
ಬೆಂಗಳೂರು: ದಯಾನಂದ ಸಾಗರ್ ಶಿಕ್ಷಣ ಸಂಸ್ಥೆಯಲ್ಲಿ ಸಂಶೋಧನೆ ಮತ್ತು ಸಮುದಾಯ ಕೇಂದ್ರಿತ ನಾವೀನ್ಯತೆಗಳನ್ನು ಉತ್ತೇಜಿಸಲು ಶ್ರೇಷ್ಠತಾ ಕೇಂದ್ರ ಸ್ಥಾಪನೆ ಮಾಡಲಾಗುವುದು ಎಂದು ನೈಸ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಅಶೋಕ್ ಖೇಣಿ ಹೇಳಿದರು.
ದಯಾನಂದ ಸಾಗರ್ ಶಿಕ್ಷಣ ಸಂಸ್ಥೆಯ ಘಟಿಕೋತ್ಸವದಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವಿಯ 4,527 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿ ಅವರು ಮಾತನಾಡಿದರು.
‘ನಾವೀನ್ಯತೆಗೆ ಬದ್ಧತೆ ಹೊಂದಿರುವ ಈ ಸಂಸ್ಥೆಯಲ್ಲಿ ಶ್ರೇಷ್ಠತಾ ಕೇಂದ್ರವನ್ನು ಸ್ಥಾಪಿಸಲಾಗುವುದು. ಸಮಾಜಕ್ಕೆ ಸೇವೆ ಸಲ್ಲಿಸುವಲ್ಲಿ ಸಂಸ್ಥೆಯ ಪಾತ್ರವನ್ನು ಮತ್ತಷ್ಟು ಬಲಪಡಿಸುತ್ತದೆ. ಜಾಗತಿಕವಾಗಿ ಉದ್ಯೋಗಾವಕಾಶಗಳು ಹೆಚ್ಚಿದಂತೆ ಸ್ಪರ್ಧೆಯೂ ಹೆಚ್ಚಿದೆ. ಉದ್ಯೋಗಾವಕಾಶ ಬಳಸಿಕೊಂಡು ಯುವ ಜನರು ದೇಶದ ಆರ್ಥಿಕ ಬೆಳವಣಿಗೆಗೆ ಕೊಡುಗೆ ನೀಡಬೇಕು’ ಎಂದು ಕರೆ ನೀಡಿದರು.
‘ನಗರದಲ್ಲಿ ಹೆಚ್ಚುತ್ತಿರುವ ಜನಸಂಖ್ಯೆಗೆ ಅನುಗುಣವಾಗಿ ಸುಗಮ ಹಾಗೂ ಅಡೆತಡೆಯಿಲ್ಲದ ವಾಹನ ಸಂಚಾರಕ್ಕಾಗಿ ನಮ್ಮ ಸಂಸ್ಥೆಯು ನೈಸ್ ರಸ್ತೆಯನ್ನು ಅಭಿವೃದ್ಧಿಪಡಿಸಿದೆ. ಸಂಸ್ಥೆಯು ಈವರೆಗೂ 43 ಪ್ರಮುಖ ಯೋಜನೆಗಳನ್ನು ಪೂರ್ಣಗೊಳಿಸಿದೆ. ರಸ್ತೆಗಳಲ್ಲಿ ಗುಂಡಿ ಇಲ್ಲದಂತೆ ನಿರ್ವಹಣೆ ಮಾಡಲಾಗುತ್ತಿದೆ’ ಎಂದರು.
ದಯಾನಂದ ಸಾಗರ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಡಿ.ಹೇಮಚಂದ್ರ ಸಾಗರ್, ಉಪಾಧ್ಯಕ್ಷ ಡಾ.ಡಿ.ಪ್ರೇಮಚಂದ್ರ ಸಾಗರ್, ಜಿಯುವಿಐ ಸಂಸ್ಥೆಯ ಸಹ ಸಂಸ್ಥಾಪಕ ಎಸ್.ಪಿ.ಬಾಲಮುರುಗನ್, ಇಂಡೋ–ಜಪಾನ್ ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿಯ ಕಾರ್ಯಕಾರಿ ಸಮಿತಿ ಸದಸ್ಯ ಎಸ್.ಎನ್.ಶಮಂತ್ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.