ಬೆಂಗಳೂರು: ‘ದೆಹಲಿಯಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದ ಬಳಿಕ ಆಡಳಿತದಲ್ಲಿ ಭ್ರಷ್ಟಾಚಾರ ನಿರ್ಮೂಲನೆಯಾಗಿದೆ. ಅದೇ ಮಾದರಿಯಲ್ಲಿ ರಾಜ್ಯದಲ್ಲೂ ಪಾರದರ್ಶಕತೆ ತರುವುದು ನಮ್ಮ ಗುರಿ’ ಎಂದು ಆಮ್ ಆದ್ಮಿ ಪಕ್ಷ ತಿಳಿಸಿದೆ.
ಪಕ್ಷದ ರಾಜ್ಯ ವೀಕ್ಷಕ ರೋಮಿ ಭಾಟಿ ಅವರು ಬಿಬಿಎಂಪಿ ಚುನಾವಣಾ ಪೂರ್ವಭಾವಿ ಸಭೆಯನ್ನು ಭಾನುವಾರ ನಡೆಸಿದರು.
‘ಆರು ವರ್ಷಗಳ ಹಿಂದೆ ದೆಹಲಿಯಲ್ಲಿ ಅಧಿಕಾರಕ್ಕೆ ಬಂದ ನಮ್ಮ ಪಕ್ಷ ಆರೋಗ್ಯ ಮೂಲಸೌಕರ್ಯ, ಶಿಕ್ಷಣ ಕ್ಷೇತ್ರದಲ್ಲಿ ಆಮೂಲಾಗ್ರ ಬದಲಾವಣೆಯನ್ನು ತಂದಿದೆ. ಆಡಳಿತದಲ್ಲಿ ಭ್ರಷ್ಟಾಚಾರ ನಿರ್ಮೂಲನೆ ಮಾಡಿದೆ. ತೆರಿಗೆ ವ್ಯವಸ್ಥೆಯನ್ನು ಸರಳಗೊಳಿಸಿ, ಆದಾಯ ಸೋರಿಕೆ ತಡೆದಿದೆ. ಇದರಿಂದ ಸರ್ಕಾರದ ಬೊಕ್ಕಸಕ್ಕೆ ಆದಾಯ ಸರಾಗವಾಗಿ ಹರಿದುಬರುತ್ತಿದೆ’ ಎಂದು ರೋಮಿ ಭಾಟಿ ತಿಳಿಸಿದರು.
‘ದೆಹಲಿ ಮಾದರಿಯನ್ನು ಮುಂದಿಟ್ಟುಕೊಂಡು ಬಿಬಿಎಂಪಿ ಚುನಾವಣೆ ಎದುರಿಸುತ್ತೇವೆ. ಸ್ಥಳೀಯ ಸಮಸ್ಯೆಗಳು ಮತ್ತು ಅವುಗಳಿಗೆ ಪರಿಹಾರವನ್ನು ಸೂಚಿಸುವಂತಹ ಕಾರ್ಯಸೂಚಿಯನ್ನು ಸಿದ್ಧಪಡಿಸಿ, ಮತದಾರರ ಬಳಿಗೆ ಹೋಗುವಂತೆ ನಮ್ಮ ನಾಯಕರಿಗೆ ಮತ್ತು ಕಾರ್ಯಕರ್ತರಿಗೆ ಸೂಚಿಸಿದ್ದೇವೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದ ಎಲ್ಲ ಕ್ಷೇತ್ರಗಳಲ್ಲಿಯೂ ಪಕ್ಷ ಸ್ಪರ್ಧಿಸಲಿದೆ’ ಎಂದರು.
ಪಕ್ಷದ ಬೆಂಗಳೂರು ನಗರ ಘಟಕದ ಅಧ್ಯಕ್ಷ ಮೋಹನ್ ದಾಸರಿ, ‘ಬಿಬಿಎಂಪಿ ಚುನಾವಣೆ ಜೊತೆಗೆ ವಿಧಾನಸಭಾ ಚುನಾವಣೆಗಳಿಗೂ ಕಾರ್ಯತಂತ್ರ ರೂಪಿಸುತ್ತಿದ್ದೇವೆ. ಪಕ್ಷವನ್ನು ಬೆಂಬಲಿಸುವವರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.