ADVERTISEMENT

ಪಕ್ಷ ಸೂಚಿಸಿದರೆ ರಾಜೀನಾಮೆಗೆ ಸಿದ್ಧ: ಸಿ.ಟಿ.ರವಿ

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ

​ಪ್ರಜಾವಾಣಿ ವಾರ್ತೆ
Published 27 ಸೆಪ್ಟೆಂಬರ್ 2020, 20:01 IST
Last Updated 27 ಸೆಪ್ಟೆಂಬರ್ 2020, 20:01 IST
ಸಿ.ಟಿ. ರವಿ
ಸಿ.ಟಿ. ರವಿ   

ಬೆಂಗಳೂರು: ಒಬ್ಬರಿಗೆ ಒಂದೇ ಹುದ್ದೆ ಎಂಬ ಸೂತ್ರದಂತೆ ಪಕ್ಷ ಸೂಚಿಸಿದರೆ ಸಚಿವ ಸ್ಥಾನಕ್ಕೆ ರಾಜೀ ನಾಮೆ ನೀಡಲು ಸಿದ್ಧ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಗೊಂಡಿರುವ ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ ಹೇಳಿದ್ದಾರೆ.

ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣಾದಲ್ಲಿ ಭಾನುವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ನಾನು ಪಕ್ಷದ ಶಿಸ್ತಿನ ಸಿಪಾಯಿ. ಪಕ್ಷ ಯಾವ ಸೂಚನೆ ನೀಡುತ್ತದೆಯೊ ಅದರಂತೆ ನಡೆದುಕೊಳ್ಳುತ್ತೇನೆ. ರಾಜೀನಾಮೆಗೆ ಸೂಚಿಸಿದರೆ ತಕ್ಷಣವೇ ಸಚಿವ ಸ್ಥಾನ ಬಿಡುತ್ತೇನೆ’ ಎಂದರು.

‘ಚುನಾವಣೆಗೆ ಸ್ಪರ್ಧಿಸಬೇಕೆಂದು ವರಿಷ್ಠರು ಸೂಚಿಸಿದಾಗ ಮರು ಮಾತ ನಾಡದೆ ಸ್ಪರ್ಧಿಸಿ, ಗೆದ್ದು ಬಂದಿದ್ದೇನೆ. ಎಂದಿಗೂ ಸಚಿವ ಸ್ಥಾನಕ್ಕಾಗಿ ಲಾಬಿ ಮಾಡಲಿಲ್ಲ. ಸಚಿವನಾಗುವ ನಿರೀಕ್ಷೆ ಯನ್ನೂ ಇಟ್ಟುಕೊಂಡಿರಲಿಲ್ಲ. ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡುವಂತೆಯೂ ಕೇಳಿರಲಿಲ್ಲ. ವರಿಷ್ಠರು ನನ್ನ ಮೇಲೆ ನಂಬಿಕೆ ಇರಿಸಿ ಜವಾಬ್ದಾರಿ ನೀಡಿದ್ದಾರೆ.
ಅವರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುವುದು ನನ್ನ ಮುಂದಿನ ಗುರಿ’ ಎಂದು ಹೇಳಿದರು.

ADVERTISEMENT

‘ಪಕ್ಷದ ಸಾಮಾನ್ಯ ಕಾರ್ಯ ಕರ್ತನಂತೆಯೇ ಮುಂದುವರಿಯುತ್ತೇನೆ. ರಾಷ್ಟ್ರ ರಾಜಕಾರಣಕ್ಕೆ ಹೋದರೂ ಕರ್ನಾಟಕವೇ ನನ್ನ ರಾಜಕೀಯ ಕರ್ಮಭೂಮಿ. ದೆಹಲಿಯಲ್ಲಿ ರಾಜಕಾರಣ ಮಾಡದೆ ಕರ್ನಾಟಕದಲ್ಲಿ ಪಕ್ಷ ಸಂಘಟನೆಗೆ ಶ್ರಮಿಸುತ್ತೇನೆ’ ಎಂದು ರವಿ ಪ್ರತಿಕ್ರಿಯಿಸಿದರು.

ಎಪಿಎಂಸಿ ಹಾಗೂ ಭೂ ಸುಧಾರಣಾ ತಿದ್ದುಪಡಿ ಮಸೂದೆಗಳು ರೈತರ ಪರವಾಗಿವೆ. ಆದರೆ, ವಿರೋಧ ಪಕ್ಷಗಳು ರಾಜಕೀಯ ದುರುದ್ದೇಶದಿಂದ ರೈತರನ್ನು ಎತ್ತಿ ಕಟ್ಟುವ ಕೆಲಸ ಮಾಡುತ್ತಿವೆ ಎಂದು ದೂರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.