ಬೆಂಗಳೂರು: ಸುಮನಹಳ್ಳಿ ನಿರಾಶ್ರಿತರ ಕೇಂದ್ರದಲ್ಲಿ ಮಹಿಳಾ ನೌಕರರೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದಡಿ, ಅದೇ ಕೇಂದ್ರದ ಅಧಿಕಾರಿ ಚಂದ್ರಪ್ಪ (52) ಅವರನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ.
‘ಕೇಂದ್ರದಲ್ಲಿ ಹಲವು ವರ್ಷಗಳಿಂದ ಕೆಲಸ ಮಾಡುತ್ತಿರುವ ಮಹಿಳೆ ದೂರು ನೀಡಿದ್ದರು. ಅದರನ್ವಯ ಪ್ರಕರಣ ದಾಖಲಿಸಿಕೊಂಡು ಚಂದ್ರಪ್ಪ ಅವರನ್ನು ಬಂಧಿಸಲಾಗಿದೆ. ಸದ್ಯ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.
‘ಮಹಿಳೆ ಕೆಲಸ ಮಾಡುವ ಸ್ಥಳಕ್ಕೆ ಹೋಗುತ್ತಿದ್ದ ಚಂದ್ರಪ್ಪ, ಅಲ್ಲಿದ್ದ ಇತರೆ ನೌಕರರನ್ನು ಹೊರಗೆ ಕಳುಹಿಸುತ್ತಿದ್ದರು. ಮಹಿಳೆಯನ್ನು ಮಾತ್ರ ಕೊಠಡಿಯಲ್ಲಿ ಇರಿಸಿಕೊಂಡು ಅಸಭ್ಯವಾಗಿ ವರ್ತಿಸುತ್ತಿದ್ದರು. ಅಂಗಾಂಗಗಳನ್ನು ಮುಟ್ಟಿ ದೌರ್ಜನ್ಯ ಎಸಗುತ್ತಿದ್ದರು. ಈ ಸಂಗತಿ ದೂರಿನಲ್ಲಿದೆ.’
‘ನನ್ನ ಜೊತೆ ಮಲಗು’ ಎಂದು ಮಹಿಳೆಯನ್ನು ಪೀಡಿಸುತ್ತಿದ್ದರು. ತನ್ನ ಜೊತೆ ಸಹಕರಿಸದಿದ್ದರೆ ಜೀವ ಸಹಿತ ಬಿಡುವುದಿಲ್ಲವೆಂದು ಬೆದರಿಸಿದ್ದರು’ ಎಂದೂ ಮೂಲಗಳು ತಿಳಿಸಿವೆ.
ವರ್ಗಾವಣೆ ಆಗಿ ಬಂದಿದ್ದರು: ‘ಸುಮನಹಳ್ಳಿ ನಿರಾಶ್ರಿತರ ಕೇಂದ್ರದಲ್ಲಿದ್ದ ಚಂದ್ರಪ್ಪ ಅವರನ್ನು ಕೆಲ ತಿಂಗಳ ಹಿಂದಷ್ಟೇ ವರ್ಗಾವಣೆ ಮಾಡಲಾಗಿತ್ತು. ಇತ್ತೀಚೆಗೆ ಮರು ವರ್ಗಾವಣೆ ಮಾಡಿಸಿಕೊಂಡು ಸುಮನಹಳ್ಳಿ ಕೇಂದ್ರಕ್ಕೆ ವಾಪಸು ಬಂದಿದ್ದರು’ ಎಂದೂ ಮೂಲಗಳು ಹೇಳಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.