗೆ ಬಂದು ಹೋಗುತ್ತಿದ್ದರು.’
‘ಮನೆಯ ಕೊಠಡಿಯಲ್ಲೇ ನೇಣು ಹಾಕಿಕೊಂಡು ಸುಮಿತ್ರಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಬರೆದಿದ್ದಾರೆ ಎನ್ನಲಾದ ಮರಣಪತ್ರ ಸ್ಥಳದಲ್ಲಿ ಸಿಕ್ಕಿದೆ. ‘ನನ್ನನ್ನು ಖುಷಿಯಾಗಿ ಕಳುಹಿಸಿ ಕೊಡಿ. ನನ್ನ ಸಾವಿಗೆ ನಾನೇ ಕಾರಣ’ ಎಂದು ಪತ್ರದಲ್ಲಿ ಬರೆಯಲಾಗಿದ್ದು, ಪರಿಶೀಲಿಸಲಾಗುತ್ತಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.