ADVERTISEMENT

ಸೇವೆ ಕಾಯಂಗೆ ಅತಿಥಿ ಉಪನ್ಯಾಸಕರ ಆಗ್ರಹ

​ಪ್ರಜಾವಾಣಿ ವಾರ್ತೆ
Published 5 ಸೆಪ್ಟೆಂಬರ್ 2023, 16:22 IST
Last Updated 5 ಸೆಪ್ಟೆಂಬರ್ 2023, 16:22 IST
ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಮಂಗಳವಾರ ನಡೆದ ಅತಿಥಿ ಉಪನ್ಯಾಸಕರ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡ ಆಯನೂರು ಮಂಜುನಾಥ್‌ ಹಾಗೂ ಕಾಳಿಮಠದ ಋಷಿಕೇಶ ಸ್ವಾಮೀಜಿ ಪಾಲ್ಗೊಂಡಿದ್ದರು.
ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಮಂಗಳವಾರ ನಡೆದ ಅತಿಥಿ ಉಪನ್ಯಾಸಕರ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡ ಆಯನೂರು ಮಂಜುನಾಥ್‌ ಹಾಗೂ ಕಾಳಿಮಠದ ಋಷಿಕೇಶ ಸ್ವಾಮೀಜಿ ಪಾಲ್ಗೊಂಡಿದ್ದರು.   

ಬೆಂಗಳೂರು: ಅತಿಥಿ ಉಪನ್ಯಾಸಕರ ಸೇವೆ ಕಾಯಂ ಮಾಡುವುದೂ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ, ರಾಜ್ಯ ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಹಕ್ಕುಗಳ ಹೋರಾಟ ಸಮಿತಿ ನೇತೃತ್ವದಲ್ಲಿ ಅತಿಥಿ ಉಪನ್ಯಾಸಕರು ಮಂಗಳವಾರ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟಿಸಿದರು.

‘ರಾಜ್ಯದ 436 ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಅನೇಕ ವರ್ಷಗಳಿಂದ ಸಾವಿರಾರು ಮಂದಿ ಅತಿಥಿ ಉಪನ್ಯಾಸಕರಾಗಿ ಕೆಲಸ ಮಾಡುತ್ತಿದ್ದೇವೆ. ಎಲ್ಲರೂ ಒಂದೇ ವೃತ್ತಿ ನಂಬಿ ಜೀವನ ನಡೆಸುತ್ತಿದ್ದೇವೆ. ಸೇವೆ ಕಾಯಂ ಮಾಡಿದರೆ ನ್ಯಾಯ ಸಿಕ್ಕಂತೆ ಆಗಲಿದೆ’ ಎಂದು ಪ್ರತಿಭಟನಕಾರರು ಕೋರಿದರು.

ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಅತಿಥಿ ಉಪನ್ಯಾಸಕರ ಸೇವೆ ಕಾಯಂಗೊಳಿಸಲು ಸಚಿವ ಸಂಪುಟದಲ್ಲಿ ನಿರ್ಣಯ ಕೈಗೊಳ್ಳಬೇಕು ಎಂದು ಸಂಘದ ಅಧ್ಯಕ್ಷ ಎಂ.ಬಿ.ನೂರ್‌ ಅಹಮದ್‌ ಕೋರಿದರು.

ADVERTISEMENT

‘12 ತಿಂಗಳೂ ವೇತನ ನೀಡಬೇಕು. ಅಲ್ಲದೇ ತಿಂಗಳಿಗೆ ಒಂದು ರಜಾ ಸೌಲಭ್ಯವನ್ನು ಕಡ್ಡಾಯವಾಗಿ ನೀಡಬೇಕು’ ಎಂದು ಆಗ್ರಹಿಸಿದರು.

‘ನೇಮಕಾತಿ ಆದೇಶದಲ್ಲಿ ಅತಿಥಿ ಉಪನ್ಯಾಸಕರ ಶೋಷಣೆಗೆ ಕಾರಣವಾಗಿರುವ ಷರತ್ತುಗಳನ್ನು ತೆಗೆದು ಹಾಕಬೇಕು. ಪದೇ ಪದೇ ದಾಖಲೆಗಳನ್ನು ಪರಿಶೀಲಿಸದೆ ಶಾಶ್ವತವಾಗಿ ಒಮ್ಮೆ ದಾಖಲಾತಿಗಳ ನೈಜತೆ ಪರಿಶೀಲನೆ ನಡೆಸಬೇಕು’ ಎಂದು ಆಗ್ರಹಿಸಿದರು.

ಮಹಿಳಾ ಉಪನ್ಯಾಸಕರಿಗೆ ವೇತನ ಸಹಿತ ಪ್ರಸೂತಿ ರಜೆ ಮಂಜೂರು ಮಾಡಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಕಾರ್ಯಾಧ್ಯಕ್ಷ ಆರ್‌. ಶಂಕ್ರಾನಾಯ್ಕ ನೆಲ್ಲಿಹಂಕಲು, ಮಹಿಳಾ ಅಧ್ಯಕ್ಷೆ ಶರಣಮ್ಮ ಪಾಟೀಲ್‌, ಮಾಧ್ಯಮ ವಕ್ತಾರ ಮುನಿಯಪ್ಪ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.