ಬೆಂಗಳೂರು: ದಿವಂಗತ ಮಾಜಿ ಪ್ರಧಾನಿ ವಾಜಪೇಯಿಯವರ ಸ್ಮರಣಾರ್ಥವಾಗಿ ತಮ್ಮ ನೇತೃತ್ವದ ಉನ್ನತ ಶಿಕ್ಷಣ, ಐಟಿ-ಬಿಟಿ ಮತ್ತು ಕೌಶಲ್ಯಾಭಿವೃದ್ಧಿ ಹಾಗೂ ಜೀವನೋಪಾಯ ಇಲಾಖೆಗಳಲ್ಲಿ ಡಿ.1ರಿಂದ 'ಸುಶಾಸನ ಮಾಸ'ವನ್ನು ಆಚರಿಸಲಾಗುವುದು ಎಂದು ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ಆ ಮಾಸದಲ್ಲಿ ನಡೆಸಬೇಕಾದ ಕಾರ್ಯಕ್ರಮಗಳ ಕುರಿತು ಚರ್ಚಿಸಲು ಅವರು ಮೂರೂ ಇಲಾಖೆಗಳ ಉನ್ನತಾಧಿಕಾರಿಗಳ ಜತೆ ಗುರುವಾರ ಸಭೆ ನಡೆಸಿದರು.
ತಮ್ಮ ಇಲಾಖೆಗಳಲ್ಲಿನ ಹಲವು ಸುಧಾರಣಾ ಕ್ರಮಗಳನ್ನು ಇಡೀ ತಿಂಗಳು ಜನರಿಗೆ ತಿಳಿಸುವ ಸಲುವಾಗಿ ನಿರಂತರ ಕಾರ್ಯಕ್ರಮಗಳನ್ನು ಸುಶಾಸನ ಮಾಸದ ಸಂದರ್ಭದಲ್ಲಿ ಆಯೋಜಿಸಲಾಗುವುದು. ಡಿ.25ರಂದು ಸಮಾರೋಪ ಸಮಾರಂಭ ನಡೆಯಲಿದ್ದು, ಅಂದು ಮುಖ್ಯಮಂತ್ರಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಸಂಪೂರ್ಣವಾಗಿ ಹೊಸ ರೂಪ ನೀಡಲಾಗುವುದು. ಜತೆಗೆ ಕೌಶಲಾಭಿವೃದ್ಧಿ ಇಲಾಖೆಯ ಮೂಲಕ 10 ಸಾವಿರ ಜನರಿಗೆ ವಿವಿಧ ಸಂಸ್ಥೆಗಳಲ್ಲಿ ಉದ್ಯೋಗ ಕೊಡಿಸುವ ಸಂಬಂಧ ನೇಮಕಾತಿ ಪತ್ರಗಳನ್ನು ನೀಡಲಾಗುವುದು. ಹಾಗೆಯೇ, ಜಿಟಿಟಿಸಿ ಸುವರ್ಣ ಸಂಭ್ರಮದ ಅಂಗವಾಗಿ ಕಟ್ಟಿರುವ ನೂತನ ಕಟ್ಟಡವನ್ನು ಈ ಸಂದರ್ಭದಲ್ಲಿ ಲೋಕಾರ್ಪಣೆ ಮಾಡಲಾಗುವುದು. ತಾಂತ್ರಿಕ ಶಿಕ್ಷಣ ಇಲಾಖೆಗೆ ನೇಮಕಾತಿ ಮತ್ತು ವೃಂದ ನಿಯಮಗಳನ್ನು ಕೂಡ 15 ವರ್ಷಗಳ ನಂತರ ರೂಪಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಸುಶಾಸನ ಮಾಸಾಚರಣೆಯ ಅಂಗವಾಗಿ, ಉತ್ತಮ ವಿ.ವಿ.ಗಳು ಸೇರಿದಂತೆ ಹಲವು ವಿಭಾಗಗಳಲ್ಲಿ ಪ್ರಶಸ್ತಿಗಳನ್ನು ನೀಡುವ ಉದ್ದೇಶ ಇದೆ ಎಂದು ತಿಳಿಸಿ, ಇದಕ್ಕಾಗಿ ಸಿದ್ಧಗೊಳ್ಳುವಂತೆ ಅಧಿಕಾರಿಗಳಿಗೆ ಅವರು ಸೂಚಿಸಿದರು.
ಇದಲ್ಲದೆ, ಎಲ್ಲ ಕಾಲೇಜುಗಳಲ್ಲೂ ಎನ್ಇಪಿ ಮತ್ತು ಅದರ ಪ್ರಗತಿ ಕುರಿತು ಪ್ರಬಂಧ ಮತ್ತು ಚರ್ಚಾಸ್ಪರ್ಧೆಗಳನ್ನು ಆಯೋಜಿಸಲು ಸಚಿವರು ಸೂಚಿಸಿದರು. ರಾಜ್ಯದಲ್ಲಿ ಅಸ್ತಿತ್ವಕ್ಕೆ ಬರುತ್ತಿರುವ ಏಳು ಹೊಸ ವಿ.ವಿ.ಗಳಲ್ಲಿ ಆಗಬೇಕಿರುವ ಹುದ್ದೆಗಳ ನೇಮಕಾತಿಗೆ ಅನುಮೋದನೆ ಕೊಡಲಾಗುವುದು ಎಂದು ಅವರು ಹೇಳಿದರು.
ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಉಪಾಧ್ಯಕ್ಷ ಪ್ರೊ ತಿಮ್ಮೇಗೌಡ, ಐಟಿಬಿಟಿ ಇಲಾಖೆ ಹೆಚ್ವುವರಿ ಮುಖ್ಯ ಕಾರ್ಯದರ್ಶಿ ರಮಣರೆಡ್ಡಿ, ಕೌಶಲ್ಯಾಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ, ಐಟಿಬಿಟಿ ನಿರ್ದೇಶಕಿ ಮೀನಾ ನಾಗರಾಜ, ಉದ್ಯೋಗ ಮತ್ತು ತರಬೇತಿ ಇಲಾಖೆ ಆಯುಕ್ತೆ ಜ್ಯೋತಿ, ಕಿಯೋನಿಕ್ಸ್ ವ್ಯವಸ್ಥಾಪಕ ನಿರ್ದೇಶಕ ರವಿ ಡಿ.ಚನ್ನಣ್ಣನವರ್, ಕೆಇಎ ಆಡಳಿತಾಧಿಕಾರಿ ಶಿವಕುಮಾರ ಅವರೂ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.