ಬೆಂಗಳೂರು: ‘ದೇಶದ ಭದ್ರತೆ ಮತ್ತು ಸುರಕ್ಷತೆ ಕಾಪಾಡುವಲ್ಲಿ ಪೊಲೀಸರ ಪಾತ್ರ ಮಹತ್ವದ್ದು. ಪೊಲೀಸರು ಪ್ರಾಮಾಣಿಕ ಹಾಗೂ ನಿಷ್ಪಕ್ಷಪಾತವಾಗಿ ಕಾರ್ಯ ನಿರ್ವಹಿಸಬೇಕು’ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ. ಸಲೀಂ ತಿಳಿಸಿದರು.
ಥಣಿಸಂದ್ರದ ಪೊಲೀಸ್ ತರಬೇತಿ ಶಾಲಾ ಆವರಣದಲ್ಲಿ ಆಯೋಜಿಸಿದ್ದ 8ನೇ ತಂಡದ 416 ನಾಗರಿಕ ಪೊಲೀಸ್ ಕಾನ್ಸ್ಟೆಬಲ್ಗಳ ನಿರ್ಗಮನ ಪಥ ಸಂಚಲನದಲ್ಲಿ ಗೌರವ ವಂದನೆ ಸ್ವೀಕರಿಸಿ ಅವರು ಮಾತನಾಡಿದರು.
‘ಆಧುನಿಕ ಯುಗದಲ್ಲಿ ತಂತ್ರಜ್ಞಾನ ಬದಲಾಗುತ್ತಿದೆ. ಮೌಲ್ಯಗಳು, ಆದರ್ಶಗಳು ಸದಾ ಮಾರ್ಗದರ್ಶನ ಆಗಬೇಕು. ಉತ್ತಮ ಮೌಲ್ಯಗಳನ್ನು ಆದರ್ಶವಾಗಿ ತೆಗೆದುಕೊಂಡಾಗ ಮಾತ್ರ ಪೊಲೀಸ್ ಇಲಾಖೆ ಉತ್ತಮ ಸ್ಥಾನ ಪಡೆಯಲು ಸಾಧ್ಯವಾಗುತ್ತದೆ’ ಎಂದರು.
‘ತಂತ್ರಜ್ಞಾನ ಬೆಳವಣಿಗೆ ಆದಂತೆ ಅಪರಾಧಗಳ ಸ್ವರೂಪವೂ ಸಹ ಬದಲಾಗಿದೆ. ಸೈಬರ್ ಅಪರಾಧಗಳು, ದರೋಡೆ, ಸುಲಿಗೆ, ಕೊಲೆಯಂತಹ ಗಂಭೀರ ಪ್ರಕರಣಗಳನ್ನು ಪತ್ತೆ ಹಚ್ಚಲು ಸನ್ನದ್ಧರಾಗಿರಬೇಕು. ಸೈಬರ್ ಅಪರಾಧ ನಿಯಂತ್ರಿಸಲು ಹೊಸ ತಂತ್ರಜ್ಞಾನಕ್ಕೆ ಅನುಗುಣವಾಗಿ ಕಾರ್ಯ ನಿರ್ವಹಿಸಲು ಪ್ರಶಿಕ್ಷಣಾರ್ಥಿಗಳು ಸಜ್ಜಾಗಬೇಕು’ ಎಂದರು.
ಥಣಿಸಂದ್ರ ಪೊಲೀಸ್ ತರಬೇತಿ ಶಾಲೆಯ ಎಸ್ಪಿ ಎಂ. ಬಾಬು ಅವರು ಪ್ರತಿಜ್ಞಾವಿಧಿ ಬೋಧಿಸಿದರು.
ಪ್ರಶಿಕ್ಷಣಾರ್ಥಿಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು. ನಂತರ, ವಿವಿಧ ವಿಭಾಗಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಪ್ರಶಿಕ್ಷಣಾರ್ಥಿಗಳಿಗೆ ಸಲೀಂ ಅವರು ಬಹುಮಾನ ವಿತರಿಸಿದರು. ನಂತರ, ‘ಹೆಜ್ಜೆ ಗುರುತು’ ಸ್ಮರಣ ಸಂಚಿಕೆ ಬಿಡುಗಡೆ ಮಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.