ADVERTISEMENT

ಜೈಲಿನಲ್ಲಿ ನಟ ದರ್ಶನ್‌ ರಂಪಾಟ..? ಜೈಲಿನ ಅಧಿಕಾರಿಗಳು ಹೇಳುವುದೇನು?

ಬ್ಯಾರಕ್‌ನಲ್ಲಿದ್ದ ನಾಲ್ವರಿಗೆ ಕಾಲಿನಿಂದ ಒದ್ದಿರುವ ಆರೋಪ..

​ಪ್ರಜಾವಾಣಿ ವಾರ್ತೆ
Published 9 ಡಿಸೆಂಬರ್ 2025, 4:34 IST
Last Updated 9 ಡಿಸೆಂಬರ್ 2025, 4:34 IST
<div class="paragraphs"><p>ನಟ ದರ್ಶನ್‌</p></div>

ನಟ ದರ್ಶನ್‌

   

ಸಂಗ್ರಹ ಚಿತ್ರ

ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿ, ನಟ ದರ್ಶನ್‌ ಅವರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದು, ಅವರನ್ನು ಇರಿಸಿರುವ ಬ್ಯಾರಕ್‌ನಲ್ಲಿ ಇತರೆ ಆರೋಪಿಗಳ ಜತೆಗೆ ರಂಪಾಟ ಮಾಡಿಕೊಂಡಿದ್ದಾರೆ ಎನ್ನುವ ವದಂತಿ ಹಬ್ಬಿದೆ. ಈ ಘಟನೆಯನ್ನು ಜೈಲಿನ ಅಧಿಕಾರಿಗಳು ನಿರಾಕರಿಸಿದ್ದಾರೆ.  

ADVERTISEMENT

ಕರ್ನಾಟಕ ಹೈಕೋರ್ಟ್‌ ಮಂಜೂರು ಮಾಡಿದ್ದ ಜಾಮೀನು ಆದೇಶವನ್ನು ಸುಪ್ರೀಂ ಕೋರ್ಟ್‌ ರದ್ದುಗೊಳಿಸಿತ್ತು. ದರ್ಶನ್‌, ಅವರ ಗೆಳತಿ ಪವಿತ್ರಾಗೌಡ ಸೇರಿದಂತೆ ಏಳು ಮಂದಿಯನ್ನು ಆಗಸ್ಟ್‌ 14ರಂದು ಪೊಲೀಸರು ಬಂಧಿಸಿದ್ದರು.

ದರ್ಶನ್, ಅವರ ವ್ಯವಸ್ಥಾಪಕ ಆರ್.ನಾಗರಾಜ್‌, ಕಾರು ಚಾಲಕ ಲಕ್ಷ್ಮಣ್‌, ಉದ್ಯಮಿ ಪ್ರದೂಷ್ ರಾವ್‌ ಹಾಗೂ ಚಿತ್ರದುರ್ಗದ ಆಟೊ ಚಾಲಕರಾದ ಅನುಕುಮಾರ್ ಅಲಿಯಾಸ್ ಅನು, ಜಗದೀಶ್ ಅಲಿಯಾಸ್ ಜಗ್ಗ ಅವರನ್ನು ಜೈಲಿನ ಒಂದೇ ಬ್ಯಾರಕ್‌ನಲ್ಲಿ ಇರಿಸಲಾಗಿದೆ. ದರ್ಶನ್‌ ಅವರು ಆರ್.ನಾಗರಾಜ್‌ ಹೊರತು ಪಡಿಸಿ ಉಳಿದವರ ಜತೆಗೆ ಗಲಾಟೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ಕಾಲಿನ ಒದ್ದರೇ ದರ್ಶನ್‌?

ದರ್ಶನ್ ಅವರು ನಟಿಸಿರುವ ಡೆವಿಲ್‌ ಚಿತ್ರವು ಡಿಸೆಂಬರ್ 11ರಂದು ಬಿಡುಗಡೆ ಆಗುತ್ತಿದೆ. ಕೆಲವು ದಿನಗಳಿಂದ ಬೆಳಿಗ್ಗೆ ಬೇಗನೇ ಎಳುತ್ತಿದ್ದು, ಇತರೆ ಆರೋಪಿಗಳನ್ನು ಕಾಲಿನಿಂದ ಒದ್ದು ಎಬ್ಬಿಸುತ್ತಿದ್ದಾರೆ. ಅಲ್ಲದೇ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾರೆ ಎಂದು ಹೇಳಲಾಗಿದೆ.

‘ಎರಡು ದಿನದ ಹಿಂದೆ ಜಗದೀಶ್ ಮತ್ತು ದರ್ಶನ್ ನಡುವೆ ದೊಡ್ಡ ಜಗಳ ನಡೆದಿದೆ. ಇಬ್ಬರ ಜಗಳ ಜೋರಾಗುತ್ತಿದ್ದಂತೆ ಜೈಲು ಸಿಬ್ಬಂದಿ ಹಾಗೂ ಇತರೆ ಕೈದಿಗಳು ಜಗಳ ಬಿಡಿಸಿದ್ದಾರೆ. ಘಟನೆ ನಡೆದ ಮೇಲೆ ಅನುಕುಮಾರ್ ಹಾಗೂ ಜಗದೀಶ್ ಬೇರೆ ಬ್ಯಾರಕ್‌ಗೆ ವರ್ಗಾವಣೆ ಮಾಡಿ. ಇಲ್ಲವೇ ಚಿತ್ರದುರ್ಗದ ಜೈಲಿಗೆ ಸ್ಥಳಾಂತರ ಮಾಡಿ ಎಂಬುದಾಗಿ ಜೈಲಿನ ಅಧಿಕಾರಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ’ ಎಂದು ಮೂಲಗಳು ಹೇಳಿವೆ.

ಪರಿಶೀಲಿಸಲು ಸೂಚನೆ

‘ದರ್ಶನ್ ಅವರನ್ನು ಇರಿಸಲಾಗಿರುವ ಬ್ಯಾರಕ್‌ನಲ್ಲಿ ಗಲಾಟೆ ಆಗಿರುವ ಮಾಹಿತಿ ಇಲ್ಲ. ಗಲಾಟೆ ನಡೆದಿರುವ ಬಗ್ಗೆ ವದಂತಿ ಹಬ್ಬಿರುವ ಕಾರಣಕ್ಕೆ ಪರಿಶೀಲನೆ ನಡೆಸಲಾಗು ತ್ತಿದೆ. ಜೈಲಿನ ಅಧಿಕಾರಿಗಳಿಗೂ ಸೂಚನೆ ನೀಡಲಾಗಿದೆ’ ಎಂದು ಕಾರಾಗೃಹದ ಎಸ್‌.ಪಿ ಅಂಶುಕುಮಾರ್ ತಿಳಿಸಿದ್ದಾರೆ.

‘ಕಳೆದ ಕೆಲವು ದಿನಗಳಿಂದ ಜೈಲಿನ ವಿವಿಧ ಬ್ಯಾರಕ್‌ಗಳಲ್ಲಿ ಪರಿಶೀಲನೆ ನಡೆಸಲಾಗಿತ್ತು. ಬ್ಯಾರಕ್‌ನಲ್ಲಿ ನಿಷೇಧಿತ ವಸ್ತುಗಳು ಪತ್ತೆ ಆಗಿದ್ದವು. ಮೊಬೈಲ್‌, ಸಿಮ್‌ ಹಾಗೂ ನಗದು ವಶಕ್ಕೆ ಪಡೆದುಕೊಳ್ಳಲಾಗಿತ್ತು. ದರ್ಶನ್‌ ಬ್ಯಾರಕ್‌ನಲ್ಲೂ ಪರಿಶೀಲನೆ ನಡೆಸಲಾಗಿತ್ತು. ಆ ರೀತಿಯ ಘಟನೆ ನಡೆದಿದ್ದರೆ, ಇತರೆ ಆರೋಪಿಗಳು ಮಾಹಿತಿ ನೀಡುತ್ತಿದ್ದರು’ ಎಂದು ಅವರು ಹೇಳಿದ್ದಾರೆ.

ಜೈಲಿನಲ್ಲಿ ಅಕ್ರಮ ತಡೆಗಟ್ಟಲು ಹಾಗೂ ಸುಧಾರಣೆ ತರಲು ಮೊದಲ ಬಾರಿಗೆ ರಾಜ್ಯ ಸರ್ಕಾರವು ಐಪಿಎಸ್ ಅಧಿಕಾರಿ ಅಂಶುಕುಮಾರ್ ಅವರನ್ನು ನೇಮಿಸಿದೆ.

ಕಠಿಣ ನಿಯಮ ಜಾರಿ

ಅತ್ಯಾಚಾರ, ಸರಣಿ ಕೊಲೆಯ ಪಾತಕಿ ಉಮೇಶ್ ರೆಡ್ಡಿ, ಇಸ್ಲಾಮಿಕ್‌ ಸ್ಟೇಟ್‌ (ಐಎಸ್‌) ಭಯೋತ್ಪಾದಕ ಸಂಘಟನೆಯ ಉಗ್ರ ಜುಹಾದ್ ಹಮೀದ್ ಶಕೀಲ್ ಮನ್ನಾ, ದುಬೈನಿಂದ ಚಿನ್ನ ಕಳ್ಳಸಾಗಣೆ ಮಾಡಿದ್ದ ಪ್ರಕರಣದ ಆರೋಪಿ ತರುಣ್ ರಾಜ್‌ ತಾವಿರುವ ಬ್ಯಾರಕ್‌ನಲ್ಲಿ ಮೊಬೈಲ್‌ ಹಿಡಿದು ಮಾತನಾಡುತ್ತಿದ್ದ, ಟಿ.ವಿ ವೀಕ್ಷಣೆ ಮಾಡುತ್ತಿದ್ದ ವಿಡಿಯೊಗಳು ಜಾಲತಾಣದಲ್ಲಿ ಹರಿದಾಡಿದ್ದವು.

ಅದರ ಬೆನ್ನಲ್ಲೇ, ಮಾಂಸ, ಮದ್ಯ ಸೇವಿಸಿ ಜೈಲಿನಲ್ಲಿ ವಿಚಾರಣಾ ಕೈದಿ ಗಳು ನೃತ್ಯ ಮಾಡುತ್ತಿದ್ದ ವಿಡಿಯೊವೊಂದು ಹರಿದಾಡಿತ್ತು. ಇದರ ಬೆನ್ನಲ್ಲೇ ಕಾರಾಗೃಹದಲ್ಲಿ ಕಠಿಣ ನಿಯಮ ಜಾರಿಗೆ ತರಲಾಗಿದೆ. ಪ್ರಭಾವಿ ಕೈದಿಗಳು ಸಹ ಸರದಿಯಲ್ಲೇ ಬಂದು ಊಟ ತೆಗೆದುಕೊಂಡು ಹೋಗುವ ವ್ಯವಸ್ಥೆ ಜಾರಿಗೆ ತರಲಾಗಿದೆ ಎಂದು ಜೈಲಿನ ಮೂಲಗಳು ತಿಳಿಸಿವೆ.

‘ಜೈಲಿನ ಕೈಪಿಡಿಯಂತೆಯೇ ನಿಯಮ ಜಾರಿಗೆ ತರಲಾಗಿದೆ. ತಮ್ಮ ಬ್ಯಾರಕ್‌ ನಲ್ಲಿರುವ ಶೌಚಾಲಯವನ್ನು ಅಲ್ಲಿದ್ದವರೇ ಸ್ವಚ್ಛ ಮಾಡಿಕೊಳ್ಳಬೇಕು. ದರ್ಶನ್‌ ಅವರಿಗೂ ಅದೇ ನಿಯಮ ಅನ್ವಯ ಮಾಡಲಾಗಿದೆ. ಬ್ಯಾರಕ್‌ ಎದುರು ಸಿ.ಸಿ.ಟಿ.ವಿ ಕ್ಯಾಮೆರಾ ಅಳವಡಿಸಲಾಗಿದೆ’ ಎಂದು ಮೂಲಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.