ADVERTISEMENT

‘ಕೆರೆ ಒತ್ತುವರಿ ತೆರವಿಗೆ ವಿಳಂಬ ಬೇಡ’

​ಪ್ರಜಾವಾಣಿ ವಾರ್ತೆ
Published 14 ಜೂನ್ 2021, 22:16 IST
Last Updated 14 ಜೂನ್ 2021, 22:16 IST

ಬೆಂಗಳೂರು: ‘ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಎಲ್ಲ ಕೆರೆಗಳ ಸರ್ವೆ ಕಾರ್ಯವನ್ನು ಶೀಘ್ರವೇ ಕೈಗೊಳ್ಳಿ. ಒತ್ತುವರಿ ಕಂಡುಬಂದರೆ ಕೂಡಲೇ ತೆರವುಗೊಳಿಸಿ’ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ.ಮಂಜುನಾಥ್‌ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಕೆರೆಗಳ ಅಭಿವೃದ್ಧಿ ಕುರಿತು ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳ ಜೊತೆ ಸೋಮವಾರ ಚರ್ಚಿಸಿದರು.

‘ಎಲ್ಲ ಕೆರೆಗಳ ಗಡಿ ಗುರುತಿಸುವ ಕೆಲಸ ಆಗಬೇಕು. ಅವುಗಳ ಸುತ್ತ ಇರುವ ಮೀಸಲು ವಲಯದಲ್ಲಿ ಕಟ್ಟಡ ನಿರ್ಮಾಣ
ಹಾಗೂ ಇತರ ಕಾಮಗಾರಿಗಳಿಗೆ ಅನುಮತಿ ನೀಡುವಂತಿಲ್ಲ. ಈ ಬಗ್ಗೆ ಗಮನಹರಿಸಿ. ಕೆರೆಗಳಿಗೆ ನೀರು ಪೂರೈಸುವ ರಾಜಕಾಲುವೆಗಳ ಒತ್ತುವರಿಯನ್ನೂ ಕೂಡಲೇ ತೆರವುಗೊಳಿಸಿ. ಒಂದು ದಿನದೊಳಗೆ ಈ ಬಗ್ಗೆ ವೇಳಾಪಟ್ಟಿ ಸಿದ್ಧಪಡಿಸಿ’ ಎಂದು ಸೂಚಿಸಿದರು.

ADVERTISEMENT

‘ಜಿಲ್ಲೆಯಲ್ಲಿ ಒಟ್ಟು 836 ಕೆರೆಗಳಿವೆ. ಈ ಪೈಕಿ ಬಿಬಿಎಂಪಿ ವ್ಯಾಪ್ತಿಯಲ್ಲಿ 204, ಸಣ್ಣ ನೀರಾವರಿ ಇಲಾಖೆ ವ್ಯಾಪ್ತಿಯಲ್ಲಿ 46, ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ 421 ಕೆರೆಗಳು ಇವೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಹಾಗೂ ಅರಣ್ಯ ಇಲಾಖೆ ವ್ಯಾಪ್ತಿಯಲ್ಲಿ ಕ್ರಮವಾಗಿ ಐದು ಹಾಗೂ ಒಂದು ಕೆರೆ ಇವೆ. ಉಳಿದ ಕೆರೆಗಳು ಯಾವ ಇಲಾಖೆಗಳ ವ್ಯಾಪ್ತಿಗೆ ಸೇರುತ್ತವೆ ಎಂಬುದನ್ನು ಪತ್ತೆಹಚ್ಚಲು ಶೀಘ್ರವೇ ಸಮೀಕ್ಷೆ ಕೈಗೊಳ್ಳಿ’ ಎಂದು ಪಂಚಾಯತ್ ರಾಜ್ ಇಲಾಖೆಯ ಎಂಜಿನಿಯರಿಂಗ್‌ ವಿಭಾಗದ ಅಧಿಕಾರಿಗಳಿಗೆ ನಿರ್ದೇಶಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಂಗಪ್ಪ, ಹೆಚ್ಚುವರಿ ಜಿಲ್ಲಾಧಿಕಾರಿ ಅನಿತಾ ಲಕ್ಷ್ಮಿ, ಉತ್ತರ ವಿಭಾಗಾಧಿಕಾರಿ ರಂಗನಾಥ್, ದಕ್ಷಿಣ ಉಪವಿಭಾಗಾಧಿಕಾರಿ ಶಿವಣ್ಣ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಶ್ರೀನಿವಾಸ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.