ಬೆಂಗಳೂರು: ಕಬ್ಬನ್ ಪಾರ್ಕ್ ವ್ಯಾಪ್ತಿಯೊಳಗೆ ಕಾನೂನು ಬಾಹಿರವಾಗಿ ನಿರ್ಮಾಣ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಆರೋಪಿಸಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಆಧರಿಸಿ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ನೀಡಿದೆ.
‘ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ, ಜಲ ಮಂಡಳಿ, ಸೆಂಚುರಿ ಕ್ಲಬ್, ಕರ್ನಾಟಕ ರಾಜ್ಯ ಲಾನ್ ಟೆನಿಸ್ ಅಸೋಸಿಯೇಷನ್, ಸಚಿವಾಲಯ ಕ್ಲಬ್, ದಿ ಪ್ರೆಸ್ ಕ್ಲಬ್ ಮತ್ತು ಯಂಗ್ ಮೆನ್ಸ್ ಕ್ರಿಶ್ಚಿಯನ್ ಅಸೋಸಿಯೇಷನ್ನಿಂದ ಅಕ್ರಮವಾಗಿ ನಿರ್ಮಾಣ ಕಾಮಗಾರಿ ನಿರ್ವಹಿಸಲಾಗುತ್ತಿದೆ’ ಎಂದು ಆರೋಪಿಸಿ ಕಬ್ಬನ್ ಪಾರ್ಕ್ ನಡಿಗೆದಾರರ ಸಂಘ ಅರ್ಜಿ ಸಲ್ಲಿಸಿದೆ.
‘ಈ ಸಂಬಂಧ ಲೋಕಾಯುಕ್ತಕ್ಕೂ ಹಲವು ಬಾರಿ ದೂರು ಸಲ್ಲಿಸಲಾಗಿದೆ. ನಂತರವೂ ನಿರ್ಮಾಣ ಕಾಮಗಾರಿ ಮುಂದುವರಿದಿದೆ’ ಎಂದು ಆರೋಪಿಸಲಾಗಿದೆ.
‘2001ರ ಆಗಸ್ಟ್ 13ರಂದು ಹೈಕೋರ್ಟ್ ಹೊರಡಿಸಿರುವ ಆದೇಶದ ಪ್ರಕಾರ, ಯಾವುದೇ ನಿರ್ಮಾಣ ಕಾರ್ಯಕ್ಕೂ ನ್ಯಾಯಾಲಯದ ಅನುಮತಿ ಪಡೆಯಬೇಕು. ಆದರೆ, ಅನುಮತಿ ಇಲ್ಲದೆ ಕಾಮಗಾರಿ ನಡೆಸಲಾಗುತ್ತಿದೆ. ಅಲ್ಲದೇ ಇದು ಕರ್ನಾಟಕ ಉದ್ಯಾನಗಳ ಸಂರಕ್ಷಣೆ ಕಾಯ್ದೆಯ ಉಲ್ಲಂಘನೆ’ ಎಂದು ದೂರಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.