ಬೆಂಗಳೂರು: ವಂಚನೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿ ಇರುವ ಐಶ್ವರ್ಯಾ ಗೌಡ ಅಲಿಯಾಸ್ ನವ್ಯಶ್ರೀ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಕೋರಿ, ಮಾಜಿ ಸಂಸದ ಡಿ.ಕೆ.ಸುರೇಶ್ ಅವರು ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ ಅವರಿಗೆ ಪತ್ರ ಬರೆದಿದ್ದಾರೆ.
‘ಐಶ್ವರ್ಯಾ ಗೌಡ ಅವರು ನನ್ನ ಹೆಸರು ದುರ್ಬಳಕೆ ಮಾಡಿಕೊಂಡು ಹಲವರಿಗೆ ಚಿನ್ನದ ಆಭರಣ ಹಾಗೂ ಹಣವನ್ನು ವಂಚಿಸುತ್ತಿರುವುದಾಗಿ ಮಾಧ್ಯಮಗಳಲ್ಲಿ ವರದಿ ಬಿತ್ತರವಾಗಿದೆ. ವಂಚನೆ ನಡೆಸಿರುವವರ ವಿರುದ್ಧ ಕ್ರಮ ತೆಗೆದುಕೊಳ್ಳಿ. ಅಲ್ಲದೇ ಮುಂದಿನ ದಿನಗಳಲ್ಲಿ ಈ ರೀತಿ ಯಾರಿಗೂ ಅನ್ಯಾಯ ಆಗದಂತೆ ಕ್ರಮ ಕೈಗೊಳ್ಳಿ’ ಎಂದು ಪತ್ರದಲ್ಲಿ ಕೋರಿದ್ದಾರೆ.
ಡಿ.ಕೆ.ಸುರೇಶ್ ಅವರ ತಂಗಿ ಎಂದು ನಂಬಿಸಿ ಚಿನ್ನ ಪಡೆದು ವಂಚಿಸಿದ ಪ್ರಕರಣದ ಆರೋಪಿಗಳಾದ ಐಶ್ವರ್ಯಾ ಗೌಡ ಹಾಗೂ ಅವರ ಪತಿ ಕೆ.ಎನ್. ಹರೀಶ್ ಅವರನ್ನು ಚಂದ್ರಾಲೇಔಟ್ ಠಾಣೆ ಪೊಲೀಸರು ಶನಿವಾರ ಬಂಧಿಸಿದ್ದರು.
ಆರೋಪಿಗಳು ₹9.82 ಕೋಟಿ ಮೌಲ್ಯದ 14 ಕೆ.ಜಿ. 660 ಗ್ರಾಂ ಚಿನ್ನ ಪಡೆದು ವಂಚಿಸಿದ್ದಾರೆ ಎಂದು ವಾರಾಹಿ ವರ್ಲ್ಡ್ ಆಫ್ ಗೋಲ್ಡ್ ಚಿನ್ನದಂಗಡಿಯ ಮಾಲಕಿ ವನಿತಾ ಎಸ್. ಐತಾಳ್ ಅವರು ಪೊಲೀಸರಿಗೆ ದೂರು ನೀಡಿದ್ದರು. ಇದೇ ಪ್ರಕರಣದಲ್ಲಿ ನಟ ಧರ್ಮ ಅವರ ವಿರುದ್ಧವೂ ಎಫ್ಐಆರ್ ದಾಖಲಾಗಿದ್ದು, ಅವರಿಗೆ ಪೊಲೀಸರು ಶೋಧ ನಡೆಸುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.