ADVERTISEMENT

ರೌಡಿ, ಕೊಲೆ ಆರೋಪಿಗೆ ಗುಂಡೇಟು

​ಪ್ರಜಾವಾಣಿ ವಾರ್ತೆ
Published 18 ನವೆಂಬರ್ 2020, 21:10 IST
Last Updated 18 ನವೆಂಬರ್ 2020, 21:10 IST
ಗುಂಡೇಟಿನಿಂದ ಗಾಯಗೊಂಡಿರುವ ಆರೋಪಿ ವಿಶ್ವನಾಥ್ ಸೈಕೊ
ಗುಂಡೇಟಿನಿಂದ ಗಾಯಗೊಂಡಿರುವ ಆರೋಪಿ ವಿಶ್ವನಾಥ್ ಸೈಕೊ   

ಬೆಂಗಳೂರು: ನಗರ ಪೊಲೀಸರ ಪಿಸ್ತೂಲ್ ಸದ್ದು ಮಾಡಿದ್ದು, ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಆರೋಪಿಗಳನ್ನು ಗುಂಡು ಹಾರಿಸಿ ಸೆರೆ ಹಿಡಿಯಲಾಗಿದೆ.

ಪಶ್ಚಿಮ ವಿಭಾಗ ಹಾಗೂ ಸಿಸಿಬಿ ಪೊಲೀಸರು, ಪ್ರತ್ಯೇಕವಾಗಿ ಕಾರ್ಯಾ ಚರಣೆ ನಡೆಸಿ ಆರೋಪಿಗಳಿಬ್ಬರನ್ನು ಬಂಧಿಸಿದ್ದಾರೆ.

‘ಕಾಮಾಕ್ಷಿಪಾಳ್ಯ ಠಾಣೆ ವ್ಯಾಪ್ತಿಯಲ್ಲಿ ಇತ್ತೀಚೆಗೆ ಮಂಜುನಾಥ್ (28) ಎಂಬು ವರನ್ನು ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ ವಿಶ್ವನಾಥ್ ಅಲಿಯಾಸ್ ಸೈಕೊ ಎಂಬಾತನನ್ನು ವಿಜಯನಗರ ಉಪ ವಿಭಾಗದ ಎಸಿಪಿ ನಂಜುಂಡೇಗೌಡ ಹಾಗೂ ಇನ್‌ಸ್ಪೆಕ್ಟರ್ ಪ್ರಶಾಂತ್ ಅವರು ಬುಧವಾರ ನಸುಕಿನಲ್ಲಿ ಗುಂಡು ಹೊಡೆದು ಸೆರೆ ಹಿಡಿದಿದ್ದಾರೆ’ ಎಂದು ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ ತಿಳಿಸಿದರು.

ADVERTISEMENT

‘ಜಯನಗರ ನಿವಾಸಿಯಾದ ವಿಶ್ವನಾಥ್, ಬ್ಯಾಡರಹಳ್ಳಿ ಬಳಿಯ ಬ್ರಹ್ಮದೇವರ ಗುಡ್ಡದಲ್ಲಿರುವ ಪಾಳು ಮನೆಯಲ್ಲಿ ಅವಿತುಕೊಂಡಿದ್ದ. ಅಲ್ಲಿಗೆ ಪೊಲೀಸರ ವಿಶೇಷ ತಂಡ ಹೋಗಿತ್ತು. ಹೆಡ್ ಕಾನ್‌ಸ್ಟೆಬಲ್ ಮಂಜುನಾಥ್ ಎಂಬುವರ ಮೇಲೆಯೇ ಆರೋಪಿ ಡ್ರ್ಯಾಗರ್‌ನಿಂದ ಹಲ್ಲೆ ಮಾಡಿದ್ದ. ಅವಾಗ ಆರೋಪಿ ತೊಡೆಗೆ ಗುಂಡು ಹಾರಿಸಲಾಗಿದೆ. ಕುಸಿದು ಬಿದ್ದ ಆತನನ್ನು ಹಾಗೂ ಗಾಯಗೊಂಡಿದ್ದ ಹೆಡ್ ಕಾನ್‌ಸ್ಟೆಬಲ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದೂ ಅವರು ಮಾಹಿತಿ ನೀಡಿದರು.

ರೌಡಿ ಬೊಂಡಾ ಮಂಜನಿಗೆ ಗುಂಡೇಟು: 23 ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡು ಓಡಾಡುತ್ತಿದ್ದ ರೌಡಿ ಬೊಂಡಾ ಮಂಜ ಎಂಬಾತನನ್ನು ಸಿಸಿಬಿ ಇನ್‌ಸ್ಪೆಕ್ಟರ್ ಪುನೀತ್ ಅವರು ಗುಂಡು ಹಾರಿಸಿ ಬಂಧಿಸಿದ್ದಾರೆ.

‘ಹಲವು ದಿನಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ, ಸಾರ್ವಜನಿಕರನ್ನು ಬೆದರಿಸುತ್ತಿದ್ದ. ಆತನ ಬಂಧನಕ್ಕೆ ನ್ಯಾಯಾಲಯದಿಂದ ವಾರಂಟ್ ಸಹ ಜಾರಿಯಾಗಿತ್ತು. ಮಂಗಳವಾರ ರಾತ್ರಿ ಆತನನ್ನು ಬಂಧಿಸಲು ಪೊಲೀಸರ ವಿಶೇಷ ತಂಡ ತೆರಳಿತ್ತು. ಹೆಡ್ ಕಾನ್‌ಸ್ಟೆಬಲ್ ಮೇಲೆಯೇ ಆತ ಡ್ರ್ಯಾಗರ್‌ನಿಂದ ಹಲ್ಲೆ ಮಾಡಿದ್ದ. ಆತ್ಮರಕ್ಷಣೆಗಾಗಿ ಇನ್‌ಸ್ಪೆಕ್ಟರ್ ಪುನೀತ್, ಆರೋಪಿ ಕಾಲಿಗೆ ಗುಂಡು ಹಾರಿಸಿದ್ದರು. ಗಾಯಗೊಂಡಿರುವ ಆರೋಪಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಸಿಸಿಬಿ ಜಂಟಿ ಕಮಿಷನರ್ ಸಂದೀಪ್ ಪಾಟೀಲ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.