
ಬೆಂಗಳೂರು: ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾದ ಯುವಕನನ್ನು ಲಾಡ್ಜ್ಗೆ ಕರೆದೊಯ್ದ ಯುವತಿ, ಆತನ ಪ್ರಜ್ಞೆ ತಪ್ಪಿಸಿ 58 ಗ್ರಾಂ ಚಿನ್ನಾಭರಣ ದೋಚಿರುವ ಘಟನೆ ಇಂದಿರಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ತಮಿಳುನಾಡಿನ ಅವಿನಾಶ್ ಕುಮಾರ್ ಅವರ ದೂರಿನ ಮೇರೆಗೆ ಕವಿಪ್ರಿಯಾ ಎಂಬಾಕೆ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಬಂಧನಕ್ಕಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.
ಪೀಣ್ಯದ ನಾಗಸಂದ್ರದ ಪೇಯಿಂಗ್ ಗೆಸ್ಟ್ (ಪಿ.ಜಿ)ನಲ್ಲಿ ವಾಸವಾಗಿದ್ದ ಅವಿನಾಶ್, ನಗರದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಎರಡು ತಿಂಗಳ ಹಿಂದೆ ‘ಹ್ಯಾಪನ್ ಆ್ಯಪ್’ ಹೆಸರಿನ ಡೇಟಿಂಗ್ ಆ್ಯಪ್ನಲ್ಲಿ ಯುವತಿಯನ್ನು ಪರಿಚಯಿಸಿಕೊಂಡಿದ್ದರು. ಇಬ್ಬರೂ ಮೊಬೈಲ್ ಸಂಖ್ಯೆ ವಿನಿಮಯ ಮಾಡಿಕೊಂಡು ಮಾತನಾಡುತ್ತಿದ್ದರು. ನವೆಂಬರ್ 1ರಂದು ಇಂದಿರಾನಗರದ ರೆಸ್ಟೋರೆಂಟ್ವೊಂದರಲ್ಲಿ ಇಬ್ಬರು ಭೇಟಿಯಾಗಿ ಮದ್ಯದ ಪಾರ್ಟಿ ಮಾಡಿದ್ದರು ಎಂದು ಪೊಲೀಸರು ತಿಳಿಸಿದ್ಧಾರೆ.
‘ಮದ್ಯ ಸೇವನೆ ಬಳಿಕ ಪಿಜಿಗೆ ಹೋಗಲು ಸಾಧ್ಯವಿಲ್ಲ ಎಂದು ಹೇಳಿದ್ದ ಯುವತಿ, ಲಾಡ್ಜ್ ಒಂದರಲ್ಲಿ ಕೊಠಡಿ ಬುಕ್ ಮಾಡಿದ್ದಳು. ಆನ್ ಲೈನ್ ಮೂಲಕ ಊಟ ತರಿಸಿಕೊಂಡು ಇಬ್ಬರೂ ಸೇವಿಸಿದ್ದರು. ನಂತರ ಯುವತಿಯು ಕೊಟ್ಟ ನೀರು ಕುಡಿದ ಬಳಿಕ ದೂರುದಾರರಿಗೆ ಪ್ರಜ್ಞೆ ತಪ್ಪಿತ್ತು. ಬೆಳಗ್ಗೆ ಎದ್ದು ನೋಡಿದಾಗ ಚಿನ್ನದ ಸರ, ಚಿನ್ನದ ಕೈಬಳೆ ಸೇರಿದಂತೆ 58 ಗ್ರಾಂ ಚಿನ್ನಾಭರಣ, ₹10 ಸಾವಿರ ನಗದನ್ನು ದೋಚಿ ಪರಾರಿಯಾಗಿದ್ದಾಳೆ ಎಂದು ಅವಿನಾಶ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ’ ಎಂದು ಪೊಲೀಸರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.