ADVERTISEMENT

ಸಾಂಸ್ಕೃತಿಕ ಗುಲಾಮಗಿರಿಯಿಂದ ಮುಕ್ತರಾಗಿ: ಎಸ್‌.ಜಿ.ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 1 ಜನವರಿ 2026, 20:52 IST
Last Updated 1 ಜನವರಿ 2026, 20:52 IST
<div class="paragraphs"><p>ವಿಧಾನಸೌಧದ ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಯ ಮುಂಭಾಗ ಭೀಮಾ ಕೋರೆಗಾಂವ್ ವಿಜಯೋತ್ಸವದ ಪ್ರಯುಕ್ತ ಆಯೋಜಿಸಿದ್ದ&nbsp;ಕಾರ್ಯಕ್ರಮದಲ್ಲಿ ಮೇಣದ ಬತ್ತಿ&nbsp;ಹಚ್ಚುವ ಮೂಲಕ ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಲಾಯಿತು. </p></div>

ವಿಧಾನಸೌಧದ ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಯ ಮುಂಭಾಗ ಭೀಮಾ ಕೋರೆಗಾಂವ್ ವಿಜಯೋತ್ಸವದ ಪ್ರಯುಕ್ತ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮೇಣದ ಬತ್ತಿ ಹಚ್ಚುವ ಮೂಲಕ ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಲಾಯಿತು.

   

ಬೆಂಗಳೂರು: ಸಾಂಸ್ಕೃತಿಕ ಗುಲಾಮಗಿರಿಯಿಂದ ಮುಕ್ತವಾಗದ ಹೊರತು ಪ್ರಜಾಪ್ರಭುತ್ವ ಉಳಿಸಿಕೊಳ್ಳಲು ಆಗುವುದಿಲ್ಲ. ಎಲ್ಲರಿಗೂ ಸಮಾನವಾಗಿ ಬೇಕಾಗಿರುವ ಅವಕಾಶ ಪಡೆದುಕೊಳ್ಳಲು ಆಗುವುದಿಲ್ಲ ಎಂದು ಸಾಹಿತಿ ಎಸ್.ಜಿ.ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.

ಕರ್ನಾಟಕ ದಲಿತ ಸಂಘರ್ಷ ಸಮಿತಿ ನಗರ ಜಿಲ್ಲಾ ಸಮಿತಿ ವತಿಯಿಂದ ವಿಧಾನಸೌಧ ಮುಂಭಾಗದ ಅಂಬೇಡ್ಕರ್ ಪ್ರತಿಮೆ ಎದುರು ಗುರುವಾರ ಆಯೋಜಿಸಿದ್ದ 208ನೇ ಭೀಮಾ ಕೋರೆಗಾಂವ್ ವಿಜಯೋತ್ಸವ ಪ್ರಯುಕ್ತ ‘ಸಾಮಾಜಿಕ ಸಮಾನತಾ ದಿನ’ ಕಾರ್ಯಕ್ರಮದಲ್ಲಿ ಮಾತನಾಡಿದರು.

‘ಅಂಬೇಡ್ಕರ್ ಅವರು ಹೇಳಿದಂತೆ ಶಿಕ್ಷಣ, ಸಂಘಟನೆ, ಹೋರಾಟ ಮಾತ್ರ ದಮನಿತ ಸಮುದಾಯಗಳಿಗೆ ದಿಕ್ಕು ತೋರಿಸುವಂತಹ ದಾರಿಗಳು. ವಂಚನೆಗೆ ಒಳಗಾಗಿರುವ ಸಮುದಾಯಗಳ ಚರಿತ್ರೆ ದಾಖಲಾಗಿರಲಿಲ್ಲ. ಕೋರೆಗಾಂವ್ ಯುದ್ಧದ ಬಗ್ಗೆಯೂ ಚರಿತ್ರೆಯಲ್ಲಿ ದಾಖಲಾಗಿರಲಿಲ್ಲ. ಅಂಬೇಡ್ಕರ್ ಶೋಧಿಸದೇ ಇದ್ದರೇ, ಕೋರೆಗಾಂವ್ ಯುದ್ಧದ ವಿಜಯೋತ್ಸವವನ್ನು ಆಚರಣೆ ಮಾಡಲು ಆಗುತ್ತಿರಲಿಲ್ಲ’ ಎಂದು ತಿಳಿಸಿದರು.

ADVERTISEMENT

‘ಅಂಬೇಡ್ಕರ್ ಅವರ ಶೋಧನೆಯ ಫಲವಾಗಿ ಚರಿತ್ರೆ ಪುನರ್ ರಚಿತವಾಗಿದೆ. ಚರಿತ್ರೆಯನ್ನು ಮರೆತ ಜನಾಂಗ ವರ್ತಮಾನವನ್ನು ಅರ್ಥ ಮಾಡಿಕೊಳ್ಳಲಾಗದು, ವರ್ತಮಾನವನ್ನು ಅರ್ಥ ಮಾಡಿಕೊಳ್ಳದಿರುವ ಜನಾಂಗ, ಭವಿಷ್ಯವನ್ನು ರೂಪಿಸಿಕೊಳ್ಳುವುದಿಲ್ಲ. ನಾವು ಓದುತ್ತಿರುವ ಚರಿತ್ರೆ ಒಂದು ರೀತಿಯಲ್ಲಿ ತಿರುಚಿದ ಚರಿತ್ರೆಯಾಗಿದೆ. ‌ಇತ್ತೀಚೆಗೆ ವಾಟ್ಸ್ಆ್ಯಪ್‌ಗಳಲ್ಲಿ ಹರಿದಾಡುತ್ತಿರುವುದು ತಿರುಚಿರುವ ಚರಿತ್ರೆ. ವಂಚಿತ ಸಮುದಾಯಗಳ ವಿರುದ್ಧವಾದ ಚರಿತ್ರೆ. ಮಕ್ಕಳು ಅದನ್ನೇ ಓದುತ್ತಿದ್ದಾರೆ’ ಎಂದು ಬೇಸರ ವ್ಯಕ್ತಪಡಿಸಿದರು.

‘ನಮಗೆ ಸ್ವಾತಂತ್ರ್ಯ ಸಿಕ್ಕಿದೆ. ಆದರೆ, ಸಾಂಸ್ಕೃತಿಕ ಗುಲಾಮಗಿರಿಯಿಂದ ಮುಕ್ತಿ ಸಿಕ್ಕಿಲ್ಲ. ಎಲ್ಲರೂ ಮನುಷ್ಯರಾಗಿ ಬದುಕೋಣ. ಚರಿತ್ರೆಯನ್ನು ಸರಿಯಾಗಿ ಅರ್ಥ ಮಾಡಿಕೊಳ್ಳೋಣ’ ಎಂದರು.

ಇದೇ ವೇಳೆ ಮೇಣದ ಬತ್ತಿ ಹಚ್ಚಿ ಭೀಮಾ ಕೋರೆಗಾಂವ್ ಯುದ್ಧದಲ್ಲಿ ಹುತಾತ್ಮರಾದವರಿಗೆ ಗೌರವ ಸಲ್ಲಿಸಲಾಯಿತು. ಸಾಹಿತಿ ಮೂಡ್ನಾಕೂಡು ಚಿನ್ನಸ್ವಾಮಿ, ದಲಿತ ಸಂಘರ್ಷ ಸಮಿತಿಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್, ಹೋರಾಟಗಾರ್ತಿ ಇಂದಿರಾ ಕೃಷ್ಣಪ್ಪ, ಪತ್ರಕರ್ತ ಡಿ.ಉಮಾಪತಿ, ವಕೀಲ ನರಸಿಂಹಮೂರ್ತಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.